ಮಹಾಶಿವರಾತ್ರಿ ಹಬ್ಬದ ಅಂಗವಾಗಿ ಅನುಮತಿ ಪಡೆಯದೆ ಕಲಬುರಗಿ ಕೋಟೆ ಒಳಗೆ ಪ್ರವೇಶಿಸಿ ಪೂಜೆ ಸಲ್ಲಿಸಲು ಯತ್ನಿಸಿದ ಪ್ರಕರಣದಲ್ಲಿ ಪಿಎಸ್ಸೆ ನೇಮಕಾತಿ ಅಕ್ರಮದ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಸೇರಿದಂತೆ ಹಲವಾರು ಹಿಂದುತ್ವ ಸಂಘಟನೆಗಳ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ರವಿವಾರ ಬೆಳಿಗ್ಗೆಯಿಂದಲೇ ಕೋಟೆ ಮುಂಭಾಗದಲ್ಲಿ ಹಿಂದುತ್ವ ಸಂಘಟನೆಗಳ ಕಾರ್ಯಕರ್ತರು ಜಮಾಯಿಸಿ, ಕೋಟೆಯೊಳಗಿನ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಪೂಜೆ ನೆರವೇರಿಸಲು ಅವಕಾಶ ನೀಡಬೇಕು ಎಂದು ಆಗ್ರಹಿಸಿದರು. ದಿವ್ಯಾ ಹಾಗರಗಿ ಅವರ ನೇತೃತ್ವದಲ್ಲಿ ಕೆಲವರು ಕೋಟೆ ಒಳಪ್ರವೇಶಿಸಲು ಮುಂದಾದಾಗ ಕರ್ತವ್ಯದಲ್ಲಿದ್ದ ಪೊಲೀಸರು ತಡೆದರು.

ಈ ವೇಳೆ ಎಸಿಪಿ ಶಿವನಗೌಡ ಪಾಟೀಲ್ ನೇತೃತ್ವದ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಪುರಾತತ್ವ ಇಲಾಖೆಯ ಪೂರ್ವಾನುಮತಿ ಇಲ್ಲದೆ ಕೋಟೆಯೊಳಗೆ ಯಾವುದೇ ಧಾರ್ಮಿಕ ಕಾರ್ಯಕ್ರಮ ನಡೆಸಲು ಅವಕಾಶ ನೀಡಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಕೋಟೆ ಪುರಾತತ್ವ ಇಲಾಖೆಯ ವ್ಯಾಪ್ತಿಗೆ ಬರುವ ಹೇರಿಟೇಜ್ ಸ್ಮಾರಕವಾಗಿರುವುದರಿಂದ ನಿಯಮಾನುಸಾರ ಅನುಮತಿ ಕಡ್ಡಾಯವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪುರಾತತ್ವ ಇಲಾಖೆ ಸಾರ್ವಜನಿಕರಿಗೆ ದೇವಸ್ಥಾನದಲ್ಲಿ ಪೂಜೆ ಮಾಡಲು ಅವಕಾಶ ನೀಡದಿರುವುದನ್ನು ಖಂಡಿಸಿ ಕಾರ್ಯಕರ್ತರು ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು. ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾದರೂ, ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣದಲ್ಲಿ ಇಟ್ಟರು.

ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸರು ದಿವ್ಯಾ ಹಾಗರಗಿ ಸೇರಿದಂತೆ ಶಶಿಕುಮಾರ್ ಶೆಟ್ಟಿ, ಪ್ರಶಾಂತ್ ಜಾಧವ, ಪವನ್ ಪೂಜಾರಿ, ಸಾಗರ್ ರಾಠೋಡ್, ಅಣ್ಣಾರಾವ್ ಪಾಟೀಲ್ ಸೇರಿದಂತೆ ಹಲವು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದಾರೆ.
ಇದನ್ನು ಓದಿದ್ದೀರಾ? ಕಲಬುರಗಿ | ನದಿಯಲ್ಲಿ ಈಜಲು ಹೋದ ಯುವಕ ನೀರು ಪಾಲು
ಘಟನೆಯ ಹಿನ್ನೆಲೆ ಕೋಟೆ ಸುತ್ತಮುತ್ತ ಪೊಲೀಸ್ ಬಂದೋಬಸ್ತ್ ಹೆಚ್ಚಿಸಲಾಗಿದ್ದು, ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿದೆ. ಮುಂದಿನ ಬೆಳವಣಿಗೆಗಳತ್ತ ಸಾರ್ವಜನಿಕರ ಗಮನ ಕೇಂದ್ರೀಕೃತವಾಗಿದೆ.





