ಸರ್ಕಾರಿ ಶಾಲೆಗಳ ಸ್ಥಳಗಳಲ್ಲಿ ಆರ್ಎಸ್ಎಸ್ ಚಟುವಟಿಕೆ ನಿರ್ಬಂಧಿಸುವಂತೆ ಕೋರಿ ಪತ್ರ ಬರೆದ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ದುಷ್ಕರ್ಮಿಗಳು ಕರೆ ಮಾಡಿ ಬೆದರಿಸುತ್ತಿರುವುದನ್ನು ಖಂಡಿಸಿ ಗುರುವಾರ ನಗರದ ವಿವಿಧೆಡೆ ಪ್ರತಿಭಟನೆಗಳು ನಡೆದವು.
ಸಾರ್ವಜನಿಕ ಸ್ಥಳಗಳಲ್ಲಿ ಆರ್ಎಸ್ಎಸ್ ಚಟುವಟಿಕೆಗಳನ್ನು ನಿಷೇಧಿಸಬೇಕೆಂದು ಆಗ್ರಹಿಸಿ ಜಿಲ್ಲಾ ಯುವ ಕಾಂಗ್ರೆಸ್ ಮತ್ತು ಪ್ರಿಯಾಂಕ್ ಖರ್ಗೆ ಅಭಿಮಾನಿಗಳು ಗುರುವಾರ ಜಿಲ್ಲೆಯ ವಿವಿಧ ಭಾಗಗಳಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

‘ಸ್ಟ್ಯಾಂಡ್ ವಿತ್ ಪ್ರಿಯಾಂಕ ಖರ್ಗೆ’, ‘ಪ್ರಿಯಾಂಕ ಖರ್ಗೆ ಆಪ್ ಆಗೆ ಬಡೋ, ಹಮ್ ತುಮಾರೆ ಸಾಥ್ ಹೈ’ ಎಂಬ ಭಿತ್ತಿ ಪತ್ರಗಳನ್ನು ಹಿಡಿದು ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು ಸಂಚಾರ ತಡೆದು ಪ್ರತಿಭಟನೆ ನಡೆಸಿದರು.
ಜಿಲ್ಲೆಯ ವಾಡಿ, ಚಿತ್ತಾಪುರ ಸೇರಿದಂತೆ ಅನೇಕ ಕಡೆಗಳಲ್ಲಿ ಟೈರುಗಳಿಗೆ ಬೆಂಕಿ ಹಚ್ಚಿ, ರಸ್ತೆ ತಡೆದು ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಧಿಕಾರಿ ಕಚೇರಿ ಎದುರು ಯುವ ಕಾಂಗ್ರೆಸ್ ಮತ್ತು ಮಹಿಳಾ ಘಟಕದ ಕಾರ್ಯಕರ್ತರು ಜಮಾಯಿಸಿ ಘೋಷಣೆಗಳ ಮೂಲಕ ತಮ್ಮ ಅಸಮಾಧಾನ ವ್ಯಕ್ತಪಡಿಸಿದರು.
ಸಂವಿಧಾನ ತೆಗೆದು ಮನುಸ್ಮೃತಿ ತರುವುದು ಆರ್ಎಸ್ಎಸ್ ಹುನ್ನಾರ. ಹೀಗಾಗಿ ಸಂವಿಧಾನವನ್ನು ಪ್ರತಿಪಾದಿಸುವ ಸಚಿವ ಪ್ರಿಯಾಂಕ್ ಬೆಳವಣಿಗೆ ಸಹಿಸದೇ ಅವರ ವಿರುದ್ಧ ಕೀಳುಮಟ್ಟದ ಭಾಷೆ ಬಳಸಿ ನಿಂದಿಸಲಾಗುತ್ತಿದೆ. ಸಮಾಜದಲ್ಲಿ ಕೆಟ್ಟ ಆಲೋಚನೆಗಳಿಗೆ ಬಿಜೆಪಿ ಹಾಗೂ ಆರ್ಎಸ್ಎಸ್ ಪುಷ್ಟಿಕೊಡುತ್ತಿದೆ. ರಾಜ್ಯ ಹಾಗೂ ದೇಶದಿಂದ ಆರ್ಎಸ್ಎಸ್ ಕೂಡಲೇ ನಿಷೇಧಿಸಬೇಕು’ ಎಂದು ಆಗ್ರಹಿಸಿದರು

ಈ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರಾದ ಪ್ರವೀಣ್ ಪಾಟೀಲ್ ಹರವಾಳ, ಡಾ.ಕಿರಣ ದೇಶಮುಖ, ಫಾರೂಕ್ ಮನಿಯಾರ, ರಾಜೀವ್ ಜಾನೆ, ಶಿವಾನಂದ ಹೊನಗುಂಟಿ, ಈರಣ್ಣ ಪಾಟೀಲ್ ಝಳಕಿ, ದಿನೇಶ್ ದೊಡ್ಡಮನಿ, ಓವೈಸ್ ಶೇಖ್, ಖುಸ್ರೋ ಜಾಗಿರದಾರ, ಪ್ರಕಾಶ ಕಪನೂರ್, ರೇಣುಕಾ ಸಿಂಗೆ, ಗೌತಮ್ ಕರಿಕಲ್, ದೇವೇಂದ್ರ ಸಿನ್ನೂರ್, ಅಶ್ವಿನ್ ಸಂಕಾ, ಶೇಖ ಸಮರಿನ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.





