ಪ್ರಜಾಪ್ರಭುತ್ವದ ಉಳಿಗಾಗಿ ಆಧಾರ ಸಹಿತವಾಗಿ ಮತಗಳ್ಳತನವನ್ನು ಬಹಿರಂಗ ಮಾಡುತ್ತಿದ್ದೇವೆ ಎಂದು, ‘ವೋಟ್ ಚೋರ್ ಗದ್ದಿ ಛೋಡ್’ (ಮತಗಳ್ಳತನ ಮಾಡಿದವರು ಅಧಿಕಾರ ಬಿಟ್ಟು ಹೋಗಲಿ) ಎಂಬ ಹೆಸರಿನ ಸಹಿ ಸಂಗ್ರಹ ಅಭಿಯಾನಕ್ಕೆ ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಪಕ್ಷವು ಚಾಲನೆ ನೀಡಿದ್ದು, ಎಐಸಿಸಿ ಕಾರ್ಯದರ್ಶಿ ಮಯೂರ ಜಯಕುಮಾರ್ ಹಳೇ ಹುಬ್ಬಳ್ಳಿಯ ಬೀರಬಂದ್ ಓಣಿಯ ಮುಖ್ಯ ಸರ್ಕಲ್ನಲ್ಲಿ ಅಭಿಯಾನವನ್ನು ಉದ್ಘಾಟಿಸಿ, ಚುನಾವಣಾ ಆಯೋಗ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಮುಂದುವರೆದು, ದೇಶದ ವಿವಿಧೆಡೆ ಈ ಅಭಿಯಾನವನ್ನು ನಡೆಸಲಾಗುತ್ತಿದ್ದು, ಚುನಾವಣಾ ಆಯೋಗದ ಕುತಂತ್ರವನ್ನು ಜನರ ಮುಂದಿಡಲು ನಾವು ಪ್ರಯತ್ನಿಸುತ್ತಿದ್ದೇವೆ. ಕರ್ನಾಟಕದಲ್ಲಿ ಈಗಾಗಲೇ ಒಂದು ಕೋಟಿ ಸಹಿ ಸಂಗ್ರಹ ಮಾಡಲಾಗಿದೆ. ನಮ್ಮ ಈ ಅಭಿಯಾನವು ಆದಷ್ಟು ಬೇಗ ದೆಹಲಿ ತಲುಪಲಿದೆ. ಇದರ ಮೂಲಕ ಚುನಾವಣಾ ಆಯೋಗದ ಕುತಂತ್ರವನ್ನು ಬಯಲಿಗೆ ಎಳೆಯುತ್ತೇವೆ. “ಈ ಅಭಿಯಾನವನ್ನು ಬಿಹಾರ ಚುನಾವಣೆ ಹಿನ್ನೆಲೆಯಲ್ಲಿ ಮಾಡುತ್ತಿಲ್ಲ ಎಂದರು.
ಶಾಸಕ ಪ್ರಸಾದ್ ಅಬ್ಬಯ್ಯ ಮಾತನಾಡಿ, ನನ್ನ ಕ್ಷೇತ್ರದಲ್ಲಿಯೂ ಮತಗಳ್ಳತನವಾಗಿದೆ. ದೇಶದ ವಿವಿಧ ಕ್ಷೇತ್ರಗಳಲ್ಲಿಯೂ ಇದೇ ಪರಿಸ್ಥಿತಿ ಇದೆ. ಪ್ರಜಾಪ್ರಭುತ್ವದ ವಿರೋಧಿ ಕೃತ್ಯವಾದ ಇದರ ವಿರುದ್ಧ ನಮ್ಮ ಹೋರಾಟವನ್ನು ಮುಂದುವರಿಸುತ್ತೇವೆ ಎಂದು ಚುನಾವಣಾ ಆಯೋಗದ ವಿರುದ್ಧ ಕಿಡಿ ಕಾರಿದರು.
ಈ ವೇಳೆ ಮಾಜಿ ಸಚಿವ ಎ.ಎಂ. ಹಿಂಡಸಗೇರಿ, ಕಾಂಗ್ರೆಸ್ ಮುಖಂಡ ಆನಂದ ಗಡ್ಡದೇವರಮಠ, ವಾಕರಸಾ ಸಂಸ್ಥೆ ಮಾಜಿ ಅಧ್ಯಕ್ಷ ಸದಾನಂದ ವಿ. ಡಂಗನವರ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಲ್ತಾಫ್ ಹುಸೇನ್ ಹಳ್ಳೂರ, ಕಾಂಗ್ರೆಸ್ ಪಾಲಿಕೆ ಸದಸ್ಯರು, ವಾರ್ಡ್ ಕಾಂಗ್ರೆಸ್ ಅಧ್ಯಕ್ಷರು, ಸ್ಥಳೀಯ ಮುಖಂಡರು, ಕಾರ್ಯಕರ್ತರು ಸೇರಿದಂತೆ ಗಣ್ಯರು ಭಾಗವಹಿಸಿದ್ದರು.





