ಸಾರಿಗೆ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ನೌಕರನನ್ನು ಪೆಟ್ರೋಲ್ ಸುರಿದು, ಬೆಂಕಿ ಹಚ್ಚಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಆಲೂರು ತಾಲೂಕಿನ ರಾಜನಹಳ್ಳಿ ಗ್ರಾಮದಲ್ಲಿ ಮಂಗಳವಾರ ಸಂಜೆ ಈ ಭಯಾನಕ ಕೃತ್ಯ ನಡೆದಿದೆ. ರಾಜನಹಳ್ಳಿ ಗ್ರಾಮದ ನಿವಾಸಿ ವೀರಪ್ಪ (58) ಕೊಲೆಯಾದವರು.
ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ವೀರಪ್ಪ ವಿರುದ್ಧ ಕೆಲವರು ವೈಷಮ್ಯ ಬೆಳೆಸಿಕೊಂಡಿದ್ದರು. ಅವರೇ ವೀರಪ್ಪ ಅವರನ್ನು ಕೊಲೆ ಮಾಡಿದ್ದಾರೆಂದು ಕುಟುಂಬದ ಸದಸ್ಯರು ಆರೋಪಿಸಿದ್ದಾರೆ.
ಕುಟುಂಬಸ್ಥರ ದೂರಿನ ಆಧಾರದ ಮೇಲೆ ಆಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 10 ಮಂದಿ ವಿರುದ್ಧ ಎಫ್ಐಆರ್ ದಾಖಲಿಸಿರುವ ಪೊಲೀಸರು, ಪ್ರಕರಣದ ತನಿಖೆಗಾಗಿ ವಿಶೇಷ ತಂಡ ರಚಿಸಿದ್ದಾರೆ.




