ಭಾರತದ ಒಕ್ಕೂಟ ವ್ಯವಸ್ಥೆಯನ್ನು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ದುರ್ಬಲಗೊಳಿಸುತ್ತಿದೆ. ರಾಜ್ಯಗಳ ಮೇಲೆ ಕೇಂದ್ರ ಸರ್ಕಾರ ಅಧಿಕಾರ ದುರುಪಯೋಗ ಮಾಡುತ್ತಿದೆ. ತೆರಿಗೆ ಹಂಚಿಕೆಯಲ್ಲಿ ರಾಜ್ಯಗಳಿಗೆ ಕೇಂದ್ರ ಸರ್ಕಾರ ಅನ್ಯಾಯ ಮಾಡುತ್ತಿದೆ ಎಂದು ಸಿಪಿಐಎಂ ಬೆಂಗಳೂರು ಜಿಲ್ಲಾ ಕಾರ್ಯದರ್ಶಿ ಎನ್ ಪ್ರತಾಪ್ ಸಿಂಹ ಹೇಳಿದ್ದಾರೆ.
ಕೇಂದ್ರ ಸರ್ಕಾರದ ವಿರುದ್ಧ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಕರ್ನಾಟಕ ಸರ್ಕಾರ ಮತ್ತು ಕೇರಳ ಸರ್ಕಾರಗಳನ್ನು ಬೆಂಬಲಿಸಿ ಸಿಪಿಐ(ಎಂ) ಕಾರ್ಯಕರ್ತರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ.
“ರಾಜ್ಯಗಳು ತಮ್ಮ ತೆರಿಗೆ ಹಾಗೂ ಸಂಪನ್ಮೂಲಗಳ ಪಾಲು ಪಡೆಯುವಲ್ಲಿ ಕೇಂದ್ರ ಸರ್ಕಾರ ಅಡ್ಡಿಪಡಿಸಬಾರದು. ಕರ್ನಾಟಕಕ್ಕೆ ಬರಗಾಲದ ಅನುದಾನವನ್ನು ಕೂಡಲೇ ಬಿಡುಗಡೆ ಮಾಡಬೇಕು. ಕೇಂದ್ರ ಸರ್ಕಾರ ತನ್ನ ಪನಸ್ಸಿಗೆ ತೋಚಿದಂತೆ ಅನುದಾನ ಹಂಚಿಕೆ ಮಾಡಿ, ರಾಜ್ಯಗಳು ಸಾಲ ಮಾಡುವಂತೆ ಮಾಡುತ್ತಿದೆ. ಇಂತಹ ಧೋರಣೆಯನ್ನು ನಿಲ್ಲಿಸಿ, ನ್ಯಾಯಯುತವಾಗಿ ತೆರಿಗೆ ಹಂಚಿಕೆ ಮಾಡಬೇಕು” ಎಂದು ಆಗ್ರಹಿಸಿದ್ದಾರೆ.
“ಕೇಂದ್ರ ಪ್ರಾಯೋಜಿತ ಯೋಜನೆಗಳಲ್ಲಿ ರಾಜ್ಯಗಳಿಗೆ ಸಂಬಂಧಿಸಿದ ವಿಚಾರಗಳಲ್ಲಿ ಕೇಂದ್ರ ಸರ್ಕಾರ ಹಸ್ತಕ್ಷೇಪ ಮಾಡಬಾರದು. ವಿರೋಧ ಪಕ್ಷಗಳು ಅಧಿಕಾರದಲ್ಲಿರುವ ರಾಜ್ಯ ಸರ್ಕಾರಗಳನ್ನು ಗುರಿಯಾಗಿಸಿಕೊಂಡು ಕೇಂದ್ರ ಸರ್ಕಾರ ಇಡಿ, ಸಿಬಿಐ ಹಾಗೂ ಇಟಿ ವಿಭಾಗಗಳನ್ನು ದುರ್ಬಳಕೆ ಮಾಡುವುದನ್ನು ನಿಲ್ಲಿಸಬೇಕು” ಎಂದು ಒತ್ತಾಯಿಸಿದ್ದಾರೆ.
“ರಾಜ್ಯ ಸರ್ಕಾರಗಳ ವಿಚಾರದಲ್ಲಿ ರಾಜ್ಯಪಾಲರ ಹಸ್ತಕ್ಷೇಪ ಮತ್ತು ಸಂವಿಧಾನಾತ್ಮಕ ಸ್ಥಾನದ ದುರುಪಯೋಗವನ್ನು ತಡೆಯಬೇಕು. ರಾಜ್ಯ ಶಾಸಕಾಂಗ ಅಂಗೀಕರಿಸಿದ ಶಾಸನಗಳನ್ನು ರಾಜ್ಯಪಾಲರು ತಡೆ ಹಿಡಿಯಬಾರದು” ಎಂದು ಆಗ್ರಹಿಸಿದ್ದಾರೆ.
ಪ್ರತಿಭಟನೆಯಲ್ಲಿ ಬಿ.ಎನ್ ಮಂಜುನಾಥ್, ಚಂದ್ರತೇಜಸ್ವಿ, ಎನ್ ವೆಂಕಟಾಚಲಯ್ಯ, ಟಿ ಯಶವಂತ್, ವಿಮಲಾ ಸೇರಿದಂತೆ ಹಲವರು ಇದ್ದರು.




