ರಾಜ್ಯದ ಅಭಿವೃದ್ಧಿ ಮತ್ತು ಸಮಗ್ರ ಆಡಳಿತಕ್ಕೆ ದಿಕ್ಕು ತೋರಿಸುವಂತೆ ಐತಿಹಾಸಿಕ ದಾಖಲೆಯ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಹಾಗೂ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಬೆಳಗಾವಿಯ ಸಿಂಡಿಕೇಟ್ ಸದಸ್ಯರಾದ ಮಹಾಂತೇಶ ಎಸ್ ಕೌಲಗಿ ಅಭಿನಂದನೆ ಸಲ್ಲಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿದ ಅವರು, ರಾಜ್ಯದ ರಾಜಕೀಯ ಇತಿಹಾಸದಲ್ಲಿ ಎರಡು ಬಾರಿ ಉಪಮುಖ್ಯಮಂತ್ರಿಯಾಗಿ, ಎರಡು ಬಾರಿ ವಿರೋಧ ಪಕ್ಷದ ನಾಯಕರಾಗಿ ಹಾಗೂ ಎರಡು ಬಾರಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿರುವ ಸಿದ್ದರಾಮಯ್ಯ ಅವರು ರಾಜ್ಯದ ಇತಿಹಾಸದಲ್ಲೇ ಅತಿ ಹೆಚ್ಚು 17ನೇ ಬಜೆಟ್ ಮಂಡಿಸಿರುವುದು ಮಹತ್ವದ ಸಾಧನೆ ಎಂದು ತಿಳಿಸಿದ್ದಾರೆ.
ಡಾ. ಬಿ ಆರ್ ಅಂಬೇಡ್ಕರ್ ರವರ ಸಂವಿಧಾನದ ಆಶಯಗಳನ್ನು ಅನುಷ್ಠಾನಗೊಳಿಸುವ ದಿಟ್ಟ ಉದ್ದೇಶದಿಂದ ‘ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು’ ಎಂಬ ತತ್ವದಡಿ ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ ಎಂದು ಅವರು ಹೇಳಿದರು.
‘ಗೃಹಲಕ್ಷ್ಮಿ, ಗ್ರಹಜ್ಯೋತಿ, ಶಕ್ತಿ ಸೇರಿದಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿರುವುದರ ಜೊತೆಗೆ ಈ ಬಜೆಟ್ನಲ್ಲಿ ವಸತಿ ಶಾಲೆ ಮತ್ತು ಕಾಲೇಜುಗಳು, ಪಬ್ಲಿಕ್ ಶಾಲೆಗಳ ಅಭಿವೃದ್ಧಿ, ಏತ ನೀರಾವರಿ ಯೋಜನೆಗಳು, ಅಂತರ್ಜಲ ಹೆಚ್ಚಳ ಯೋಜನೆಗಳು, ನಾಲೆಡ್ಜ್ ಪಾರ್ಕ್ ಮತ್ತು ಜವಳಿ ಪಾರ್ಕ್ ಸ್ಥಾಪನೆಗೆ ಅನುದಾನ ಒದಗಿಸಲಾಗಿದೆ’ ಎಂದು ತಿಳಿಸಿದರು.
‘ಇದಲ್ಲದೆ ಎಸ್ಸಿ-ಎಸ್ಟಿ ಸಮುದಾಯದ ಉದ್ಯೋಗಸ್ಥ ಮಹಿಳೆಯರಿಗೆ ಹಾಸ್ಟೆಲ್ ವ್ಯವಸ್ಥೆ, 15 ಸಾವಿರ ಶಿಕ್ಷಕರ ನೇಮಕಾತಿ, ವಿಶ್ವವಿದ್ಯಾಲಯಗಳಲ್ಲಿ ಸಾವಿರ ಬೋಧಕರ ನೇಮಕಾತಿ, ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ವಿತರಣೆ, ಹಿಂದುಳಿದ ವರ್ಗದ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ತರಬೇತಿ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಘೋಷಿಸಲಾಗಿದೆ’ ಎಂದು ಹೇಳಿದರು.
‘ಕಲಬುರಗಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಬಂಜೆತನ ನಿವಾರಣೆಗೆ ಐವಿಎಫ್ ಘಟಕ ಸ್ಥಾಪನೆ ಸೇರಿದಂತೆ ಹಲವು ಅಭಿವೃದ್ಧಿ ಯೋಜನೆಗಳಿಗೆ ಈ ಬಜೆಟ್ನಲ್ಲಿ ವಿಶೇಷ ಒತ್ತು ನೀಡಲಾಗಿದೆ’ ಎಂದು ಅವರು ಹೇಳಿದರು.
ಇದನ್ನು ಓದಿದ್ದೀರಾ? ಯಾದಗಿರಿ | ಸ್ಮಾರ್ಟ್ ಕಾರ್ಡ್ ವಿಳಂಬ: ಕಾರ್ಮಿಕ ಇಲಾಖೆಯ ವಿರುದ್ಧ ನಮ್ಮ ಕರ್ನಾಟಕ ಸೇನೆ ಆಕ್ರೋಶ
ಇಂತಹ ಐತಿಹಾಸಿಕ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಾಗೂ ಈ ಅವಕಾಶ ನೀಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕರು ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರಿಗೆ ಅಭಿನಂದನೆ ತಿಳಿಸಿದರು.





