ನಾಲ್ಕು ಕರಾಳ ಕಾರ್ಮಿಕ ಸಂಹಿತೆಗಳ ಜಾರಿ ನಿಲ್ಲಿಸಿ, ದುಡಿಯುವ ಜನರ ಸ್ವಾಯತ್ತತೆ ಕೆಣಕದಿರಿ ಎಂಬ ಬೇಡಿಕೆಗಳನ್ನಿಟ್ಟುಕೊಂಡು ಜುಲೈ 9 ರಂದು ಅಖಿಲ ಭಾರತ ಕಾರ್ಮಿಕರು ಸಾರ್ವತ್ರಿಕ ಮುಷ್ಕರ ಹಮ್ಮಿಕೊಂಡಿದ್ದು, ಈ ಮುಷ್ಕರಕ್ಕೆ ಸಿಪಿಐಎಂ ಬೆಂಬಲ ಸೂಚಿಸಿದೆ ಎಂದು ಸಿಐಟಿಯು ಹಾಸನ ಜಿಲ್ಲಾಧ್ಯಕ್ಷ ಧರ್ಮೇಶ್ ಮತ್ತು ಎಐಟಿಯುಸಿ ಜಿಲ್ಲಾಧ್ಯಕ್ಷ ಎಂ ಸಿ ಡೋಂಗ್ರೆ ತಿಳಿಸಿದರು.
ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ, “ಅಭಿವೃದ್ಧಿ ಹೆಸರಿನಲ್ಲಿ ಕಾರ್ಪೊರೇಟ್ ಕಂಪನಿಗಳ ಸೇವಕರನ್ನಾಗಿ ಮಾಡಲು ವೇತನ ಸಂಹಿತೆಯಲ್ಲಿ 4 ಕಾನೂನು, ಕೈಗಾರಿಕಾ ಬಾಂಧವ್ಯ ಸಂಹಿತೆಯಲ್ಲಿ 3 ಕಾನೂನು, ಔದ್ಯೋಗಿಕ ಸುರಕ್ಷತೆ, ಆರೋಗ್ಯ ಮತ್ತು ಕೆಲಸದ ಪರಿಸ್ಥಿತಿಗಳ ಸಂಹಿತೆಯಲ್ಲಿ 13 ಕಾನೂನು ಮತ್ತು ಸಾಮಾಜಿಕ ಭದ್ರತಾ ಸಂಹಿತೆಯಲ್ಲಿ 9 ಕಾನೂನು ಸೇರಿದಂತೆ ಒಟ್ಟು 29 ಕಾನೂನುಗಳನ್ನು 4 ಸಂಹಿತೆಗಳಲ್ಲಿ ರೂಪಿಸಲಾಗಿದೆ. ದೇಶದಲ್ಲಿ ಅತಿಹೆಚ್ಚು ಅಸಂಘಟಿತ, ಅನೌಪಚಾರಿಕ ಕಾರ್ಮಿಕರನ್ನು ಕಾನೂನುಗಳಡಿಯಲ್ಲಿ ತರಬೇಕು ಮತ್ತು 600 ರೂ ಒಂದು ದಿನದ ವೇತನ ನಿಗದಿ ಮಾಡಬೇಕೆಂಬ ಕೇಂದ್ರ ಕಾರ್ಮಿಕ ಸಂಘಟನೆಗಳ ಬೇಡಿಕೆಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ. ವೇತನ ಸಂಹಿತೆಯಲ್ಲಿ ಕನಿಷ್ಠ ವೇತನ, ನ್ಯಾಯ ಸಮ್ಮತ ಮತ್ತು ಜೀವಿತ ವೇತನಗಳನ್ನು ನಿಗದಿ ಮಾಡುವ ಅಂಶಗಳನ್ನು ಒಳಗೊಳ್ಳುವ ಬದಲಿಗೆ 187 ರೂ. ನೆಲಮಟ್ಟದ ಕೂಲಿಯನ್ನು ನಿರ್ದಿಷ್ಟಗೊಳಿಸಿದ್ದರಿಂದ ಇನ್ನು ಮುಂದೆ ಕನಿಷ್ಠ ವೇತನ ಹೆಚ್ಚಳಗಳಿಗೆ ಪೆಟ್ಟು ಬೀಳುತ್ತದೆ. ಇನ್ನು ಮುಂದೆ 18 ಸಾವಿರಕ್ಕಿಂತ ಹೆಚ್ಚು ವೇತನ ಪಡೆಯುವವರು ಸೂಪರ್ವೈಸರ್ಗಳು, ಅಪ್ರೆಂಟೀಸ್ಗಳು, 40 ಕಾರ್ಮಿಕರಿದ್ದು ವಿದ್ಯುತ್ರಹಿತ ಉದ್ಯಮಗಳಲ್ಲಿರುವ ಕಾರ್ಮಿಕರು 50ಕ್ಕಿಂತ ಕಡಿಮೆ ಗುತ್ತಿಗೆ ಕಾರ್ಮಿಕರನ್ನು ಹೊಂದಿರುವ ಗುತ್ತಿಗೆದಾರರು ಲೈಸೆನ್ಸ್ ತೆಗೆದುಕೊಳ್ಳಬೇಕಿಲ್ಲ. ಇದರಿಂದಾಗಿ ಭಾರತದ 70% ಕಾರ್ಮಿಕರಿಗೆ ಕಾರ್ಮಿಕ ಕಾನೂನುಗಳು ಅನ್ವಯವಾಗುವುದಿಲ್ಲ” ಎಂದು ಧರ್ಮೇಶ್ ಹೇಳಿದರು.
“100ಕ್ಕಿಂತ ಹೆಚ್ಚು ಕಾರ್ಮಿಕರಿದ್ದರೆ ಕಾರ್ಖಾನೆಗಳ ಲೇಆಫ್, ರಿಟ್ರಿಂಚ್ಮೆಂಟ್ ಮತ್ತು ಕಾರ್ಖಾನೆ ಮುಚ್ಚುವಿಕೆಗೆ ಸರ್ಕಾರದ ಪೂರ್ವನುಮತಿ ಪಡೆಯಬೇಕಿತ್ತು. ಈಗ 300 ಕಾರ್ಮಿಕರಿಗೆ ಹೆಚ್ಚಿಸಲಾಗಿದೆ. ಇದರಿಂದ ಯಾವಾಗ ಬೇಕಾದರೂ ಕಾರ್ಖಾನೆ ತೆರೆಯಬಹುದು. ಬೇಡದಿದ್ದರೆ ಮುಚ್ಚಬಹುದಾದ ಸ್ವಾತಂತ್ರ್ಯವನ್ನು ಮಾಲೀಕರಿಗೆ ಕೊಡಲಾಗಿದೆ. ಬೇಡಿಕೆಗಳ ಪಟ್ಟಿ, ಮುಷ್ಕರ ನೋಟಿಸ್ ನೀಡಿದ ಕೂಡಲೇ ಸಂಧಾನ ಪ್ರಕ್ರಿಯೆ ಪ್ರಾರಂಭವಾಗುತ್ತದೆ. ರಾಜಿ ಸಂಧಾನ ನಡೆಯುವಾಗ ಬೇಡಿಕೆಗಳು ಈಡೇರದಿದ್ದರೂ ಮುಷ್ಕರ ಮಾಡುವ ಹಾಗಿಲ್ಲ, ಮಾಡಿದರೆ ಅದನ್ನು ಕಾನೂನು ಬಾಹಿರ ಮುಷ್ಕರ ಎಂದು ಪರಿಗಣಿಸಿ ಮುಷ್ಕರ ಮಾಡಿದವರನ್ನು, ಮುಷ್ಕರಕ್ಕೆ ಬೆಂಬಲಿಸಿದವರಿಗೂ ಜೈಲು, ಜಾಮೀನು ರಹಿತ ಕೇಸುಗಳು, ದಂಡ, ಕೆಲಸದ ನಿರಾಕರಣೆ ಮಾಡುವ ಹಕ್ಕನ್ನು ಮತ್ತು ಕಾರ್ಮಿಕ ಸಂಘದ ನೊಂದಾವಣಿಯನ್ನು ರದ್ದುಗೊಳಿಸುವ ಅಂಶಗಳನ್ನು ಈ ಸಂಹಿತೆಗಳಲ್ಲಿ ತರಲಾಗಿದೆ” ಎಂದು ಹೇಳಿದರು.
“ಒಡಂಬಡಿಕೆಗಳಿಗೂ ತಿಲಾಂಜಲಿ ನೀಡಿ ಎಲ್.ಐ.ಸಿ. ಯನ್ನು ಕಡೆಗಣಿಸುವ ಮುಖಾಂತರ ಮೋದಿ ಸರ್ಕಾರ ತನ್ನ ಸರ್ವಾಧಿಕಾರವನ್ನು ಪ್ರದರ್ಶಿಸುತ್ತಿದೆ. ಕಾರ್ಮಿಕರು ಮಾಡುವ ಮುಷ್ಕರವನ್ನು ಸಂಘಟಿತ ಅಪರಾಧ ಎನ್ನುವ ಸರ್ಕಾರ ಫ್ಯಾಕ್ಟರಿ ಮತ್ತು ಬಾಯ್ಲರ್ ಕಾಯ್ದೆ, ಅರಣ್ಯ ಕಾಯ್ದೆ, ಚಹಾ ಕಾಯ್ದೆ, ರಬ್ಬರ್ ಕಾಯ್ದೆ ಸೇರಿದಂತೆ ಹಲವಾರು ಔಷಧ ವಲಯಗಳಿಗೆ ಸಂಬಂಧಿಸಿದ 41 ಕಾನೂನುಗಳಡಿಯಲ್ಲಿ 180 ಅಪರಾಧಗಳಿಂದ ಜನಾವಶ್ಯಕ ಕಾಯ್ದೆಯ ನಿಬಂಧನೆಗಳ ಪ್ರಕಾರ ಮಾಲಿಕರನ್ನು ಮುಕ್ತಗೊಳಿಸಿದೆ. ಸರ್ಕಾರದ ಒಡೆತನದಲ್ಲಿದ್ದ ರಸ್ತೆಯ ಖಾಸಗೀಕರಣ, ವಿದ್ಯುಚ್ಛಕ್ತಿ, ಪೆಟ್ರೋಲ್, ಡೀಸಲ್, ಗ್ಯಾಸ್ನ್ನು ಉತ್ಪಾದಿಸುವ ಘಟಕಗಳು, ಮಿಲಿಟರಿಗೆ ಅಗತ್ಯ ಪರಿಕರಣಗಳನ್ನು ಉತ್ಪಾದಿಸುವ ಕಾರ್ಖಾನೆಗಳು, ವಿಮಾನ, ರೈಲ್ವೆ, ಬಸ್ಗಳ ಉಪಕರಣಗಳನ್ನು ಉತ್ಪಾದಿಸುವ ಎಲ್ಲಾ ಸಾರ್ವಜನಿಕ ಕೈಗಾರಿಕೆಗಳು, ಸ್ಟೀಲ್, ಉಕ್ಕು, ಕಲ್ಲಿದ್ದಲನ್ನು ಉತ್ಪಾದಿಸುವ ಕಾರ್ಖಾನೆಗಳು, ಬ್ಯಾಂಕ್, ಆರ್ಥಿಕ ಸೇವೆಗಳನ್ನು ಖಾಸಗೀಕರಿಸಲು, ವಿದೇಶಿ ಬಂಡವಾಳಕ್ಕೆ ಅವಕಾಶ ನೀಡಿದ್ದರ ಪರಿಣಾಮ ಒಟ್ಟು ದೇಶದ ಆರ್ಥಿಕ ಸಾರ್ವಭೌಮತೆಗೆ ಧಕ್ಕೆ ತರಲಾಗುತ್ತಿದೆ. ಈ ವಲಯಗಳಲ್ಲಿರುವ ಕಾರ್ಪೊರೇಟ್ ಬಂಡವಾಳಗಾರರ ಮಿಗುತಾಯ ಮೌಲ್ಯವನ್ನು ಹೆಚ್ಚಿಸಲು ಕಾರ್ಮಿಕರ ಬೆನ್ನಮೂಳೆಯನ್ನು 4 ಸಂಹಿತೆಗಳ ಮುಖಾಂತರ ಮುರಿಯಲಾಗುತ್ತಿದೆ” ಎಂದರು.
ಕಾರ್ಮಿಕರ ಹಕ್ಕುಗಳುನ್ನು ಮೊಟಕುಗೊಳಿಸಿ, ಕಾರ್ಮಿಕರನ್ನು ಗುಲಾಮರನ್ನಾಗಿಸಲು ಕೇಂದ್ರದ ನರೇಂದ್ರ ಮೋದಿ ಸರ್ಕಾರ ಜಾರಿಗೆ ತರಲು ಹೊರಟಿರುವ ನಾಲ್ಕು ಕಾರ್ಮಿಕ ಸಂಹಿತೆಗಳ ವಿರುದ್ಧ, ಕನಿಷ್ಟ ಕೂಲಿ ಜಾರಿಗಾಗಿ, ಗುತ್ತಿಗೆ ಕಾರ್ಮಿಕ ಪದ್ದತಿ ರದ್ದತಿಗಾಗಿ, ಕೆಲಸದ ಅವಧಿ ಹೆಚ್ಚಳದ ವಿರುದ್ಧ ಇನ್ನೂ ಹಲವು ಬೇಡಿಕೆಗಳಿಗಾಗಿ ಕೇಂದ್ರ ಕಾರ್ಮಿಕ ಸಂಘಟನೆಗಳು ನಡೆಸುತ್ತಿರುವ ಅಖಿಲ ಭಾರತ ಸಾರ್ವತ್ರಿಕ ಮುಷ್ಕರಕ್ಕೆ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್ವಾದಿ) ಹಾಸನ ಜಿಲ್ಲಾ ಸಂಘಟನಾ ಸಮಿತಿ ಸಂಪೂರ್ಣವಾಗಿ ಬೆಂಬಲಿಸುತ್ತದೆ ಮತ್ತು ಈ ಮುಷ್ಕರವನ್ನು ಯಶಸ್ವಿಗೊಳಿಸಲು ಪಕ್ಷದ ಕಾರ್ಯಕರ್ತರು ಸಂಪೂರ್ಣ ತೊಡಗಿಸಿಕೊಳ್ಳುವಂತೆ ಕರೆ ನೀಡುತ್ತದೆ ಎಂದು ಕಾರ್ಯದರ್ಶಿ ನವೀನ್ ಕುಮಾರ್ ಪತ್ರಿಕಾ ಪ್ರಕಟಣೆ ಮೂಲಕ ಹೇಳಿದ್ದಾರೆ.
ಇದನ್ನೂ ಓದಿ: ಹಾಸನ | ಅಧಿಕಾರಿಗಳು ಸೇವಾ ಭಾವದಿಂದ ಕರ್ತವ್ಯ ನಿರ್ವಹಿಸಿ: ಸಚಿವ ಜಾರ್ಜ್
ದೇಶದ ಸಂಪತ್ತನ್ನು ಉತ್ಪಾದಿಸಲು ತಮ್ಮ ಬೆವರನ್ನು ಹರಿಸಿ ದುಡಿಮೆ ಮಾಡುವ ಕಾರ್ಮಿಕರು ಅವರದ್ದೇ ಹೋರಾಟಗಳಿಂದ ಪಡೆದ ಹಕ್ಕುಗಳನ್ನು ಸಂಪೂರ್ಣವಾಗಿ ಇಲ್ಲವಾಗಿಸಿ, ಲಾಭಕೋರ ಮತ್ತು ಶೋಷಣೆಯ ಪ್ರಮುಖ ಉದ್ದೇಶವನ್ನು ಹೊಂದಿರುವ ಮಾಲೀಕರಿಗೆ, ಕಾರ್ಪೋರೇಟ್ ಕಂಪನಿಗಳಿಗೆ ಪೂರಕವಾಗಿ ಕಾರ್ಮಿಕರ ವಿರೋಧಿ ನೀತಿಯನ್ನು ಕೇಂದ್ರ ಸರ್ಕಾರ ಜಾರಿಗೆ ತರುತ್ತಿರುವುದು ಜನವಿರೋಧಿಯಾಗಿದೆ.
ಈ ಮುಷ್ಕರವನ್ನು ಬೆಂಬಲಿಸಿ ಸಂಯುಕ್ತ ಕಿಸಾನ್ ಮೋರ್ಚಾ ರೈತರ ನಿರ್ಧಿಷ್ಟ ಬೇಡಿಕೆಗಳಾದ ಕೃಷಿ ಉತೊನ್ನಗಳಿಗೆ ಬೆಂಬಲ ಬೆಲೆಯನ್ನು ಡಾ.ಎಂ.ಎಸ್.ಸ್ವಾಮಿನಾಥ್ ಆಯೋಗದ ಶಿಫಾರಸ್ಸಿನಂತೆ ಕಾನೂನಾತ್ಮಕ ಶಾಸನವಾಗಿಸಬೇಕು, ವಿದ್ಯುತ್ ಖಾಸಗೀಕರಣ ಮಸೂದೆ ವಾಪಸ್ ಪಡೆಯಬೇಕು, ಕಾರ್ಪೋರೇಟ್ ಕೃಷಿ ಜಾರಿಯಾಗಬಾರದು ಮತ್ತು ಅಭಿವೃದ್ಧಿಯ ಹೆಸರಿನಲ್ಲಿ ಫಲವತ್ತಾದ ರೈತರ ಕೃಷಿ ಯೋಗ್ಯ ಭೂಮಿಯನ್ನು ಬಲವಂತವಾಗಿ ಭೂಸ್ವಾದೀನದ ಮಾಡುವ ಪ್ರಕ್ರಿಯೆಯನ್ನು ಕೈಬಿಡಬೇಕಂದು ಆಗ್ರಹಿಸಿರುವ ಬೇಡಿಕೆಗಳನ್ನು ಸಿಪಿಐಎಂ ಸಂಪೂರ್ಣ ಬೆಂಬಲಿಸುತ್ತದೆ. ಮತ್ತು ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಯ ರೈತರು ತಮ್ಮ 1777 ಎಕ್ಕರೆ ಭೂಮಿಯನ್ನು ಉಳಿಸಲು ಕಳೆದ ಮೂರು ವರ್ಷಗಳಿಂದ ನಡೆಸುತ್ತಿರುವ ಹೋರಾಟವನ್ನು ಸಿಪಿಐಎಂ ಬೆಂಬಲಿಸುತ್ತದೆ.
ಪತ್ರಿಕಾಗೋಷ್ಠಿಯಲ್ಲಿ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಬಿ. ಪುಷ್ಪ, ಅಂಗನವಾಡಿ ಕಾರ್ಯಕರ್ತೆಯರ ಸಂಘದ ಜಿಲ್ಲಾಧ್ಯಕ್ಷೆ ಎಸ್.ಎನ್. ಲಕ್ಷ್ಮಿ, ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಅರವಿಂದ್, ಎಐಟಿಯುಸಿ ಮುಖಂಡರಾದ ನಾಗರತ್ನ, ಪ್ಲಾಂಟೇಷನ್ ಕಾರ್ಮಿಕರ ಸಂಘದ ಕಾರ್ಯದರ್ಶಿ ಸೌಮ್ಯ ಹಾಗೂ ಇತರರು ಉಪಸ್ಥಿತರಿದ್ದರು.





