ಕಲಬುರಗಿ ನಗರ ವ್ಯಾಪ್ತಿಯಲ್ಲಿ ಭೂಸ್ವಾಧೀನ ಮಾಡಿಕೊಂಡ ಬಳಿಕ ಹಲವು ವರ್ಷಗಳಿಂದ ಪರಿಹಾರ ಪಾವತಿಸದೆ ವಿಳಂಬ ಮಾಡಿರುವ ಪ್ರಕರಣದಲ್ಲಿ ಜಿಲ್ಲಾಧಿಕಾರಿಗಳ ಅಧಿಕೃತ ವಾಹನವನ್ನು ಜಪ್ತಿ ಮಾಡುವಂತೆ ಪ್ರಧಾನ ಸಿವಿಲ್ ನ್ಯಾಯಾಲಯ ಆದೇಶಿಸಿದೆ.
ದಿವಾಣಿ ಹಿರಿಯ ಶ್ರೇಣಿ ನ್ಯಾಯಾಧೀಶರು ಕೇಸ್ ನಂ. 59/19 ವಿಚಾರಣೆ ನಡೆಸಿ, ಪರಿಹಾರ ಪಾವತಿಯಲ್ಲಿ ಉಂಟಾದ ದೀರ್ಘಕಾಲದ ವಿಳಂಬವನ್ನು ಗಂಭೀರವಾಗಿ ಪರಿಗಣಿಸಿದರು. ಅದರಂತೆ ಜಿಲ್ಲಾಧಿಕಾರಿಗಳ ಅಧಿಕೃತ ವಾಹನ ಇನ್ನೋವಾ ಕ್ರಿಷ್ಟಾ(ಕೆ.ಎ 32 ಜಿ 9990) ಕಾರನ್ನು ಜಪ್ತಿ ಮಾಡಲು ಆದೇಶ ಹೊರಡಿಸಲಾಗಿದೆ.
ಪ್ರಕಾಶ್ ಮಕಲಪ್ಪ ಎಂಬ ಭೂಸ್ವಾಮಿ, ತಮ್ಮ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿದ್ದರೂ ಪರಿಹಾರ ನೀಡದಿರುವ ಕುರಿತು ನ್ಯಾಯಾಲಯದ ಮೊರೆ ಹೋಗಿದ್ದರು. ಪ್ರಕರಣ ಹಲವು ವರ್ಷಗಳಿಂದ ಮುಂದುವರೆದಿದ್ದರೂ ಪರಿಹಾರ ಪಾವತಿ ಪ್ರಕ್ರಿಯೆಯಲ್ಲಿ ಸ್ಪಷ್ಟ ಪ್ರಗತಿ ಕಾಣದ ಹಿನ್ನೆಲೆಯಲ್ಲಿ ನ್ಯಾಯಾಲಯ ಕಠಿಣ ನಿಲುವು ತಾಳಿದೆ.
ಆದೇಶ ಹೊರಬಿದ್ದ ಬಳಿಕ ಮಹಾನಗರ ಪಾಲಿಕೆ ಆಯುಕ್ತ ಅವಿನಾಶ್ ಶಿಂಧೆ, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಹಾಗೂ ಸಹಾಯಕ ಆಯುಕ್ತ ಸಾಹಿತ್ಯ ಆಲದಕಟ್ಟಿ ನ್ಯಾಯಾಲಯಕ್ಕೆ ಆಗಮಿಸಿ ವಕೀಲರೊಂದಿಗೆ ಚರ್ಚೆ ನಡೆಸಿ ಪರಿಸ್ಥಿತಿ ಮನವರಿಕೆ ಮಾಡಲು ಪ್ರಯತ್ನಿಸಿದರು.
ಈ ಸುದ್ದಿ ಓದಿದ್ದೀರಾ? ಸೇಡಂ | ಕಾಳಸಂತೆಯಲ್ಲಿ ಪಡಿತರ ಮಾರಾಟ: ತಲಾ ಒಂದು ಕೆಜಿ ಅಕ್ಕಿ, 20 ರೂ. ನೀಡಬೇಕೆಂದು ಡೀಲರ್ ಧಮ್ಕಿ
ನ್ಯಾಯಾಲಯದ ಈ ಕ್ರಮ ಜಿಲ್ಲಾಡಳಿತ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಭೂಸ್ವಾಧೀನ ಪ್ರಕರಣಗಳಲ್ಲಿ ಪರಿಹಾರ ಪಾವತಿಯಲ್ಲಿ ತ್ವರಿತ ಕ್ರಮ ಕೈಗೊಳ್ಳುವ ಅಗತ್ಯತೆಯನ್ನು ಮತ್ತೊಮ್ಮೆ ಒತ್ತಿಹೇಳಿದಂತಾಗಿದೆ.





