ಶಿಕ್ಷಣದ ಸಮಗ್ರ ಅಭಿವೃದ್ಧಿಗಾಗಿ ರಾಜ್ಯ ಬಜೆಟ್ ನ 30% ಹಣವನ್ನು ಮೀಸಲಿಡಲು ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಬೇಡಿಕೆಗಳನ್ನು ಈಡೇರಿಸುವಂತೆ ಹಾವೇರಿ ಪಟ್ಟಣದ ರುದ್ರಪ್ಪ ಲಮಾಣಿ ಶಾಸಕರ ಕಚೇರಿ ಎದುರು ಎಸ್ಎಫ್ಐ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಶಾಸಕರ ಅಪ್ತ ಸಹಾಯಕರು ರಾಮು ಪಾಟೀಲ ಅವರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಪತ್ರವನ್ನು ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಎಸ್ಎಫ್ಐ ಜಿಲ್ಲಾಧ್ಯಕ್ಷ ಬಸವರಾಜ ಎಸ್ ಮಾತನಾಡಿ, “ರಾಜ್ಯದ ಶಿಕ್ಷಣ ವ್ಯವಸ್ಥೆಯನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲು ಮಾರ್ಚ್ 06ರಂದು ಮಂಡನೆಯಾಗಲಿರುವ ರಾಜ್ಯ ಬಜೆಟ್ ನಲ್ಲಿ ವಿದ್ಯಾರ್ಥಿಗಳ ಬೇಡಿಕೆಗಳನ್ನು ಈಡೇರಿಸಬೇಕು. ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲು ಶಿಕ್ಷಣತಜ್ಞ ಕೊಠಾರಿ ಆಯೋಗದ ಶಿಫಾರಸಿನಂತೆ ರಾಜ್ಯ ಸರ್ಕಾರ ಬಜೆಟ್ ನಲ್ಲಿ ಕನಿಷ್ಠ 30% ಹಣ ಶಿಕ್ಷಣ ಕ್ಷೇತ್ರಕ್ಕೆ ಮೀಸಲಿಡಬೇಕೆಂದು ಹಲವು ವರ್ಷಗಳಿಂದ ಹೋರಾಟ ಮುಂದುವರೆದಿದೆ. ಶಿಕ್ಷಣ ಕ್ಷೇತ್ರಕ್ಕೆ ಪ್ರತಿ ಬಜೆಟ್ ನಲ್ಲಿ ಹಣ ಕಡಿತ ಮಾಡಿ ಸರಾಸರಿ ಕೇವಲ 11% ಹಣ ನೀಡುತ್ತಿರುವುದು ಖಂಡನೀಯ” ಎಂದರು.
“ಇಡೀ ದೇಶದಲ್ಲಿ ಉತ್ತಮ ಗುಣಮಟ್ಟದ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಹೊಂದಿರುವ ಕೇರಳ ರಾಜ್ಯ 27% ಹಣ ನೀಡುತ್ತಿರುವುದು ಶ್ಲಾಘನೀಯ. ಸರ್ಕಾರಿ ಶಾಲಾ ಕಾಲೇಜು ಹಾಸ್ಟೆಲ್, ವಿಶ್ವ ವಿದ್ಯಾಲಗಳ ಸಮಗ್ರ ಅಭಿವೃದ್ಧಿಗಾಗಿ ಕನಿಷ್ಠ 30% ಹಣವನ್ನು ಈ ಬಜೆಟ್ ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಮೀಸಲಿಡಬೇಕು. ಆ ಮೂಲಕ ಗ್ಯಾರಂಟಿ ಪಟ್ಟಿಗೆ ಶಿಕ್ಷಣವನ್ನು ಸೇರಿಸಬೇಕು” ಎಂದು ಆಗ್ರಹಿಸಿದರು.
“ಶೇ.46ರಷ್ಟು ಸರ್ಕಾರಿ ಶಾಲಾ-ಕಾಲೇಜುಗಳು ಕನಿಷ್ಠ ಮೂಲಭೂತ ಸೌಲಭ್ಯಗಳಿಲ್ಲದೆ ನರಳುತ್ತಿವೆ. ಶೇ.38ರಷ್ಟು ಪ್ರೌಡ ಶಾಲೆಗಳಲ್ಲಿ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಶೌಚಾಲಯಗಳಿಲ್ಲ. ಸರ್ಕಾರಿ ಶಾಲಾ ಸುಮಾರು ಕೊಠಡಿಗಳಿಗೆ ದುರಸ್ತಿಯ ಅಗತ್ಯವಿದೆ. ಕಳೆದ ಶೈಕ್ಷಣಿಕ ವರ್ಷದಲ್ಲಿ ರಾಜ್ಯದಲ್ಲಿ ಪ್ರೌಢಶಾಲೆ ವಿದ್ಯಾರ್ಥಿಗಳು ಶೇ14.6 ರಷ್ಟು ವಂಚಿತರಾಗಿದ್ದಾರೆ. ಶಾಲೆಯಿಂದ ವಂಚಿತರಾಗುವುದನ್ನು ತಪ್ಪಿಸುವುದಕ್ಕಾಗಿ ಜಾರಿಯಾದ ಶಿಕ್ಷಣ ಹಕ್ಕು ಕಾಯ್ದೆ (ಆರ್.ಟಿ.ಇ) ಸಮರ್ಪಕವಾಗಿ ಜಾರಿಯಾಗುತ್ತಿಲ್ಲ. ಪಾಲಕರಿಂದ ಮನಸೋ ಇಚ್ಛೆ ಹಣ ಪಡೆಯುತ್ತಿರುವ ಖಾಸಗಿ ಶಿಕ್ಷಣ ಸಂಸ್ಥೆಗಳ ಮೇಲೆ ಕ್ರಮ ಜರುಗಿಸಲು ಮುಂದಾಗಬೇಕಿದೆ” ಎಂದು ಒತ್ತಾಯಿಸಿದರು.
“ಉನ್ನತ ಶಿಕ್ಷಣ ಓದುತ್ತಿದ್ದ 37 ಲಕ್ಷ ವಿದ್ಯಾರ್ಥಿಗಳು ಶಿಕ್ಷಣವನ್ನು ತೊರೆದಿದ್ದಾರೆ. 46% ಸರ್ಕಾರಿ ಪದವಿ ಕಾಲೇಜುಗಳು ಉಪನ್ಯಾಸಕರ ಕೊರತೆಯನ್ನು ಎದುರಿಸುತ್ತಿವೆ. ಪರೀಕ್ಷೆ ವಿಧಾನ, ಅಂಕಪಟ್ಟಿ ದೋಷದಿಂದ 51 ಲಕ್ಷ ವಿದ್ಯಾರ್ಥಿಗಳಿಗೆ ಅಂಕಪಟ್ಟಿ ನೀಡಬೇಕು , ಶುಲ್ಕ ಏರಿಕೆ ಸೆಮಿಸ್ಟರ್ ಪದ್ಧತಿಯ ಸಮಸ್ಯೆಗಳು ವಿದ್ಯಾರ್ಥಿಗಳನ್ನು ಭಾದಿಸುತ್ತಿವೆ” ಎಂದರು.
“ಸರ್ಕಾರಿ ಇಂಜಿನಿಯರಿಂಗ್, ಮೆಡಿಕಲ್, ಪ್ಯಾರಮೆಡಿಕಲ್, ನರ್ಸಿಂಗ್, ಹಾವೇರಿ ವಿಶ್ವವಿದ್ಯಾಲಯ, ಶಿಗ್ಗಾಂವಿ ಜಾನಪದ ವಿವಿ, ಹನುಮನಮಟ್ಟಿ ಕೃಷಿ ವಿವಿಗಳು ಸೇರಿದಂತೆ ಜಿಲ್ಲೆಯ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚು ಅನುದಾನ ಬಿಡುಗಡೆ ಮಾಡಬೇಕು. ಎಲ್ಲಾ ಮೂಲ ಸೌಲಭ್ಯಗಳನ್ನು ಒದಗಿಸಬೇಕು. ಸರ್ಕಾರಿ ಕಾನೂನು ವಿದ್ಯಾಲಯ ಶೀಘ್ರವಾಗಿ 3 ಮತ್ತು 5 ವರ್ಷ ಕೋರ್ಸ್ ಗಳನ್ನು ಪ್ರಾರಂಭಿಸಬೇಕು” ಎಂದು ಒತ್ತಾಯಿಸಿದರು.
“ರಾಜ್ಯದಲ್ಲಿ ಶಿಕ್ಷಣದ ಶುಲ್ಕ ಕಟ್ಟಲು ಶೈಕ್ಷಣಿಕ ಸಾಲ ಮಾಡಿಕೊಂಡಿರುವ ಎಲ್ಲ ವರ್ಗದ ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಸಾಲ ಮನ್ನಾ ಮಾಡಬೇಕು. ಈ ಹಿಂದೆ ಕೇರಳ ರಾಜ್ಯ ಸರ್ಕಾರ ಬಜೆಟ್ ನಲ್ಲಿ 900 ಕೋಟಿ ಶೈಕ್ಷಣಿಕ ಸಾಲ ಮನ್ನಾ ಮಾಡಿದೆ. ಇದೆ ಮಾದರಿಯಲ್ಲಿ ರಾಜ್ಯ ಸರ್ಕಾರ ಮಾನ್ನಾ ಮಾಡಬೇಕು” ಎಂದರು.
ಎಸ್ಎಫ್ಐ ಜಿಲ್ಲಾ ಮುಖಂಡ ಭರತ ಮಡಿವಾಳ ಮಾತನಾಡಿ, “ಎಲ್ಲ ಇಂಜಿನಿಯರಿಂಗ್ ಹಾಗೂ ಪದವಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ನೀಡಬೇಕು. ಮೊದಲ ವರ್ಷದ ಪದವಿಗೆ ದಾಖಲಾತಿ ಪಡೆದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ರಾಜ್ಯ ಸರ್ಕಾರ ನೀಡಿಲ್ಲ. ಯಾವುದೇ ಷರತ್ತು ಹಾಕದೇ ಈ ಬಜೆಟ್ ನಲ್ಲಿ ಎಲ್ಲಾ ಪದವಿ ವಿದ್ಯಾರ್ಥಿಗಳಿಗೂ ಉಚಿತ ಲ್ಯಾಪ್ಟಾಪ್ ಯೋಜನೆಯನ್ನು ಮರು ಜಾರಿ ತರಲು ಘೋಷಿಸಬೇಕು” ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಕಾಲೇಜ್ ಘಟಕದ ಉಪಾಧ್ಯಕ್ಷೆ ತನ್ಮಯಿ ನಾಯ್ಕ, ಐಶ್ವರ್ಯ ಎಸ್, ರಿಹಾನ್ ಪಿ, ನಿಶಾ ಎ, ಮಾಳವ್ವ, ದೀಪಾ, ಸಾವಿತ್ರಿ ಕೆ, ಸೌಮ್ಯ, ನಾಗಮ್ಮ ವಿ, ದೀಪ ವಡ್ಡರ, ಮಹೇಶ್ ಕೊಂಡಜ್ಜಿ, ಪ್ರಭು ಗೌಡ, ಮಲ್ಲಿಕಾರ್ಜುನ್, ಫಕ್ಕಿರೇಶ್, ಮನೋಜ್ ಗಡ್ಡಿ, ನಂಜುಂಡ ಬಳಿಗಾರ, ಸಿದ್ದಪ್ಪ ಪೂಜಾರ್, ಸುದೀಪ್ ಗಾಲಿ ಸೇರಿದಂತೆ ಅನೇಕ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.





