ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲ್ಲೂಕಿನ ಜಗಲಬೇಟ ಗ್ರಾಮ ಪಂಚಾಯತ್ ವ್ಯಾಪ್ತಿಯ ವೈನಿ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ಹುಲಿ ದಾಳಿಯಿಂದಾಗಿ ಕಾಡುಕೋಣವೊಂದು ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ.
ಜಗಲಬೇಟ–ವೈನಿ ಮುಖ್ಯ ರಸ್ತೆಯ ಪಕ್ಕದಲ್ಲಿರುವ ಕಾಡಿನಲ್ಲಿ ಕಾಡುಕೋಣದ ಕೊಳೆತ ಮೃತದೇಹ ಪತ್ತೆಯಾಗಿದ್ದು, ಈ ಘಟನೆಯು ಸ್ಥಳೀಯ ಗ್ರಾಮಸ್ಥರಲ್ಲಿ ತೀವ್ರ ಆತಂಕ ಮೂಡಿಸಿದೆ. ಸ್ಥಳೀಯರಿಂದ ಲಭ್ಯವಾದ ಮಾಹಿತಿಯ ಪ್ರಕಾರ, ಈ ಕಾಡುಕೋಣವು ಸುಮಾರು ನಾಲ್ಕು ದಿನಗಳ ಹಿಂದೆಯೇ ಸಾವನ್ನಪ್ಪಿರಬಹುದೆಂದು ಅಂದಾಜಿಸಲಾಗಿದೆ.
ಮೃತದೇಹವು ಸಂಪೂರ್ಣವಾಗಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವುದರಿಂದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕುರಿಗಾಹಿಗಳು ಹಾಗೂ ಗ್ರಾಮಸ್ಥರು ಕಾಡಿನತ್ತ ತೆರಳಿದ್ದ ವೇಳೆ ಕಾಡುಕೋಣದ ಶವವನ್ನು ಗಮನಿಸಿದ್ದು, ತಕ್ಷಣವೇ ಸಂಬಂಧಪಟ್ಟವರಿಗೆ ಮಾಹಿತಿ ನೀಡಿದ್ದಾರೆ.
ಕಾಡುಕೋಣದ ದೇಹದ ಮೇಲೆ ಆಳವಾದ ಗಾಯಗಳು ಹಾಗೂ ಕಚ್ಚಿದ ಗುರುತುಗಳು ಸ್ಪಷ್ಟವಾಗಿ ಗೋಚರಿಸುತ್ತಿದ್ದು, ಇದನ್ನು ಹುಲಿಯೇ ದಾಳಿ ಮಾಡಿ ಕೊಂದಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳದ ಸುತ್ತಮುತ್ತಲ ಪ್ರದೇಶದಲ್ಲಿ ಹುಲಿ ಸಂಚರಿಸುತ್ತಿರುವ ಸಾಧ್ಯತೆ ಇರುವುದರಿಂದ ವೈನಿ ಹಾಗೂ ಜಗಲಬೇಟ ಸೇರಿದಂತೆ ಸುತ್ತಮುತ್ತಲ ಹಳ್ಳಿಗಳಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.
ವಿಶೇಷವಾಗಿ ಕಾಡಿನ ಅಂಚಿನ ಪ್ರದೇಶಗಳಲ್ಲಿ ಕೃಷಿ ಕೆಲಸಕ್ಕೆ ತೆರಳುವ ರೈತರು ಹಾಗೂ ಜಾನುವಾರುಗಳನ್ನು ಮೇಯಿಸಲು ಹೋಗುವ ಕುರಿಗಾಹಿಗಳು ತೀವ್ರ ಭೀತಿಗೊಳಗಾಗಿದ್ದಾರೆ. ಅರಣ್ಯ ಪ್ರದೇಶದಲ್ಲಿ ಇತ್ತೀಚಿನ ದಿನಗಳಲ್ಲಿ ವನ್ಯಜೀವಿಗಳ ಹಾವಳಿ ಮತ್ತು ಹಲ್ಲೆ ಪ್ರಕರಣಗಳು ಹೆಚ್ಚುತ್ತಿವೆ ಎಂದು ನಾಗರಿಕರು ಆರೋಪಿಸುತ್ತಿದ್ದಾರೆ.
ಈ ಸುದ್ದಿ ಓದಿದ್ದೀರಾ? ಅಂಕೋಲಾ | ಸೋಶಿಯಲ್ ಮೀಡಿಯಾ ಟ್ರೋಲ್ ಎಫೆಕ್ಟ್: ಪಿಕಳೆ ನರ್ಸಿಂಗ್ ಹೋಂನ ರಾಜು ಪಿಕಳೆ ಆತ್ಮಹತ್ಯೆ
ಅರಣ್ಯ ಇಲಾಖೆಯು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ, ಹುಲಿ ಚಲನವಲನದ ಬಗ್ಗೆ ತೀವ್ರ ನಿಗಾ ವಹಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಅಲ್ಲದೆ, ಗಸ್ತು ಕಾರ್ಯವನ್ನು ಚುರುಕುಗೊಳಿಸಿ ಗ್ರಾಮಸ್ಥರಿಗೆ ಸೂಕ್ತ ಮುನ್ನೆಚ್ಚರಿಕೆಗಳನ್ನು ನೀಡಬೇಕೆಂದು ವಿನಂತಿಸಿದ್ದಾರೆ.
ಮುಂಜಾಗ್ರತಾ ಕ್ರಮವಾಗಿ ಗ್ರಾಮಸ್ಥರು ರಾತ್ರಿ ವೇಳೆಯಲ್ಲಿ ಅರಣ್ಯ ಪ್ರದೇಶಕ್ಕೆ ಹೋಗುವುದನ್ನು ತಪ್ಪಿಸಬೇಕು ಹಾಗೂ ಒಂಟಿಯಾಗಿ ಸಂಚರಿಸದೆ ಗುಂಪಾಗಿ ತೆರಳಬೇಕೆಂದು ಸ್ಥಳೀಯ ಹಿರಿಯರು ಸಲಹೆ ನೀಡಿದ್ದಾರೆ. ಕೂಡಲೇ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಜನರ ಭದ್ರತೆಗೆ ಅಗತ್ಯ ಕ್ರಮ ಕೈಗೊಳ್ಳಬೇಕೆಂಬ ಆಗ್ರಹ ಕೇಳಿಬಂದಿದೆ.





