ಭಾರತವು ವೈವಿಧ್ಯತೆಯಲ್ಲೂ ಏಕತೆ ಹೊಂದಿರುವ ದೇಶವಾಗಿದ್ದು, ಈ ಭಾವನೆಯನ್ನು ಯುವಜನರ ಮೂಲಕ ಸಮಾಜಕ್ಕೆ ತಲುಪಿಸುವ ಉದ್ದೇಶದಿಂದ ರಾಷ್ಟ್ರೀಯ ಏಕತಾ ಶಿಬಿರ ಆಯೋಜಿಸಲಾಗಿದೆ. ಹಾಸನ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಬಾಲ್ಯ ವಿವಾಹ, ಬಾಲ ಗರ್ಭೀಣಿ ಹಾಗೂ ಪೋಕ್ಸೊ ಪ್ರಕರಣಗಳ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದ್ದು, ಇಂತಹ ಸಾಮಾಜಿಕ ಅನಿಷ್ಟಗಳನ್ನು ತಡೆಯಲು ಬೀದಿ ನಾಟಕಗಳ ಮೂಲಕ ಸಂದೇಶ ನೀಡಲಾಗುತ್ತಿದೆ. ಜತೆಗೆ ಹಾಸನವನ್ನು ಬಾಲ್ಯ ವಿವಾಹ ಮುಕ್ತ ಜಿಲ್ಲೆಯಾಗಿ ಘೋಷಿಸುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಕೆ ಎಸ್ ಲತಾಕುಮಾರಿ ಹೇಳಿದರು.
ಹಾಸನ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಹಿಮ್ಸ್ ಸಂಸ್ಥೆಯ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ, ಭಾರತ ಸರ್ಕಾರ ಹಾಗೂ ಪ್ರಾಂತೀಯ ನಿರ್ದೇಶನಾಲಯ ಬೆಂಗಳೂರು ಇವರ ಆಶ್ರಯದಲ್ಲಿ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ರಾಷ್ಟ್ರೀಯ ಭಾವೈಕ್ಯತಾ ಶಿಬಿರದ ಬಾಲ್ಯ ವಿವಾಹ ಮತ್ತು ಬಾಲ ಗರ್ಭಿಣಿ ಕುರಿತ ಜಾಗೃತಿ ಕಿರುನಾಟಕಕ್ಕೆ ಚಾಲನೆ ನೀಡಿ ಮಾತನಾಡಿದರು.

“ದೇಶದ ವಿವಿಧ ರಾಜ್ಯಗಳಿಂದ ಸುಮಾರು 200 ಮಂದಿ ಯುವಜನರು ಭಾಗವಹಿಸಿರುವುದು ಜಿಲ್ಲೆಗೆ ಹೆಮ್ಮೆಯ ವಿಚಾರ. ಜನವರಿ 5ರಿಂದ 11ರವರೆಗೆ ನಡೆಯಲಿರುವ ಶಿಬಿರದಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ” ಎಂದು ಹೇಳಿದರು.
ಈ ಸುದ್ದಿ ಓದಿದ್ದೀರಾ? ಮಂಗಳೂರು ನಗರ ಪಾಲಿಕೆ ಎದುರು ಕೊರಗರ ಪ್ರತಿಭಟನೆ: ಸಮಸ್ಯೆ ಆಲಿಸದ ಅಧಿಕಾರಿಗಳ ವಿರುದ್ಧ ಮುನೀರ್ ಕಾಟಿಪಳ್ಳ ಕಿಡಿ
ಕಾರ್ಯಕ್ರಮದಲ್ಲಿ ಸರ್ಕಾರದ ಜಿಲ್ಲಾ ಉಸ್ತುವಾರಿ ನವೀನ್ ರಾಜ್ ಸಿಂಗ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಬಿ ಆರ್ ಪುರ್ಣಿಮಾ, ಹಿಮ್ಸ್ ರಾಷ್ಟ್ರೀಯ ಭಾವೈಕ್ಯತಾ ಶಿಬಿರಾಧಿಕಾರಿ ನಿಚಿತ ಕುಮಾರಿ, ತೇಜಸ್ವಿನಿ, ಡಾ. ಪ್ರಕಾಶ್, ಶಶಿಧರ್ ಸೇರಿದಂತೆ ಇತರರು ಇದ್ದರು.





