ದಂತ ಆರೋಗ್ಯ ತಪಾಸಣಾ ಚಿಕಿತ್ಸಾ ಶಿಬಿರ ಹಾಗೂ ಬಾಯಿ ಸ್ವಚ್ಛತೆ ಕುರಿತು ಜಾಗೃತಿ ಕಾರ್ಯಕ್ರಮವನ್ನು ಮಂಗಳವಾರ ನಗರದ ತಾರಫೈಲ್ ಸರ್ಕಾರಿ ಪ್ರೌಢ ಶಾಲೆಯಲ್ಲಿ ಯಶಸ್ವಿಯಾಗಿ ನಡೆಸಲಾಯಿತು.
ಕರ್ನಾಟಕ ಸರ್ಕಾರದ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜು ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್) ವಿಶೇಷ ಶಿಬಿರದ ಎರಡನೇ ದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ದಂತ ಆರೋಗ್ಯ ತಪಾಸಣಾ ಚಿಕಿತ್ಸಾ ಶಿಬಿರವನ್ನು ಆಯೋಜಿಸಲಾಯಿತು.
ಕಾರ್ಯಕ್ರಮದಲ್ಲಿ ಕುಟುಂಬ ಕಲ್ಯಾಣ ಇಲಾಖೆ ಕಲಬುರಗಿಯ ರಾಷ್ಟ್ರೀಯ ಬಾಯಿ ಆರೋಗ್ಯ ಕಾರ್ಯಕ್ರಮದ ಅಧಿಕಾರಿ ಡಾ. ಸಂಧ್ಯಾ ಕಾನೇಕರ್ ಅತಿಥಿ ಉಪನ್ಯಾಸಕರಾಗಿ ಭಾಗವಹಿಸಿ ಮಾತನಾಡಿ ಅವರು ‘ದಂತ ಆರೋಗ್ಯದ ಮಹತ್ವದ ಕುರಿತು ಮಾಹಿತಿ ನೀಡಿದರು. ದಿನಕ್ಕೆ ಕನಿಷ್ಠ ಎರಡು ಬಾರಿ ಸರಿಯಾದ ವಿಧಾನದಲ್ಲಿ ಹಲ್ಲುಗಳನ್ನು ಬ್ರಷ್ ಮಾಡುವುದು, ಪ್ರತಿ ಮೂರು ತಿಂಗಳಿಗೊಮ್ಮೆ ಬ್ರಷ್ ಬದಲಾಯಿಸುವುದು, ನಾಲಿಗೆಯನ್ನು ಪ್ರತಿದಿನ ಸ್ವಚ್ಛಗೊಳಿಸುವುದು, ಫ್ಲಾಸಿಂಗ್ ಅಭ್ಯಾಸ ಮಾಡುವುದು ಹಾಗೂ ಸಿಹಿ ಪದಾರ್ಥಗಳನ್ನು ಕಡಿಮೆ ಪ್ರಮಾಣದಲ್ಲಿ ಸೇವಿಸಬೇಕು’ ಎಂದು ಅವರು ತಿಳಿಸಿದರು.

‘ಹಲ್ಲು ಮತ್ತು ಬಾಯಿ ಆರೋಗ್ಯ ಕಾಪಾಡಿಕೊಳ್ಳಲು ಪ್ರತಿ ಮೂರು ತಿಂಗಳಿಗೊಮ್ಮೆ ದಂತ ವೈದ್ಯರನ್ನು ಭೇಟಿ ಮಾಡಿ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ತಂಬಾಕು, ಧೂಮಪಾನ ಸೇರಿದಂತೆ ಹಾನಿಕಾರಕ ಉತ್ಪನ್ನಗಳ ಬಳಕೆಯನ್ನು ತಡೆಯುವುದರಿಂದ ಕ್ಯಾನ್ಸರ್ ಸೇರಿದಂತೆ ಹಲವಾರು ದಂತ ಸಮಸ್ಯೆಗಳನ್ನು ತಡೆಗಟ್ಟಬಹುದು’ ಎಂದು ಹೇಳಿದರು.
ಈ ಸಂದರ್ಭದಲ್ಲಿ ಅಫ್ಜಲ್ಪುರ ತಾಲೂಕು ಆಸ್ಪತ್ರೆಯ ದಂತ ವೈದ್ಯಾಧಿಕಾರಿ ಡಾ. ಆರಾಧನ ರಾಥೋಡ್ ಹಾಗೂ ಚಿಂಚೋಳಿ ತಾಲೂಕು ಆಸ್ಪತ್ರೆಯ ದಂತ ವೈದ್ಯಾಧಿಕಾರಿ ಡಾ. ವಿಶ್ವನಾಥ್ ಶಿಬಿರಾರ್ಥಿಗಳ ದಂತ ಮತ್ತು ಬಾಯಿ ತಪಾಸಣೆ ನಡೆಸಿ ಅಗತ್ಯ ಆರೋಗ್ಯ ಸಲಹೆಗಳನ್ನು ನೀಡಿದರು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ, ದೇವರಾಜ್ ಆರ್ ಕನ್ನಡಿಗ ಅವರು ಜೀವನ ಕೌಶಲ್ಯಗಳ ಕುರಿತು ಅರಿವು ಮೂಡಿಸಿ ಶಿಬಿರಾರ್ಥಿಗಳಿಗೆ ತರಬೇತಿ ನೀಡಿದರು.
ಇದನ್ನು ಓದಿದ್ದೀರಾ? ಯಾದಗಿರಿ | ಕರ್ತವ್ಯದಲ್ಲೇ ಪೌರ ಕಾರ್ಮಿಕ ಹೃದಯಾಘಾತದಿಂದ ಮೃತ
ಎಲೆಕ್ಟ್ರಾನಿಕ್ಸ್ ವಿಭಾಗದ ಉಪನ್ಯಾಸಕರಾದ ಎಂ.ಬಿ. ಪಾಟೀಲ್ ಕಾರ್ಯಕ್ರಮಕ್ಕೆ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಎನ್ಎಸ್ಎಸ್ ಅಧಿಕಾರಿಗಳಾದ ಅರಿಫಾ ಖಾತೂನ್, ಸಹಾಯಕ ಶಿಬಿರಾಧಿಕಾರಿಗಳಾದ ಗೋವಿಂದ (ಸಿ.ಪಿ. ವಿಭಾಗ), ಶ್ರೀದೇವಿ ಗಟ್ಟು, ವಿಜ್ಞಾನ ವಿಭಾಗದ ಡಾ. ಸಪ್ನಾ, ಎನ್ಸಿ ವಿಭಾಗದ ಆಶಾಲತಾ, ಅಧೀಕ್ಷಕರಾದ ಪರಶುರಾಮ್ ಸೇರಿದಂತೆ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನ ಸಿಬ್ಬಂದಿಗಳು ಉಪಸ್ಥಿತರಿದ್ದರು.





