ಮುಂಬರುವ ಚುನಾವಣಾ ಮೈತ್ರಿಯ ನಡುವೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದ ಟಿಕೆಟ್ ಹಂಚಿಕೆ ವಿಚಾರ ಇದೀಗ ಭಾರಿ ಚರ್ಚೆಗೆ ಕಾರಣವಾಗಿದೆ. ಈ ಕ್ಷೇತ್ರದಲ್ಲಿ ಯಾವುದೇ ಕಾರಣಕ್ಕೂ ಜನತಾದಳ (ಸೆಕ್ಯುಲರ್) ಪಕ್ಷಕ್ಕೆ ಸೀಟು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ ಎಂದು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಹಾಗೂ ಬಿಜೆಪಿ ವಕ್ತಾರ ಜಗದೀಶ್ ಮೊಗಟಾ ಅವರು ನೇರ ಎಚ್ಚರಿಕೆ ನೀಡಿದ್ದಾರೆ.
ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈತ್ರಿ ಹಿನ್ನೆಲೆಯಲ್ಲಿ ಈ ಬಾರಿ ಕಾರವಾರ ಕ್ಷೇತ್ರ ಜೆಡಿಎಸ್ ಪಾಲಾಗಲಿದೆ ಎಂಬ ವದಂತಿಗಳನ್ನು ಕಡಾಖಂಡಿತವಾಗಿ ತಳ್ಳಿಹಾಕಿದರು.“ಈ ಕ್ಷೇತ್ರದಲ್ಲಿ ಜೆಡಿಎಸ್ಗೆ ಟಿಕೆಟ್ ನೀಡುವುದಿಲ್ಲ; ಬೇಕಿದ್ದರೆ ಇದನ್ನು ಬರೆದಿಟ್ಟುಕೊಳ್ಳಿ,” ಎಂದು ಅವರು ಸವಾಲು ಹಾಕಿದರು.
ಕಳೆದ ಚುನಾವಣೆಯಲ್ಲಿ ಜೆಡಿಎಸ್ಗೆ ಸರಿಯಾದ ಅಭ್ಯರ್ಥಿಯೇ ಇರಲಿಲ್ಲ; ಅಂತಹ ಪರಿಸ್ಥಿತಿಯಲ್ಲಿ ಈ ಬಾರಿ ಅವರಿಗೆ ಸೀಟು ಬಿಟ್ಟುಕೊಡಲು ಸಾಧ್ಯವೇ ಇಲ್ಲ ಎಂದು ಅವರು ಹೇಳಿದರು.
ಇದೇ ವೇಳೆ ಮಾಜಿ ಸಚಿವ ಆನಂದ್ ಅಸ್ನೋಟಿಕರ್ ಅವರ ಹೆಸರನ್ನು ಉಲ್ಲೇಖಿಸಿ ತೀವ್ರ ವಾಗ್ದಾಳಿ ನಡೆಸಿದ ಮೊಗಟಾ, “ಹಿಂದಿನ ಚುನಾವಣೆಯಲ್ಲಿ ಜೆಡಿಎಸ್ ಹೆಸರಿನಲ್ಲಿದ್ದ ಅಸ್ನೋಟಿಕರ್ ಎಲ್ಲಿದ್ದರು? ಅವರು ಕಾಂಗ್ರೆಸ್ಗೆ ಪರೋಕ್ಷವಾಗಿ ಬೆಂಬಲ ನೀಡಿದವರಲ್ಲವೇ? ಅಲೆಮಾರಿ ಜನಾಂಗದಂತೆ ವರ್ತಿಸಿ ಕಾಂಗ್ರೆಸ್ ಜೊತೆ ಹೊಂದಾಣಿಕೆ ಮಾಡಿಕೊಂಡವರಿಗೆ ಈ ಕ್ಷೇತ್ರದಲ್ಲಿ ಅವಕಾಶ ನೀಡುವ ಪ್ರಶ್ನೆಯೇ ಇಲ್ಲ,” ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಸುದ್ದಿ ಓದಿದ್ದೀರಾ? ಮುಂಡಗೋಡ | ಟಿಬೆಟಿಯನ್ ಕ್ಯಾಂಪ್ಗಳಲ್ಲಿ ಹೊಸ ವರ್ಷ ‘ಲೋಸಾರ್’ ಆಚರಣೆ ಆರಂಭ
ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದ ಬಿಜೆಪಿ ಮುಖಂಡ ಸುನಿಲ್ ಹೆಗಡೆ ಮಾತನಾಡಿ, ಸೀಟು ಹಂಚಿಕೆ ಕುರಿತ ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳಲು ಉನ್ನತ ಮಟ್ಟದ ಸಮಿತಿ ಇದೆ ಎಂದು ಹೇಳಿದರು.
ಎಚ್.ಡಿ. ಕುಮಾರಸ್ವಾಮಿ, ಎಚ್.ಡಿ. ದೇವೇಗೌಡರು ಹಾಗೂ ಬಿಜೆಪಿಯ ಹಿರಿಯ ನಾಯಕರು ಒಳಗೊಂಡ ಸಮನ್ವಯ ಸಮಿತಿಯೇ ಜಿಲ್ಲೆಯ ಸೀಟುಗಳ ಬಗ್ಗೆ ನಿರ್ಧಾರ ಕೈಗೊಳ್ಳಲಿದೆ. ಕುಮಾರಸ್ವಾಮಿಯವರು ಜವಾಬ್ದಾರಿಯುತ ನಾಯಕರು ಅವರು ಎಲ್ಲಾ ಮಗ್ಗಲುಗಳಿಂದ ಯೋಚಿಸಿ ತೀರ್ಮಾನ ಕೈಗೊಳ್ಳಲಿದ್ದಾರೆ, ಎಂದು ತಿಳಿಸಿದರು.
ಸ್ಥಳೀಯ ಸಂಸ್ಥೆಗಳ ಚುನಾವಣೆ ಹಾಗೂ ಮುಂದಿನ ರಾಜಕೀಯ ಬೆಳವಣಿಗೆಗಳ ಬಗ್ಗೆ ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವೆಲ್ಲರೂ ಬದ್ಧರಾಗಿರುತ್ತೇವೆ ಎಂದು ಮುಖಂಡರು ಇದೇ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು.





