ಕೋಲಾರ: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ತಾಲೂಕಿನಲ್ಲಿ ಹೋಬಳಿವಾರು ಸಾಧ್ಯವಾದರೆ ಗ್ರಾಮ ಪಂಚಾಯತಿ ಮಟ್ಟದಲ್ಲಿ ಸಭೆಗಳನ್ನು ನಡೆಸುವ ಮೂಲಕ ಸಮಸ್ಯೆಗಳಿದ್ದಲ್ಲಿ ಬಗೆಹರಿಸುವ ಕೆಲಸ ಮಾಡಲು ಅಧಿಕಾರಿಗಳು ಜವಾಬ್ದಾರಿ ತೆಗೆದುಕೊಳ್ಳಬೇಕು ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ವೇಮಗಲ್ ವಿ.ಎಂ ಮುನಿಯಪ್ಪ ತಿಳಿಸಿದರು.
ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಿದ್ದ ಗ್ಯಾರಂಟಿ ಯೋಜನೆಗಳ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಯೋಜನೆಯ ಪ್ರಾರಂಭದಲ್ಲಿ ಸಾಕಷ್ಟು ಸಮಸ್ಯೆಗಳನ್ನು ಎದುರಿಸಬೇಕಾಗಿತ್ತು ಕ್ರಮೇಣ ಸಮಸ್ಯೆಗಳು ಒಂದೊಂದಾಗಿ ಪರಿಹಾರ ಮಾಡಲಾಗುತ್ತಿದೆ ಇದೇ ರೀತಿಯಲ್ಲಿ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಲು ಸಮಿತಿ ಸದಸ್ಯರೊಂದಿಗೆ ಅಧಿಕಾರಿಗಳು ಜವಾಬ್ದಾರಿ ವಹಿಸಬೇಕಾಗಿದೆ ಎಂದರು.
ತಾಲೂಕು ವ್ಯಾಪ್ತಿಯಲ್ಲಿ ಬಡವರ ಬಿಪಿಎಲ್ ಕಾರ್ಡ್ಗಳೂ ರದ್ದಾಗಿವೆ ಕೆಲವರಿಗೆ ತಾಂತ್ರಿಕ ದೋಷಗಳಿಂದ ಗೃಹಲಕ್ಷ್ಮಿ ಹಣ ಫಲಾನುಭವಿಗಳ ಖಾತೆಗೆ ಜಮಾ ಆಗುತ್ತಿಲ್ಲ ಅಕ್ಕಿ ವಿತರಣೆಯಲ್ಲಿ ಸಹ ದೂರುಗಳಿವೆ ಆದ್ದರಿಂದ ಪ್ರತಿ ಹೋಬಳಿವಾರು ಸಾಧ್ಯವಾದರೆ ಗ್ರಾಪಂ ವ್ಯಾಪ್ತಿಯಲ್ಲಿ ಸಮಸ್ಯೆಗಳು ಗುರುತಿಸಿ ಅವುಗಳನ್ನು ಅಲ್ಲಿಯೇ ಬಗೆಹರಿಸಬೇಕು ಎಂದು ತಿಳಿಸಿದರು.
ಸರ್ಕಾರದ ಜನಪರ ಕಾಳಜಿಯಿಂದ ಹಾಗೂ ಅಭಿವೃದ್ದಿ ಉದ್ದೇಶದಿಂದ ಇಂತಹ ಅನೇಕ ಯೋಜನೆಗಳನ್ನು ಜಾರಿ ಮಾಡುತ್ತಿದ್ದು, ಈ ನಿಟ್ಟಿನಿಂದ ತಾಲ್ಲೂಕು ಮಟ್ಟದ ಪ್ರಾಧಿಕಾರದ ಸದಸ್ಯರುಗಳು ಕಾರ್ಯಕ್ಷಮತೆಯಿಂದ ಕೆಲಸ ಮಾಡಬೇಕು. ಗ್ಯಾರಂಟಿ ಯೋಜನೆಗಳು ಎಲ್ಲ ವರ್ಗದವರೆಗೂ ಮೀಸಲಾಗಿದೆ. ಆದರೆ ದುರ್ಬಲ ಹಾಗೂ ಬಡವರಿಗೆ ಸರಿಯಾದ ಮಾಹಿತಿ ಇಲ್ಲದೆ ಪಡೆಯಲು ಸಾಧ್ಯವಿಲ್ಲ ಜನರಿಗೆ ಸರ್ಕಾರದ ಯೋಜನೆಗಳನ್ನು ತಲುಪಿಸುವ ಪ್ರಯತ್ನದಲ್ಲಿ ನಾವೆಲ್ಲರೂ ಕೆಲಸ ಮಾಡಬೇಕಿದೆ ಆಗ ಮಾತ್ರವೇ ಸರ್ಕಾರದ ಉದ್ದೇಶ ಈಡೇರಲಿದೆ ಎಂದು ಹೇಳಿದರು.
ಇದನ್ನು ಓದಿದ್ದೀರಾ..? ಕುಂಬಾರ ಮಹಾಸಭಾ ರಾಷ್ಟ್ರೀಯ ಯುವ ಘಟಕದ ಅಧ್ಯಕ್ಷರಾಗಿ ಡಾ.ಕೆ.ನಾಗರಾಜ್ ನೇಮಕ
ಸಭೆಯಲ್ಲಿ ತಾಲೂಕು ಪಂಚಾಯತಿ ಇಒ ಮಂಜುನಾಥ್, ಸಹಾಯಕ ನಿರ್ದೇಶಕ ಮಂಜುನಾಥ್ ಪ್ರಸಾದ್ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು, ಸಮಿತಿ ಸದಸ್ಯರು ಇದ್ದರು.





