ಲಿಂಗಾಯತ ಮಠಾಧಿಪತಿಗಳ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಕಾರಣ ತಮಗೆ ಮೂರು ತಿಂಗಳು ವಿಜಯಪುರ ಜಿಲ್ಲೆಗೆ ಪ್ರವೇಶ ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಕನೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ನ ಕಲಬುರಗಿ ಪೀಠವು ಶುಕ್ರವಾರ ವಜಾಗೊಳಿಸಿದೆ. ಈ ಮೂಲಕ ವಿಜಯಪುರಕ್ಕೆ ಪ್ರವೇಶ ನಿರ್ಬಂಧ ಆದೇಶವನ್ನು ಎತ್ತಿಹಿಡಿದಿದೆ.
ಕಾಡಸಿದ್ದೇಶ್ವರ ಮಠದ ಸ್ವಾಮೀಜಿ ಅಕ್ಟೋಬರ್ 7ರಂದು ಮಹಾರಾಷ್ಟ್ರದ ಜತ್ತ ತಾಲ್ಲೂಕಿನ ಬೀಳೂರು ಗ್ರಾಮದಲ್ಲಿ ನಡೆದ ಸಮಾರಂಭವೊಂದರಲ್ಲಿ ಮಾತನಾಡುತ್ತಾ ಲಿಂಗಾಯತ ಮಠಾಧಿಪತಿಗಳನ್ನು ವ್ಯಂಗ್ಯ ಮಾಡಿದ್ದರು. “ಲಿಂಗಾಯತ ಮಠಾಧಿಪತಿಗಳದ್ದು ಕಲಾವಿದರಿಂದ ಕೂಡಿದ ಒಕ್ಕೂಟ, ಮುಖ್ಯಮಂತ್ರಿಗಳ ಕೃಪಾಪೋಷಿತ ನಾಟಕ ಮಂಡಳಿ. ಇವರು ದೇವರು ಗುಡಿಯಲ್ಲಿ ಇಲ್ಲ, ಗುಡಿಗೆ ಹೋಗಬೇಡಿ. ಹೊಟೇಲ್ನಲ್ಲಿ ಸಾರಾಯಿ ಕುಡಿದು, ಆರಾಮಾಗಿರಿ, ಮಾಂಸ ತಿನ್ನಿ ಎಂದು ಜನರಿಗೆ ಹೇಳುತ್ತಿದ್ದಾರೆ” ಎಂದು ಹೇಳಿಕೆ ನೀಡಿದ್ದರು.
ಇದನ್ನು ಓದಿದ್ದೀರಾ? ವಿಜಯಪುರ | ದಲಿತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಕೊಲೆ: ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ
ಈ ಹೇಳಿಕೆ ಆಕ್ರೋಶಕ್ಕೆ ಕಾರಣವಾಗುತ್ತಿದ್ದಂತೆ ವಿಜಯಪುರ ಜಿಲ್ಲಾಧಿಕಾರಿ ಸ್ವಾಮೀಜಿಗೆ ಅಕ್ಟೋಬರ್ 16ರಿಂದ ಡಿಸೆಂಬರ್ 14ರವರೆಗೆ ವಿಜಯಪುರ ಜಿಲ್ಲೆ ಪ್ರವೇಶಿಸಬಾರದು ಎಂದು ಆದೇಶಿಸಿದ್ದರು. ಈ ಆದೇಶವನ್ನು ಪ್ರಶ್ನಿಸಿ ಕಾಡಸಿದ್ದೇಶ್ವರ ಸ್ವಾಮೀಜಿ ಹೈಕೋರ್ಟ್ ಮೆಟ್ಟಿಲೇರಿದ್ದರು.
ಇನ್ನು ಗುರುವಾರ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ಅವರ ಏಕಸದಸ್ಯ ಪೀಠವು, “ಸ್ವಾಮೀಜಿ ಸಾಮಾನ್ಯ ಜನರಿಗಿಂತಲೂ ಕೆಳ ಹಂತದ ಭಾಷೆ ಬಳಸಿದ್ದಾರೆ. ಅವರ ಸ್ಥಾನಕ್ಕೆ ಅದು ಶೋಭೆಯಲ್ಲ. ಈಗಾಗಲೇ ಸಮಾಜದಲ್ಲಿ ಅಶಾಂತಿಯಿದೆ. ಹಾಗಿರುವಾಗ ಸ್ವಾಮೀಜಿ ಅಕ್ಟೋಬರ್ 17ರಂದೇ ಏಕೆ ಅಲ್ಲಿಗೆ ತೆರಳಬೇಕು” ಎಂದು ಪ್ರಶ್ನಿಸಿದೆ.





