ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಕದನ ತೀವ್ರ ಸ್ವರೂಪ ಪಡೆದುಕೊಳ್ಳುವ ಲಕ್ಷಣ ಕಾಣಿಸಿಕೊಳ್ಳುತ್ತಿರುವ ಮಧ್ಯೆಯೇ, ‘ನಾಯಕತ್ವದ ಗೊಂದಲಗಳನ್ನು ಹೈಕಮಾಂಡ್ ಸೃಷ್ಟಿಸಿಲ್ಲ.ಅವೆಲ್ಲ ಸ್ಥಳೀಯವಾಗಿ ಸೃಷ್ಟಿಯಾಗುತ್ತಿದೆ’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಅಷ್ಟೇ ಅಲ್ಲ,‘ಈ ಗೊಂದಲಗಳನ್ನು ಸ್ಥಳೀಯ ನಾಯಕರೇ ಪರಿಹರಿಸಿಕೊಳ್ಳಬೇಕು. ಎಲ್ಲದಕ್ಕೂ ಹೈಕಮಾಂಡ್ನತ್ತ ಬೊಟ್ಟು ಮಾಡಿದರೆ ಹೇಗೆ’ ಎಂದು ಪ್ರಶ್ನಿಸಿದ್ದಾರೆ.
ಕಲಬುರಗಿಯಲ್ಲಿ ಮಾತನಾಡಿದ ಅವರು, ‘ಯಾವುದೇ ಒಪ್ಪಂದವಾಗಿಲ್ಲ. ಐದು ವರ್ಷ ನಾನೇ ಮುಖ್ಯಮಂತ್ರಿ’ ಎಂಬ ಸಿದ್ದರಾಮಯ್ಯ ವಾದಕ್ಕೆ, ‘ಸೂಕ್ತ ಸಮಯದಲ್ಲಿ ಇಬ್ಬರನ್ನೂ ಕರೆಯಿಸುವುದಾಗಿ ಹೈಕಮಾಂಡ್ ಹೇಳಿದೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯಿಸಿರುವ ಬೆನ್ನಲ್ಲೆ, ಹೈಕಮಾಂಡ್ ಅನ್ನು ದೂಷಿಸುವ ಬದಲು ಸ್ಥಳೀಯ ನಾಯಕರು ಆಂತರಿಕ ಗೊಂದಲವನ್ನು ಸರಿಪಡಿಸಿಕೊಳ್ಳಬೇಕು ಎಂದು ಖರ್ಗೆ ತಾಕೀತು ಮಾಡಿದ್ದಾರೆ.
ನಾಯಕತ್ವದ ವಿಚಾರದಲ್ಲಿ ಉಂಟಾಗಿರುವ ಗೊಂದಲಗಳಿಗೆ ಭಾನುವಾರ ಇಲ್ಲಿ ಗರಂ ಆದ ಖರ್ಗೆ, ‘ಕಾಂಗ್ರೆಸ್ ಪಕ್ಷ ಕಾರ್ಯಕರ್ತರು ಒಳಗೊಂಡು ಎಲ್ಲರೂ ಸೇರಿ ಕಟ್ಟಿದ ಪಕ್ಷ. ಪಕ್ಷ ಸಂಘಟನೆ ಕೆಲಸ ನನ್ನಿಂದ ಆಗಿದೆ, ತನ್ನಿಂದ ಆಗಿದೆ ಎಂದು ಯಾರೂ ಹೇಳಬಾರದು. ಕಾರ್ಯಕರ್ತರೂ ಪಕ್ಷ ಕಟ್ಟಿದ್ದು ಅವರು, ಇವರು ಎಂದು ಹೇಳುವುದನ್ನು ಬಿಡಬೇಕು’ ಎಂದು ಪರೋಕ್ಷವಾಗಿ ಕುರ್ಚಿ ಕಿತ್ತಾಟದಲ್ಲಿ ತೊಡಗಿರುವ ನಾಯಕರಿಗೆ ಕಿವಿಮಾತು ಹೇಳಿದ್ದಾರೆ.
ಡಿ.ಕೆ.ಶಿವಕುಮಾರ್ ಅವರ ನವದೆಹಲಿ ಭೇಟಿಯ ಬಗ್ಗೆ ತಮಗೆ ಮಾಹಿತಿ ಇಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ವಾಯು ಮಾಲಿನ್ಯದ ಚರ್ಚೆಯೇ ಇಲ್ಲದೆ ಮುಗಿಯಿತು ಸಂಸತ್ ಅಧಿವೇಶನ!
ಕಾಂಗ್ರೆಸ್ಸರ್ಕಾರ ಎರಡೂವರೆ ವರ್ಷ ಪೂರ್ಣಗೊಳಿಸುತ್ತಿದ್ದಂತೆಯೇ ‘ಅಧಿಕಾರ ಹಂಚಿಕೆಯ ಸೂತ್ರ’ದ ವಿಷಯ ಮುನ್ನೆಲೆಗೆ ಬಂದಿತ್ತು. ಬೆಳಗಾವಿಯಲ್ಲಿ ನಡೆದ ವಿಧಾನಮಂಡಲ ಅಧಿವೇಶನದುದ್ದಕ್ಕೂ ‘ನಾಯಕತ್ವ ಬದಲಾವಣೆ’ಯ ವಿಷಯ ಸದ್ದು ಮಾಡಿತ್ತು. ಕಲಾಪದ ಕೊನೆಯ ದಿನ ವಿಧಾನಸಭೆಯಲ್ಲಿ ಮಾತನಾಡಿದ್ದ ಸಿದ್ದರಾಮಯ್ಯ,‘ನನ್ನ ಪ್ರಕಾರ ಹೈಕಮಾಂಡ್ ನಾಯಕರು ನನ್ನ ಪರವಾಗಿದ್ದಾರೆ. ಹೈಕಮಾಂಡ್ ನಾಯಕರು ತೀರ್ಮಾನಿಸುವವರೆಗೂ ನಾನೇ ಮುಖ್ಯಮಂತ್ರಿ. ಅವರು ಏನು ತೀರ್ಮಾನ ಮಾಡುತ್ತಾರೊ ಅದರ ಪ್ರಕಾರ ನಡೆದುಕೊಳ್ಳುತ್ತೇವೆ’ ಎಂದಿದ್ದರು.
ಮುಖ್ಯಮಂತ್ರಿ ನೀಡಿದ್ದ ಹೇಳಿಕೆಗೆ ಸದನದ ಹೊರಗಡೆ ಪ್ರತಿಕ್ರಿಯಿಸಿದ್ದ ಡಿ.ಕೆ. ಶಿವಕುಮಾರ್, ‘ನನ್ನ ಮತ್ತು ಸಿದ್ದರಾಮಯ್ಯ ನಡುವೆ ಒಪ್ಪಂದ ಆಗಿದೆ. ಸೂಕ್ತ ಸಮಯದಲ್ಲಿ ಕರೆಯಿಸುತ್ತೇವೆ ಎಂದು ಹೈಕಮಾಂಡ್ ನಾಯಕರು ನಮಗಿಬ್ಬರಿಗೂಹೇಳಿದ್ದಾರೆ’ ಎಂದಿದ್ದರು.
ನಾಯಕತ್ವ ವಿಷಯದ ಬಗ್ಗೆ ದೆಹಲಿಯಲ್ಲಿಕಾಂಗ್ರೆಸ್ ಹೈಕಮಾಂಡ್ ನಾಯಕರು ಇತ್ತೀಚೆಗೆ ಸಮಾಲೋಚನೆ ನಡೆಸಿದ್ದರು. ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ನಿವಾಸದಲ್ಲಿ ನಡೆದಿದ್ದ ಈ ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ. ವೇಣುಗೋಪಾಲ್ ಭಾಗಿಯಾಗಿದ್ದರು. ರಾಜ್ಯದಲ್ಲಿನ ಕುರ್ಚಿ ಕಾದಾಟದ ಬಗ್ಗೆ ಈ ಸಭೆಯಲ್ಲಿ ವಿಸ್ತೃತ ಚರ್ಚೆ ನಡೆದಿತ್ತು.
ಕೇಂದ್ರ ನಾಯಕತ್ವ ನಿರ್ಧಾರ ತೆಗೆದುಕೊಳ್ಳುವವರೆಗೆ ‘ಅಧಿಕಾರ ಹಸ್ತಾಂತರ’ ವಿಷಯದ ಬಗ್ಗೆ ಯಾವುದೇ ಸಾರ್ವಜನಿಕ ಹೇಳಿಕೆ ನೀಡದಂತೆ ಎರಡೂ ಬಣಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಲು ಸಭೆಯಲ್ಲಿ ತೀರ್ಮಾನಿಸಲಾಗಿತ್ತು. ಆ ಬಳಿಕ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರು ಉಪಾಹಾರ ಕೂಟದ ಮೂಲಕ, ‘ಅಧಿಕಾರ ಹಂಚಿಕೆ ವಿಚಾರದಲ್ಲಿ ತಮ್ಮ ನಡುವೆ ಯಾವುದೇ ಗೊಂದಲ ಇಲ್ಲ. ಹೈಕಮಾಂಡ್ ತೀರ್ಮಾನವೇ ಅಂತಿಮ’ ಎಂದಿದ್ದರು.





