ಕಲಬುರಗಿ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ವ್ಯಾಪಕ ಮಳೆಯಾಗುತ್ತಿದ್ದು, ಭೀಮಾ ನದಿ ನೀರಿನ ಪ್ರವಾಹಕ್ಕೆ ಹಲವೆಡೆ ಸೇತುವೆಗಳು ಮುಳುಗಡೆಯಾಗಿವೆ. ಕೆಲ ಗ್ರಾಮಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.
ಕ್ಷಣ ಕ್ಷಣಕ್ಕೂ ಭೀಮಾ ನದಿ ಹರಿವಿನ ಪ್ರಮಾಣದಲ್ಲಿ ಭಾರಿ ಹೆಚ್ಚಳವಾಗುತ್ತಿರುವ ಕಾರಣ ಇನ್ನಷ್ಟು ಹಳ್ಳಿಗಳು ಮುಳುಗಡೆಯಾಗುವ ಆತಂಕ ಮೂಡಿದೆ. ಮಹಾರಾಷ್ಟ್ರದ ಜಲಾಶಯಗಳಿಂದ ಅಪಾರ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡುತ್ತಿರುವುದು ಇನ್ನಷ್ಟು ಸಂಕಷ್ಟ ತಂದೊಡ್ಡುತ್ತಿದೆ.
ಚಿಂಚೋಳಿ ತಾಲ್ಲೂಕಿನ ಚಂದ್ರಂಪಳ್ಳಿ ಜಲಾಶಯಕ್ಕೆ 7,500 ಕ್ಯೂಸೆಕಗೂ ಅಧಿಕ ಒಳ ಹರಿವಿದ್ದು, ಮೂರು ಗೇಟುಗಳನ್ನು ತಲಾ 10 ಅಡಿ ತೆರೆದು ನೀರು ಬಿಡಲಾಗಿದೆ. ಇದರಿಂದ ಚಂದ್ರಂಪಳ್ಳಿ ಕೂಡು ಸೇತುವೆ ಸಂಪೂರ್ಣ ಮುಳುಗಿದೆ. ಚಂದಾಪುರ, ಗಾರಂಪಳ್ಳಿ, ಅಣವಾರ, ಕಲ್ಲೂರು, ಕನಕಪುರ ಸೇರಿದಂತೆ ವಿವಿಧೆಡೆ ಮನೆಗಳಿಗೆ ನೀರು ನುಗ್ಗಿದೆ. ಗ್ರಾಮ ಸಂಪರ್ಕ ಕಡಿದುಕೊಂಡಿದ್ದು ಗ್ರಾಮಸ್ಥರು ಜಾಗೃತರಾಗಿರಲು ಅಧಿಕಾರಿಗಳು ಮನವಿ ಮಾಡಿದ್ದಾರೆ.
ನೆರೆ ಹಾವಳಿಯಿಂದ ಹಾನಿ ಉಂಟಾದ ಚಿತ್ತಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾಳಗಿ ತಾಲೂಕಿನ ಹಳೆ ಹೆಬ್ಬಾಳ, ಕಣಸೂರು ಹಾಗೂ ಮಲಘಾಣ ಗ್ರಾಮಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಶನಿವಾರ ಬೆಳಗ್ಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದರು.

ʼಪ್ರವಾಹದಿಂದ ಹಳೆ ಹೆಬ್ಬಾಳ ಗ್ರಾಮಕ್ಕೆ ನೀರು ನುಗ್ಗಿದ್ದು, ತಾತ್ಕಾಲಿಕವಾಗಿ ಕಾಳಜಿ ಕೇಂದ್ರವನ್ನು ತೆರೆಯಲಾಗಿದೆ. ಗ್ರಾಮದ ಸ್ಥಳಾಂತರಕ್ಕೆ ಸರ್ಕಾರ ಬದ್ದವಾಗಿದ್ದು, ಗ್ರಾಮಸ್ಥರು ಒಮ್ಮತದಿಂದ ಒಪ್ಪಿಗೆ ಸೂಚಿಸಬೇಕು ಎಂದು ಸಲಹೆ ನೀಡಿದರು. ಕಣಸೂರು ಗ್ರಾಮವನ್ನು ಸ್ಥಳಾಂತರ ಮಾಡುವುದಕ್ಕೆ ಗ್ರಾಮಸ್ಥರು ಒಪ್ಪಿಗೆ ಸೂಚಿಸಿದ್ದು, ಶೀಘ್ರದಲ್ಲಿಯೇ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಸರ್ಕಾರದಿಂದ ಸೂಕ್ತ ವ್ಯವಸ್ಥೆ ಮಾಡಲಾಗುವುದುʼ ಎಂದು ಭರವಸೆ ನೀಡಿದರು.
ಪ್ರವಾಹದಿಂದ ಹಾನಿಗೊಳಗಾದ ಕೃಷಿ ಬೆಳೆಗಳ ಸಮೀಕ್ಷೆ ನಡೆಸಿ ಕೂಡಲೇ ವರದಿ ಸಲ್ಲಿಸುವಂತೆ ಕೃಷಿ ಇಲಾಖೆ ಅಧಿಕಾರಿಗಳಿಗೆ ತಿಳಿಸಲಾಗಿದೆ. ಕಾಳಗಿ ಹಾಗೂ ಚಿತ್ತಾಪುರ ತಾಲೂಕಿನ ಮಳೆ ಹಾಗೂ ಪ್ರವಾಹಕ್ಕೀಡಾಗಿರುವ ಗ್ರಾಮಗಳ ವಸ್ತುಸ್ಥಿತಿ ಕುರಿತು ಸಮಗ್ರ ವರದಿಯನ್ನು ತಯಾರಿಸಿ ಒಂದು ವಾರದೊಳಗೆ ಸಲ್ಲಿಸುವಂತೆ ಜಿಪಂ ಸಿಇಒ ಅವರಿಗೆ ಸೂಚಿಸಿದರು.
ಬಳಿಕ ಚಿತ್ತಾಪುರ ತಾಲೂಕಿನ ಗುಂಡಗುರ್ತಿ ಗ್ರಾಮಕ್ಕೆ ಭೇಟಿ ನೀಡಿ ಪ್ರವಾಹದ ಪರಿಸ್ಥಿಯನ್ನು ಪರಿಶೀಲಿಸಿದರು. ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು ಜಿಲ್ಲಾಡಳಿತ ಸಿದ್ಧವಿದ್ದು, ಕಲಬುರಗಿ ಜಿಲ್ಲೆಯ ಜನರ ಹಿತ ಕಾಪಾಡುವುದಕ್ಕೆ ಸರ್ಕಾರ ಬದ್ದವಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಭರವಸೆ ನೀಡಿದರು.

ಈಗಾಗಲೇ ಗ್ರಾಮದಲ್ಲಿ ಕಾಳಜಿ ಕೇಂದ್ರವನ್ನು ಸ್ಥಾಪಿಸಲಾಗಿದೆ. ಸಂಜೆ ವೇಳೆಗೆ ಪ್ರವಾಹ ಮತ್ತಷ್ಟು ಹೆಚ್ಚಲಿದ್ದು ಮತ್ತೊಂದು ಕಾಳಜಿ ಕೇಂದ್ರವನ್ನು ತೆರೆಯುವುದಕ್ಕೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಗ್ರಾಮದ ಮಹಿಳೆಯರು ಮಕ್ಕಳು ಸಂಜೆವೇಳೆಗೆ ಕಾಳಜಿ ಕೇಂದ್ರದಲ್ಲಿ ಸ್ಥಳಾಂತರವಾಗಬೇಕು. ಅತಿವೃಷ್ಟಿಯಿಂದ ಹಾನಿಗೊಳಗಾದವರಿಗೆ ಈಗಾಗಲೇ ಸಂಸದರಿಂದ ಪರಿಹಾರದ ಕಿಟ್ ವಿತರಣೆ ಮಾಡಲಾಗಿದ್ದು, ಸರ್ಕಾರದಿಂದ ಹೆಚ್ಚಿನ ಪರಿಹಾರವನ್ನು ಒದಗಿಸಲಾಗುವುದು ಎಂದು ತಿಳಿಸಿದರು.
ಪ್ರವಾಹ ಪ್ರದೇಶಗಳಿಗೆ ಕೆಕೆಆರ್ಡಿಬಿ ಅಧ್ಯಕ್ಷ ಡಾ.ಅಜಯ್ ಸಿಂಗ್ ಭೇಟಿ :
ಅತಿಯಾದ ಮಳೆ ಮತ್ತು ತೀವ್ರ ಪ್ರವಾಹದಿಂದಾಗಿ ಹಾನಿಗೊಳಗಾದ ಜೇವರ್ಗಿ ತಾಲೂಕಿನ ಕಟ್ಟಿ ಸಂಗಾವಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಿಗೆ ಅಧಿಕಾರಿಗಳೊಂದಿಗೆ ಜೇವರ್ಗಿ ಶಾಸಕ, ಕೆಕೆಆರ್ಡಿಬಿ ಅಧ್ಯಕ್ಷ ಡಾ.ಅಜಯ್ ಸಿಂಗ್ ಶನಿವಾರ ಬೆಳಿಗ್ಗೆ ಭೇಟಿ ನೀಡಿ ವೀಕ್ಷಿಸಿದರು.

ಮಳೆ ಮತ್ತು ಪ್ರವಾಹದಿಂದ ಹಾನಿಗೊಳಗಾದ ನಾಗರೀಕರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲು ಮತ್ತು ಹಾನಿಗೊಳಗಾದ ಬೆಳೆಗಳ ಬಗ್ಗೆ ಮಾಹಿತಿ ನೀಡಲು ಹಾಗೂ ಪರಿಹಾರದ ಬಗ್ಗೆ ಕ್ರಮವಹಿಸಿಲು ಗಮನ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಬಳಿಕ ಜೇವರ್ಗಿ ತಾಲೂಕಿನ ಕೋನ ಹಿಪ್ಪರಗಾ ಸುತ್ತ ಮುತ್ತಲಿನ ಪ್ರದೇಶದಲ್ಲಿ ಅತಿಯಾದ ಮಳೆ ಮತ್ತು ತೀವ್ರ ಪ್ರವಾಹದಿಂದಾಗಿ ಹಾನಿಗೊಳಗಾದ ಸ್ಥಳಗಳನ್ನು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿ ಸಿದ್ಧತೆ ಪರಿಶೀಲನೆ ನಡೆಸಿದರು.

ಮಹಾರಾಷ್ಟ್ರದ ಸೀನಾ, ಉಜನಿ ಹಾಗೂ ವೀರ್ ಜಲಾಶಯದಿಂದ 3.50 ಲಕ್ಷ ಕ್ಯೂಸೆಕ್ ನೀರು ಹರಿಸಲಾಗುತ್ತಿದೆ. ಇದರಿಂದಾಗಿ ಜೇವರ್ಗಿ ತಾಲ್ಲೂಕಿನ ಕಟ್ಟಿಸಂಗಾವಿ, ಕೂಡಿ, ಕೋಬಾಳ, ಮಂದರವಾಡ, ಹಂದನೂರ, ಇಟಗಾ, ಮಾಹೂರ, ಹಂಚಿನಾಳ, ಬೋಸಗಾ, ರಾಸಣಗಿ ಹಾಗೂ ಕಲಬುರಗಿ ತಾಲ್ಲೂಕಿನ ಸೋಮನಾಥ ಹಳ್ಳಿ, ಫಿರೋಜಾಬಾದ್, ಸರಡಗಿ ಗ್ರಾಮಗಳಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದೆ.
ಜೀವರ್ಗಿ ಪಟ್ಟಣ ಸಮೀಪದ ಭೀಮಾನದಿ ಸೇತುವೆ ಮುಳುಗುವ ಹಂತ ತಲುಪಿದ್ದರಿಂದ ಶನಿವಾರ ಬೆಳಿಗ್ಗೆ ಭಾರಿ ವಾಹನಗಳ ಸಂಚಾರ ಸ್ಥಗಿತಗೊಳಿಸಲಾಯಿತು. ಇದರಿಂದ ಬೆಂಗಳೂರು, ಹುಬ್ಬಳಿ, ವಿಜಯಪುರ ಮತ್ತಿತರ ಕಡೆಗಳಿಂದ ಆಗಮಿಸಿ ಪ್ರಯಾಣಿಕರು ಪರದಾಡಿದರು.
ಮಹಾರಾಷ್ಟ್ರ ಮತ್ತು ಕರ್ನಾಟಕದಲ್ಲಿ ನಿರಂತರ ಮಳೆ ಮತ್ತು ಉಕ್ಕಿ ಹರಿಯುವ ನದಿಗಳು ಕಲಬುರಗಿಯ 36 ಹಳ್ಳಿಗಳಿಗೆ ಅಪಾರ ಸಂಕಷ್ಟ ತಂದಿವೆ. ಕುಟುಂಬಗಳನ್ನು ಸುರಕ್ಷಿತ ಎತ್ತರದ ಪ್ರದೇಶಗಳಿಗೆ ಸ್ಥಳಾಂತರಿಸಲು ರಾಜ್ಯ ಸರ್ಕಾರವು ಎಸ್ಡಿಆರ್ಎಫ್ ಮತ್ತು ಲಭ್ಯವಿರುವ ಪ್ರತಿಯೊಂದು ಸಂಪನ್ಮೂಲವನ್ನು ನಿಯೋಜಿಸಿದೆ. ಒಟ್ಟು 36 ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದ್ದು, 1,500 ಕ್ಕೂ ಹೆಚ್ಚು ಜನರಿಗೆ ಊಟ ಮತ್ತು ವಸತಿ ವ್ಯವಸ್ಥೆ ಮಾಡಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದರು.
ಇದನ್ನೂ ಓದಿ : ಬೀದರ್ | ಮುಂದುವರೆದ ಮಳೆ : ಮುಳುಗಡೆಯಾದ ಸೇತುವೆಗಳು; ಜಲಾವೃತವಾದ ಬೆಳೆ
ʼಈ ಕಷ್ಟದ ಸಮಯದಲ್ಲಿ ಜನರು ಮತ್ತು ಅವರ ಜಾನುವಾರುಗಳನ್ನು ರಕ್ಷಿಸಲು, ಜಿಲ್ಲಾಡಳಿತವು ಸ್ವಯಂಸೇವಕರ ಜೊತೆಗೆ ನಿರಂತರವಾಗಿ ಕೆಲಸ ಮಾಡುತ್ತಿದೆ. ನಮ್ಮ ಜನರ ಸುರಕ್ಷತೆಯೇ ನಮ್ಮ ಮೊದಲ ಆದ್ಯತೆಯಾಗಿದೆʼ ಎಂದು ಹೇಳಿದರು.





