ದ್ವಿತೀಯ ಪಿಯುಸಿ ಫಲಿತಾಂಶ ಬುಧವಾರದಂದು ಪ್ರಕಟವಾಗಿದ್ದು, ಹುಬ್ಬಳ್ಳಿಯ ವಿದ್ಯಾನಿಕೇತನ ಕಾಲೇಜಿನ ವಿದ್ಯಾರ್ಥಿನಿ ಎ.ಹುಬ್ಬಳ ಇಡೀ ರಾಜ್ಯಕ್ಕೆ ವಿಜ್ಞಾನ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಸಾಧನೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಲೇಜಿನಿಂದ ಬಹುಮಾನವಾಗಿ 1 ಲಕ್ಷ ರೂಪಾಯಿಗಳನ್ನು ಚೆಕ್ ರೂಪದಲ್ಲಿ ನೀಡಿದ್ದಾರೆ.
ವಿದ್ಯಾರ್ಥಿನಿ ಎ.ವಿದ್ಯಾಲಕ್ಷ್ಮಿ ಹುಬ್ಬಳ್ಳಿಯ ವಿದ್ಯಾನಿಕೇತನ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು. ಸದ್ಯ ಇವರು ಪಿಯುಸಿ ಫಲಿತಾಂಶದಲ್ಲಿ ವಿಜ್ಞಾನ ವಿಭಾಗದಲ್ಲಿ 600 ಅಂಕಗಳಿಗೆ 598 ಅಂಕಗಳನ್ನು ಪಡೆದುಕೊಂಡಿದ್ದಾರೆ. ಈ ಮೂಲಕ ಇಡೀ ರಾಜ್ಯಕ್ಕೆ ವಿಜ್ಞಾನ ವಿಭಾಗದಲ್ಲಿ ವಿದ್ಯಾಲಕ್ಷ್ಮಿ ಅವರು ಮೊದಲ ಸ್ಥಾನ ಪಡೆದುಕೊಂಡಿದ್ದಾರೆ.

ವಿದ್ಯಾರ್ಥಿನಿ ಎ.ವಿದ್ಯಾಲಕ್ಷ್ಮಿ ಸುದ್ದಿಗಾರರೊಂದಿಗೆ ಮಾತನಾಡಿ, “ತಂದೆ, ತಾಯಿಯ ಸಹಕಾರ ಹಾಗೂ ಕಾಲೇಜಿನ ಪ್ರಾಧ್ಯಾಪಕರ ಸಹಕಾರದಿಂದ ಈ ಸಾಧನೆ ಮಾಡಲು ಸಾಧ್ಯವಾಗಿದೆ. ಸತತ ಪರಿಶ್ರಮ ಹಾಗೂ ನಿಗಧಿತ ಟೈಮ್ ಟೇಬಲ್ ಪ್ರಕಾರ ನಿತ್ಯವೂ ಅಭ್ಯಾಸ ಮಾಡಿದ್ದರಿಂದ ಇಂತಹ ಅತ್ಯತ್ತಮ ಫಲಿತಾಂಶ ಬಂದಿದೆ. ಇದರಿಂದ ನನಗೆ ತುಂಬಾ ಖುಷಿಯಾಗಿದೆ” ಎಂದು ಹೇಳಿದ್ದಾರೆ.
ಹುಬ್ಬಳ್ಳಿಯ ವಿದ್ಯಾನಿಕೇತನ ಪಿಯು ವಿಜ್ಞಾನ ಕಾಲೇಜು ಶೇಕಡಾ 100ಕ್ಕೆ ನೂರರಷ್ಟು ಫಲಿತಾಂಶ ಪಡೆದುಕೊಂಡಿದೆ. ಪ್ರಸ್ತುತ ಈ ಕಾಲೇಜಿನ ಎಲ್ಲ 619 ವಿದ್ಯಾರ್ಥಿಗಳು ಪಿಯು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಇದರಿಂದ ಪಾಸ್ ಆದಂತಹ ಎಲ್ಲ ವಿದ್ಯಾರ್ಥಿಗಳಿಗೆ ಚೌಗಲಾ ಸಂಸ್ಥೆಯ ವಿದ್ಯಾನಿಕೇತನ ಪಿಯು ಕಾಲೇಜಿನ ಪ್ರಾಂಶುಪಾಲ ಅನಿಲ್ ಕುಮಾರ್ ಶುಭಾಶಯ ಕೋರಿದ್ದಾರೆ. ಅಲ್ಲದೇ ಇಡೀ ರಾಜ್ಯಕ್ಕೆ ಮೊದಲ ಸ್ಥಾನ ಪಡೆದುಕೊಂಡ ಎ.ವಿದ್ಯಾಲಕ್ಷ್ಮಿಗೆ ಕಾಲೇಜಿನಿಂದ ಬಹುಮಾನವಾಗಿ 1 ಲಕ್ಷ ರೂಪಾಯಿಗಳನ್ನು ಚೆಕ್ ರೂಪದಲ್ಲಿ ನೀಡಿದ್ದಾರೆ.





