ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಹಾಗೂ ಸಿಬ್ಬಂದಿಗಳ ನಿರ್ಲಕ್ಷ್ಯದಿಂದ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಆಲೂರು ಪಟ್ಟಣದಲ್ಲಿ ನಡೆದಿದ್ದು, ಸ್ಥಳೀಯರಲ್ಲಿ ತೀವ್ರ ಆಕ್ರೋಶ ಹುಟ್ಟಿಸಿದೆ.
ಆಲೂರಿನ ಪ್ರಕೃತಿ ನಗರ ನಿವಾಸಿ ನವೀದ್ ಶರೀಫ್ (49) ಅವರಿಗೆ ನಿನ್ನೆ ರಾತ್ರಿ ಸುಮಾರು 12 ಗಂಟೆ ವೇಳೆಗೆ ಹೃದಯಾಘಾತದ ಲಕ್ಷಣಗಳು ಕಾಣಿಸಿಕೊಂಡಿದ್ದವು. ತಕ್ಷಣವೇ ಕುಟುಂಬದವರು ಅವರನ್ನು ಚಿಕಿತ್ಸೆಗಾಗಿ ಆಲೂರು ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದರೂ, ಆಸ್ಪತ್ರೆಯ ಬಾಗಿಲು ಮುಚ್ಚಿದ್ದ ಕಾರಣ ಒಳಗೆ ಪ್ರವೇಶಿಸಲು ಸಾಧ್ಯವಾಗಲಿಲ್ಲ ಎಂದು ಕುಟುಂಬದವರು ಆರೋಪಿಸಿದ್ದಾರೆ. ಆಸ್ಪತ್ರೆಯಲ್ಲಿ ಹಾಜರಿದ್ದ ಸಿಬ್ಬಂದಿಗಳು ಹಾಗೂ ವೈದ್ಯರು ಸಹಾಯಕ್ಕೆ ಮುಂದೆ ಬರದ ಹಿನ್ನೆಲೆ, ಕುಟುಂಬದವರು ಶರೀಫ್ ಅವರನ್ನು ಹಿಂತಿರುಗಿ ಮನೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಸ್ವಲ್ಪ ಹೊತ್ತಿನಲ್ಲೇ ಅವರು ಮನೆಯಲ್ಲಿ ಪ್ರಾಣಬಿಟ್ಟಿದ್ದಾರೆ.
ಈ ಘಟನೆಗೆ ಖಂಡನೆ ವ್ಯಕ್ತಪಡಿಸಿರುವ ಸ್ಥಳೀಯರು ಮತ್ತು ಶರೀಫ್ ಅವರ ಬಂಧುಗಳು ಆಸ್ಪತ್ರೆಯ ನಿರ್ಲಕ್ಷ್ಯದಿಂದಲೇ ಸಾವು ಸಂಭವಿಸಿದೆ ಎಂದು ಆರೋಪಿಸಿ ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದ್ದಾರೆ. ಅವರು ಆಸ್ಪತ್ರೆಯ ಬಾಗಿಲುಗಳನ್ನು ತೆರೆದು ವೈದ್ಯರನ್ನು ರಾತ್ರಿ ಪಾಳಿಯಲ್ಲಿ ಹಾಜರಿರಿಸಲು ಬೇಡಿಕೆ ಇಟ್ಟಿದ್ದಾರೆ.
ಇದನ್ನೂ ಓದಿ: ಹಾಸನ | ಚನ್ನರಾಯಪಟ್ಟಣ ಬಳಿ ಭೀಕರ ಅಪಘಾತ; ಇಬ್ಬರ ಸಾವು, ಇಬ್ಬರಿಗೆ ಗಂಭೀರ ಗಾಯ
ಪೊಲೀಸರು ಸ್ಥಳಕ್ಕಾಗಮಿಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಘಟನೆಯ ಕುರಿತು ತನಿಖೆ ಆರಂಭವಾಗಿದ್ದು, ಆಸ್ಪತ್ರೆಯ ಸಿಬ್ಬಂದಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.





