ದೇಶದಲ್ಲಿ ಮೂರು ಉತ್ಕೃಷ್ಟ ಸತ್ಯಾಗ್ರಹಗಳು ನಡೆದಿವೆ. ಒಂದು, ಅಂಬೇಡ್ಕರ್ ನೇತೃತ್ವದ ಮಹಾರ್ ಸತ್ಯಾಗ್ರಹ. ಎರಡು, ದಂಡಿ ಉಪ್ಪಿನ ಸತ್ಯಾಗ್ರಹ. ಎರಡನೆಯದು, 2020-21ರ ರೈತ ಹೋರಾಟ. ಇವು ದೇಶ ಕಂಡ ಐತಿಹಾಸಿಕ ಹೋರಾಟಗಳು. ರೈತರು ಒಂದು ವರ್ಷಗಳ ನಿರಂತರ ಹೋರಾಟ ಮಾಡಿ, ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಮಾಡಿದರು. ಇವತ್ತು, ಹಾಸನದಲ್ಲಿ ನಡೆದಿರುವ ಈ ಲೈಂಗಿಕ ಹಗರಣದ ವಿರುದ್ಧದ ಹೋರಾಟವು ಅಂತಹ ಐತಿಹಾಸಿಕವಾಗಿ ಮುನ್ನಡೆಯಬೇಕು ಹೋರಾಟಗಾರ ಎಸ್.ಆರ್ ಹಿರೇಮಠ್ ಹೇಳಿದರು.
ಹಾಸನದಲ್ಲಿ ನಡೆದ ‘ಹೋರಾಟದ ನಡಿಗೆ – ಹಾಸನ ಕಡೆಗೆ’ ಬೃಹತ್ ಹೋರಾಟದಲ್ಲಿ ಅವರು ಮಾತನಾಡಿದರು. “ಹಾಸನವನ್ನು ತಮ್ಮ ‘ತಮ್ಮ ರಿಪಬ್ಲಿಕ್’ ಮಾಡಿಕೊಂಡು, ಪಾಳೆಗಾರಿಕೆ ನಡೆಸುತ್ತಿರುವ ರೇವಣ್ಣ ಕುಟುಂಬದ ಅವನತಿಯಾಗಬೇಕು. ಪಾಳೆಗಾರಿಕೆಯನ್ನು ಕೊನೆಗಾಣಿಸಲು ವ್ಯವಸ್ಥಿತ ಹೋರಾಟ ನಡೆಬೇಕು. ಬಳ್ಳಾರಿಯ ಪಾಳೆಗಾರಿಕೆಯನ್ನು ಮುರಿದಂತೆ, ಹಾಸನದಲ್ಲಿರುವ ಪಾಳೆಗಾರಿಕೆಯನ್ನು ಮುಗಿಸಬೇಕು” ಎಂದರು.
“ಅತ್ಯಾಚಾರ, ಅನ್ಯಾಯ ಮಾಡಿದವರ ವಿರುದ್ಧ ಸಂತ್ರಸ್ತ ಮಹಿಳೆಯರು ಮುಂದೆ ಬಂದು ಹೋರಾಟ ನಡೆಸಬೇಕು. ತಮ್ಮ ಮೇಲಾದ ದೌರ್ಜನ್ಯಗಳ ವಿರುದ್ಧ ಗಟ್ಟಿಯಾಗಿ ಮಾತನಾಡಬೇಕು. ಸರ್ಕಾರ ನಡೆಸುತ್ತಿರುವವರು ಹಾಸನಕ್ಕೆ ಬರಬೇಕು. ಸಂತ್ರಸ್ತೆಯರಿಗೆ ಧೈರ್ಯ ತುಂಬಬೇಕು. ನ್ಯಾಯ ಕೊಡಿಸುವ ಭರವಸೆ ನೀಡಬೇಕು. ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.




