ರಾಜ್ಯದಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲೆ ಹೆಚ್ಚುತ್ತಿರುವ ದೌರ್ಜನ್ಯಗಳನ್ನು ತಡೆಯಲು ಹಾಗೂ ಅವರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಹಿಡಿಯಲು ಬಲಿಷ್ಠ ಮಹಿಳಾ ಆಂದೋಲನ ಅಗತ್ಯವಿದೆ ಎಂದು ಎಐಎಂಎಸ್ಎಸ್ ಜಿಲ್ಲಾ ಅಧ್ಯಕ್ಷೆ ಶ್ರೀಮತಿ ಗುಂಡಮ್ಮ ಮಡಿವಾಳ್ ಹೇಳಿದರು.
ನಗರದ ಎಸ್ಪಿ ವೃತ್ತದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಸಂಘಟನೆಯಿಂದ ಆಯೋಜಿಸಲಾದ ಪ್ರತಿಭಟನಾ ಸಭೆ, ಪುಸ್ತಕ ಮಾರಾಟ ಹಾಗೂ ಸಹಿ ಸಂಗ್ರಹಣಾ ಅಭಿಯಾನವನ್ನು ಉದ್ದೇಶಿಸಿ ಅವರು ಮಾತನಾಡಿದರು.
‘ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ ದೇಶದಾದ್ಯಂತ ಮಹಿಳೆಯರ ಮೇಲೆ ನಡೆಯುತ್ತಿರುವ ಅಪರಾಧಗಳನ್ನು ಕೊನೆಗೊಳಿಸಲು ಹಾಗೂ ಅವರ ಹಕ್ಕುಗಳ ರಕ್ಷಣೆಗೆ ಶ್ರಮಿಸುತ್ತಿದೆ. ಬಾಲ್ಯ ವಿವಾಹ, ಸ್ತ್ರೀ ಭ್ರೂಣ ಹತ್ಯೆ, ವರದಕ್ಷಿಣೆ ಕೊಲೆ, ಲಿಂಗ ತಾರತಮ್ಯ, ಮರ್ಯಾದಾಗೇಡು ಹತ್ಯೆ, ಅಪೌಷ್ಟಿಕತೆ, ಅಭದ್ರತೆ ಮತ್ತು ಕೌಟುಂಬಿಕ ದೌರ್ಜನ್ಯದಂತಹ ಹಲವಾರು ಜ್ವಲಂತ ಸಮಸ್ಯೆಗಳ ವಿರುದ್ಧ ಮಹಿಳೆಯರನ್ನು ಸಂಘಟಿಸಿ ಹೋರಾಟ ನಡೆಸುತ್ತಿದೆ’ ಎಂದು ಹೇಳಿದರು.

‘ಕರ್ನಾಟಕದಲ್ಲಿಯೂ ಇದೇ ಉದ್ದೇಶದಿಂದ ವಿವಿಧ ಹೋರಾಟಗಳನ್ನು ನಡೆಸಲಾಗುತ್ತಿದ್ದು, 2025ರ ನವೆಂಬರ್ 25ರಿಂದ 2026ರ ಮಾರ್ಚ್ 23ರವರೆಗೆ ಮಹಿಳೆಯರು ಮತ್ತು ಮಕ್ಕಳ ಮೇಲಿನ ಅಪರಾಧಗಳ ವಿರುದ್ಧ ರಾಜ್ಯವ್ಯಾಪಿ ಸಹಿ ಸಂಗ್ರಹಣಾ ಅಭಿಯಾನ ಹಮ್ಮಿಕೊಳ್ಳಲಾಗಿದೆ’ ಎಂದು ತಿಳಿಸಿದರು.
‘ಮಹಿಳೆಯರು ಇಂದಿನ ದಿನಗಳಲ್ಲಿ ಎಲ್ಲ ಕ್ಷೇತ್ರಗಳಲ್ಲಿಯೂ ಗಮನಾರ್ಹ ಸಾಧನೆ ಮಾಡುತ್ತಿದ್ದರೂ ಸಮಾಜದ ದೃಷ್ಟಿಕೋನ ಇನ್ನೂ ಸಂಪೂರ್ಣವಾಗಿ ಪ್ರಜಾತಾಂತ್ರಿಕವಾಗಿಲ್ಲ. ಅಶ್ಲೀಲ ಸಿನಿಮಾ, ಸಾಹಿತ್ಯ, ಜಾಹೀರಾತುಗಳು, ಪೋರ್ನ್ ವೆಬ್ಸೈಟ್ಗಳು ಹಾಗೂ ಮದ್ಯ–ಮಾದಕ ವಸ್ತುಗಳ ಹಾವಳಿಯಿಂದ ಸಾಮಾಜಿಕ ವಾತಾವರಣ ಕಲುಷಿತಗೊಂಡು ಮಹಿಳೆಯರ ಜೀವ ಮತ್ತು ಜೀವನದ ಮೇಲೆ ನಿರಂತರ ದಾಳಿಗಳು ಹೆಚ್ಚುತ್ತಿವೆ’ ಎಂದು ಆತಂಕ ವ್ಯಕ್ತಪಡಿಸಿದರು.
‘ರಾಜ್ಯದಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲಿನ ಅತ್ಯಾಚಾರ, ಗುಂಪು ಅತ್ಯಾಚಾರ, ಕೊಲೆ, ಮರ್ಯಾದಾಗೇಡು ಹತ್ಯೆ, ಆಸಿಡ್ ದಾಳಿ ಹಾಗೂ ಕೌಟುಂಬಿಕ ದೌರ್ಜನ್ಯ ಪ್ರಕರಣಗಳು ಗಣನೀಯವಾಗಿ ಹೆಚ್ಚುತ್ತಿವೆ. 2023ರಲ್ಲಿ 600, 2024ರಲ್ಲಿ 739 ಹಾಗೂ 2025ರ ಜುಲೈವರೆಗೆ 547 ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ. ನಾಲ್ಕು ತಿಂಗಳಲ್ಲಿ 979 ಬಾಲಕಿಯರ ಮೇಲಿನ ಅತ್ಯಾಚಾರ ಪ್ರಕರಣಗಳು ದಾಖಲಾಗಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಅತಿ ಹೆಚ್ಚು ಪ್ರಕರಣಗಳು ದಾಖಲಾಗಿವೆ’ ಎಂದು ಅವರು ತಿಳಿಸಿದರು.

‘ಕರ್ನಾಟಕದಲ್ಲಿ ಬಾಲ್ಯ ವಿವಾಹ ಹಾಗೂ ಹದಿಹರೆಯದ ಗರ್ಭಧಾರಣೆ ಪ್ರಕರಣಗಳು ಕೂಡ ಆತಂಕಕಾರಿಯಾಗಿ ಹೆಚ್ಚುತ್ತಿವೆ. ಆರ್ಸಿಎಚ್ ಪೋರ್ಟಲ್ ಅಂಕಿಅಂಶಗಳ ಪ್ರಕಾರ 2023–24ರ ಜುಲೈವರೆಗೆ ರಾಜ್ಯದಲ್ಲಿ 80,813 ಹದಿಹರೆಯದ ಗರ್ಭಧಾರಣೆ ಪ್ರಕರಣಗಳು ವರದಿಯಾಗಿವೆ’ ಎಂದು ಹೇಳಿದರು.
‘ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಡಾ. ಸೀಮಾ ದೇಶಪಾಂಡೆ ಮಾತನಾಡಿ, ಈ 21ನೇ ಶತಮಾನದಲ್ಲಿಯೂ ಅನೇಕ ಹೆಣ್ಣುಮಕ್ಕಳಿಗೆ ಶಿಕ್ಷಣದ ಅವಕಾಶಗಳು ಸಿಗುತ್ತಿಲ್ಲ. ಇಂತಹ ಸಂದರ್ಭದಲ್ಲಿ ರಾಜ್ಯದಲ್ಲಿ 40 ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಮುಚ್ಚುವ ಯೋಜನೆ ಹೆಣ್ಣುಮಕ್ಕಳ ಶಿಕ್ಷಣಕ್ಕೆ ದೊಡ್ಡ ಹೊಡೆತವಾಗಲಿದೆ’ ಎಂದು ಆತಂಕ ವ್ಯಕ್ತಪಡಿಸಿದರು.
‘ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯಗಳನ್ನು ತಡೆಯಲು ಹಾಗೂ ಅವರ ಹಕ್ಕುಗಳ ರಕ್ಷಣೆಗೆ ಸಂಬಂಧಿಸಿದಂತೆ ಸರ್ಕಾರವನ್ನು ಒತ್ತಾಯಿಸಿ ಸಹಿ ಸಂಗ್ರಹಣಾ ಅಭಿಯಾನ ನಡೆಸಲಾಗುತ್ತಿದೆ’ ಎಂದು ತಿಳಿಸಿದರು.
ಇದನ್ನು ಓದಿದ್ದೀರಾ? ಮಹಿಳಾ ದಿನದ ವಿಶೇಷ | ಗ್ರಾಮೀಣ ಆರ್ಥಿಕತೆ: ಹೈನುಗಾರಿಕೆಯಲ್ಲಿ ಮಹಿಳಾ ಸಬಲೀಕರಣದ ಕಥೆ
ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ನಾಯಕಿಯರಾದ ವಿಶಾಲಾಕ್ಷಿ ಪಾಟೀಲ್, ಮಹಾದೇವಿ ಮಾನೆ, ರಾಧಾ ಜಿ., ಜಯಶ್ರೀ, ಭಾರತಿ, ರೂಪಾವತಿ, ರಾಧಿಕಾ, ಮಹಾದೇವಿ ಆತನೂರ, ಮಹಾದೇವಿ ಜಮಾದರ್, ಶರಣಮ್ಮ ಸೇರಿದಂತೆ ಹಲವು ಸದಸ್ಯರು ಭಾಗವಹಿಸಿದ್ದರು.





