ಕಲಬುರಗಿ ಜಿಲ್ಲೆ ಸೇಡಂ ತಾಲೂಕಿನಲ್ಲಿ ಬರದ ಛಾಯೆ ಆವರಿಸಿದ್ದು, ಆಗಸ್ಟ್ ತಿಂಗಳು ಮುಗಿದರೂ ವಾಡಿಕೆಯ ಮಳೆ ಬಿದ್ದಿಲ್ಲ. ಆದ್ದರಿಂದ ಕ್ಷೇತ್ರದ ರೈತರು ಸಂಕಷ್ಟದಲ್ಲಿದ್ದಾರೆ. ರಾಜ್ಯ ಸರ್ಕಾರ ಕೂಡಲೇ ತಾಲೂಕನ್ನು ಬರಗಾಲ ಪೀಡಿತ ಪ್ರದೇಶವೆಂದು ಘೋಷಣೆ ಮಾಡಿ ರೈತರ ನೆರವಿಗೆ ಧಾವಿಸಬೇಕು ಎಂದು ಸೇಡಂ ಮತಕ್ಷೇತ್ರದ ಜೆಡಿಎಸ್ ಮುಖಂಡ ಬಾಲರಾಜ್ ಗುತ್ತೇದಾರ ಆಗ್ರಹಿಸಿದರು.
“ರೈತರು ಸಾಲ ಮಾಡಿ ಬೀಜ, ರಸಗೊಬ್ಬರ ಖರೀದಿಸಿ ತೊಗರಿ, ಹತ್ತಿ ಸೇರಿದಂತೆ ಹಲವು ಬೀಜಗಳನ್ನು ಬಿತ್ತನೆ ಮಾಡಿದ್ದಾರೆ. ಆದರೆ ಮಳೆ ಬಾರದಿರುವುದರಿಂದ ಬೆಳೆಗಳು ಸಂಪೂರ್ಣವಾಗಿ ಬಾಡಿ ಹೋಗುತ್ತಿವೆ. ಇದರಿಂದಾಗಿ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ” ಎಂದು ಹೇಳಿದರು.
“ಜೂನ್ ತಿಂಗಳಿನಲ್ಲಿ ಮುಂಗಾರು ಮಳೆ ಪ್ರವೇಶಿಸಬೇಕಾಗಿತ್ತು. ಆದರೆ ಜೂಲೈ ತಿಂಗಳಿನಲ್ಲಿ ಅಲ್ಪ ಸ್ವಲ್ಪ ಮಳೆಯಾದ ಬಳಿಕ ರೈತರು ಸಂಕಷ್ಟಗಳ ನಡುವೆ ಬಿತ್ತನೆ ಕಾರ್ಯ ಮಾಡಿದ್ದಾರೆ. ಬಳಿಕ ಮಳೆ ಬಾರದೇ ಇರುವುದರಿಂದ ರೈತರಿಗೆ ದಿಕ್ಕು ತೋಚದಂತಾಗಿದೆ. ಹೀಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ವಹಿಸಿದೆ ಕೂಡಲೇ ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸಿ ರೈತರಿಗೆ ಪರಿಹಾರ ಒದಗಿಸಬೇಕು” ಎಂದು ಒತ್ತಾಯಿಸಿದರು.
“ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಸೇಡಂ ಮತಕ್ಷೇತ್ರದಲ್ಲಿ ಈ ಬಾರಿ ತೊಗರಿ ಬೆಳೆ ಹೆಚ್ಚಾಗಿ ಬಿತ್ತನೆಯಾಗಿದೆ. ಎಣ್ಣೆಕಾಳು, ವಾಣಿಜ್ಯ ಬೆಳೆಗಳು ನಿಗದಿತ ಪ್ರಮಾಣದಂತೆ ಬಿತ್ತನೆಯಾಗಿವೆ ಆದರೆ ಸಕಾಲಕ್ಕೆ ಮಳೆ ಬಾರದೇ ಇರುವುದರಿಂದ ತೇವಾಂಶ ಕೊರತೆಯಿಂದ ಬೆಳೆಗಳು ಒಣಗುತ್ತಿವೆ” ಎಂದರು.
ಈ ಸುದ್ದಿ ಓದಿದ್ದೀರಾ? ಮೈಸೂರು | ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ರೈತ ಸಂಘ ಆಗ್ರಹ
“ಮಳೆ ಬಾರದೇ ಇರುವುದರಿಂದ ಜನ, ಜಾನವಾರುಗಳು ಕುಡಿಯುವ ನೀರಿನ ತೊಂದರೆ ಅನುಭವಿಸುವಂತಾಗಿದೆ. ತೀವ್ರ ಕುಡಿಯುವ ನೀರಿನ ಅಭಾವ ಎದುರಿಸುತ್ತಿರುವ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸುವ ಕಾರ್ಯ ಮಾಡಬೇಕು. ಅಲ್ಲದೇ ಜಾನುವಾರುಗಳಿಗಾಗಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ಮೇವು ಕೇಂದ್ರ ಸ್ಥಾಪಿಸಬೇಕು” ಎಂದು ಆಗ್ರಹಿಸಿ ಪ್ರಕಟಣೆಗೆ ತಿಳಿಸಿದ್ದಾರೆ.
ಯಾದಗಿರಿ ಜಿಲ್ಲಾ ಮೀಡಿಯಾ ವಾಲೆಂಟಿಯರ್ ಅಮೀರ್ ಅವರ ಮಾಹಿತಿ ಆಧರಿಸಿದ ವರದಿ




