ಯುನಿವರ್ಸಿಟಿ ಗ್ರಾಂಟ್ಸ್ ಕಮಿಷನ್ (ಯುಜಿಸಿ) ತಂದಿರುವ ನಿಯಮಗಳಿಗೆ ಸಂಬಂಧಿಸಿ ಸುಪ್ರೀಂಕೋರ್ಟ್ ನೀಡಿರುವ ತಡೆಯಾಜ್ಞೆಯನ್ನು ತಕ್ಷಣವೇ ತೆರವುಗೊಳಿಸಲು ಕೇಂದ್ರ ಸರ್ಕಾರ ಗಂಭೀರವಾಗಿ ಕ್ರಮ ಕೈಗೊಳ್ಳಬೇಕು. ಜೊತೆಗೆ ಎಸ್ಸಿ, ಎಸ್ ಟಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪ್ರತ್ಯೇಕ ಯುಜಿಸಿ ನಿಯಮಗಳನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಫೆಬ್ರವರಿ 9ರಂದು ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸುವಂತೆ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಕರೆ ನೀಡಿದೆ.
ಸೋಮವಾರ ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ರಾಜ್ಯ ಸಂಚಾಲಕ ಡಿ ಜಿ ಸಾಗರ ಮಾತನಾಡಿದ, ವಿಶ್ವವಿದ್ಯಾಲಯಗಳು ಜ್ಞಾನಾರ್ಜನೆಯ ಕೇಂದ್ರಗಳಾಗಬೇಕಾದರೆ ಅಲ್ಲಿ ಓದುತ್ತಿರುವ ಎಲ್ಲ ವಿದ್ಯಾರ್ಥಿಗಳಿಗೆ ಸಮಾನತೆ, ಸುರಕ್ಷತೆ ಹಾಗೂ ಗೌರವದ ವಾತಾವರಣ ಇರಬೇಕು ಎಂದು ಹೇಳಿದರು. ಆದರೆ ಇತ್ತೀಚಿನ ವರ್ಷಗಳಲ್ಲಿ ಎಸ್.ಸಿ ಹಾಗೂ ಎಸ್.ಟಿ ವಿದ್ಯಾರ್ಥಿಗಳ ಮೇಲೆ ಧರ್ಮ ಹಾಗೂ ಜಾತಿ ಆಧಾರಿತವಾಗಿ ನಡೆಯುತ್ತಿರುವ ಕಿರುಕುಳ, ತಾರತಮ್ಯ ಮತ್ತು ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ’ ಎಂದು ಹೇಳಿದರು.
‘ಈ ಹಿನ್ನೆಲೆಯಲ್ಲಿ ಇಂತಹ ಅಕ್ರಮಗಳನ್ನು ತಡೆಗಟ್ಟಲು ಯುಜಿಸಿ ರೂಪಿಸಿರುವ ನಿಯಮಗಳನ್ನು ದಲಿತ ಸಂಘರ್ಷ ಸಮಿತಿ ಸಂಪೂರ್ಣವಾಗಿ ಸ್ವಾಗತಿಸುತ್ತದೆ. ಆದರೆ ಈ ನಿಯಮಗಳ ಜಾರಿಗೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿರುವುದರಿಂದ ಅವು ಅನುಷ್ಠಾನಗೊಳ್ಳದೆ ಉಳಿದಿವೆ. ಇದರ ಪರಿಣಾಮವಾಗಿ ದಲಿತ ವಿದ್ಯಾರ್ಥಿಗಳು ಮತ್ತೆ ಅನ್ಯಾಯ, ಅವಮಾನ ಮತ್ತು ಅಸುರಕ್ಷಿತ ಪರಿಸ್ಥಿತಿಯನ್ನು ಎದುರಿಸುವಂತಾಗಿದೆ. ಆದ್ದರಿಂದ ಕೇಂದ್ರ ಸರ್ಕಾರ ತಕ್ಷಣವೇ ಕಾನೂನು ಕ್ರಮಗಳನ್ನು ಕೈಗೊಂಡು ತಡೆಯಾಜ್ಞೆಯನ್ನು ತೆರವುಗೊಳಿಸಿ ಯುಜಿಸಿ ನಿಯಮಗಳನ್ನು ಜಾರಿಗೊಳಿಸಬೇಕು’ ಎಂದು ಅವರು ಒತ್ತಾಯಿಸಿದರು.
‘ವಿಶ್ವವಿದ್ಯಾಲಯಗಳ ಕ್ಯಾಂಪಸ್ಗಳಲ್ಲಿ ದಲಿತ ವಿದ್ಯಾರ್ಥಿಗಳು ನಿರ್ಭಯವಾಗಿ ಹಾಗೂ ಗೌರವಯುತವಾಗಿ ಶಿಕ್ಷಣ ಪಡೆಯಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೋಹಿತ್ ವೇಮುಲಾ ಕಾಯ್ದೆಯನ್ನು ಜಾರಿಗೊಳಿಸುವುದು ಅತ್ಯಂತ ಅಗತ್ಯವಾಗಿದೆ ಎಂದು ಸಾಗರ ಹೇಳಿದರು. ಇತ್ತೀಚಿನ ದಿನಗಳಲ್ಲಿ ವಿವಿ ಕ್ಯಾಂಪಸ್ಗಳಲ್ಲಿ ಕೋಮುವಾದಿಕರಣ ಹೆಚ್ಚಾಗುತ್ತಿರುವುದು ಸಮಾಜಕ್ಕೆ ಅಪಾಯಕಾರಿಯಾಗಿದೆ. ಇದರಿಂದಾಗಿ ದಲಿತ ವಿದ್ಯಾರ್ಥಿಗಳ ಮೇಲೆ ಕಿರುಕುಳ ಮತ್ತು ಮಾನಸಿಕ ಒತ್ತಡ ಹೆಚ್ಚುವ ಸಾಧ್ಯತೆಗಳಿದ್ದು, ಇದು ಭವಿಷ್ಯದ ಭಾರತಕ್ಕೆ ಮಾರಕವಾಗಲಿದೆ’ ಎಂದು ಅವರು ಎಚ್ಚರಿಸಿದರು.
‘ದಲಿತ ವಿದ್ಯಾರ್ಥಿಗಳ ಶೈಕ್ಷಣಿಕ ಭದ್ರತೆ, ಮಾನಸಿಕ ನೆಮ್ಮದಿ ಹಾಗೂ ಸಮಾನ ಹಕ್ಕುಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಸರ್ಕಾರಗಳು ತಕ್ಷಣ ಸ್ಪಂದಿಸಬೇಕಾಗಿದೆ. ಈ ಹಿನ್ನೆಲೆಯಲ್ಲಿ ಫೆಬ್ರವರಿ 9ರಂದು ರಾಜ್ಯಾದ್ಯಂತ ಜಿಲ್ಲಾಧಿಕಾರಿ ಕಚೇರಿ ಎದುರುಗಡೆ ಪ್ರತಿಭಟನಾ ಮೆರವಣಿಗೆ ನಡೆಸುವುದರ ಮೂಲಕ ಪ್ರಧಾನಮಂತ್ರಿಗಳಿಗೆ ಮನವಿ ಸಲ್ಲಿಸಲಾಗುವುದು’ ಎಂದು ಅವರು ಹೇಳಿದರು.
ಇದನ್ನು ಓದಿದ್ದೀರಾ? ಕಲಬುರಗಿ | ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಭೀಕರ ಹತ್ಯೆ
ಈ ವೇಳೆ ಜಿಲ್ಲಾ ಮುಖಂಡರಾದ ಸುರೇಶ್ ಹಾದಿಮನಿ, ಹೆಚ್. ಶಂಕರ, ಉಮೇಶ್ ನರೋಣಾ, ಎಸ್.ಪಿ. ಸುಳ್ಳದ್ ಸೇರಿದಂತೆ ಸಮಿತಿಯ ಇತರ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.





