ರಾಜ್ಯದಲ್ಲಿ ಸಂಪೂರ್ಣ ಮದ್ಯನಿಷೇಧ ಜಾರಿಗೊಳಿಸುವಂತೆ ಆಗ್ರಹಿಸಿ ಕಳೆದ ಹತ್ತು ವರ್ಷಗಳಿಂದ ಮಹಿಳಾ ನೇತೃತ್ವದಲ್ಲಿ ನಡೆಯುತ್ತಿರುವ ಮದ್ಯನಿಷೇಧ ಆಂದೋಲನದ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸದಿರುವುದನ್ನು ಖಂಡಿಸಿ, “ಸರಾಯಿ ಬೇಡ ಶಿಕ್ಷಣ ಬೇಕು, ಬೀರು ಬೇಡ ನೀರು ಬೇಕು” ಎಂಬ ಘೋಷ ವಾಕ್ಯದೊಂದಿಗೆ ಸೋಮವಾರ 77ನೇ ಗಣರಾಜ್ಯೋತ್ಸವದಂದು ಕಲಬುರಗಿಯಲ್ಲಿ ಮಹಿಳೆಯರು ಕಪ್ಪುಪಟ್ಟಿ ಧರಿಸಿ ಮೌನ ಪ್ರತಿಭಟನೆ ನಡೆಸಿದರು.
ಈ ಕುರಿತು ಮಾತನಾಡಿದ ಪ್ರತಿಭಟನಾಕಾರರು, ಕಳೆದ ಸೆಪ್ಟೆಂಬರ್ 25, 2025ರಂದು ಬೆಂಗಳೂರಿನಲ್ಲಿ ನಡೆದ ಸತ್ಯಾಗ್ರಹದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಸುಮಾರು 8,000ಕ್ಕೂ ಹೆಚ್ಚು ಮಹಿಳೆಯರು ಭಾಗವಹಿಸಿ ತಮ್ಮ ನ್ಯಾಯಸಮ್ಮತ ಹಕ್ಕೊತ್ತಾಯಗಳನ್ನು ಸರ್ಕಾರದ ಮುಂದಿಟ್ಟಿದ್ದರು. ಆ ವೇಳೆ ಮುಖ್ಯಮಂತ್ರಿಗಳು ಮಂತ್ರಿಮಂಡಲ ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಿ ಒಂದು ತಿಂಗಳೊಳಗೆ ನಿರ್ಧಾರ ಕೈಗೊಳ್ಳುವುದಾಗಿ ಭರವಸೆ ನೀಡಿದ್ದರು. ಆದರೆ, ಇದುವರೆಗೆ ಯಾವುದೇ ಸ್ಪಷ್ಟ ತೀರ್ಮಾನ ಅಥವಾ ಪ್ರತಿಕ್ರಿಯೆ ನೀಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮದ್ಯಪಾನವು ಸಮಾಜದ ಆರೋಗ್ಯ, ಕುಟುಂಬಗಳ ನೆಮ್ಮದಿ ಹಾಗೂ ಮಹಿಳೆಯರ ಭದ್ರತೆಗೆ ಭಾರೀ ಧಕ್ಕೆಯನ್ನುಂಟುಮಾಡುತ್ತಿದೆ. ಆದರೂ ಸರ್ಕಾರವು ಸಮಾಜದ ಹಿತಕ್ಕಿಂತ ಮದ್ಯ ಮಾರಾಟದಿಂದ ಬರುವ ಆದಾಯಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿರುವುದು ಅತ್ಯಂತ ವಿಷಾದನೀಯ ಎಂದು ಮಹಿಳೆಯರು ಹೇಳಿದರು.

ಪ್ರತಿಭಟನಾಕಾರರು ತಮ್ಮ ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟು, ಮದ್ಯ ಮಾರಾಟಕ್ಕೆ ಪರವಾನಿಗೆ ನೀಡುವ ವಿಚಾರದಲ್ಲಿ ಗ್ರಾಮಸಭೆಗಳಿಗೆ ನಿರ್ಣಯಾಧಿಕಾರ ನೀಡಬೇಕು ಎಂದು ಆಗ್ರಹಿಸಿದರು. ಹರಿಯಾಣ, ಮಹಾರಾಷ್ಟ್ರ, ರಾಜಸ್ಥಾನ ರಾಜ್ಯಗಳ ಮಾದರಿಯಲ್ಲಿ ಕರ್ನಾಟಕದಲ್ಲಿಯೂ ಪಂಚಾಯತ್ ರಾಜ್ ಕಾಯ್ದೆಯಲ್ಲಿ ತಿದ್ದುಪಡಿ ಮಾಡಿ, ಗ್ರಾಮಸಭೆಯಲ್ಲಿ ಕನಿಷ್ಠ ಶೇಕಡಾ 20ರಷ್ಟು ಮಹಿಳೆಯರ ಒಪ್ಪಿಗೆ ಕಡ್ಡಾಯಗೊಳಿಸಬೇಕು ಎಂದರು. 2016ರ ತನಕ ಜಾರಿಯಲ್ಲಿದ್ದ ಈ ಅಂಶವನ್ನು ಮರುಜಾರಿಗೊಳಿಸಬೇಕೆಂದು ಒತ್ತಾಯಿಸಿದರು.
ಇದೇ ವೇಳೆ, ಪರವಾನಗಿ ಪಡೆದ ಅಂಗಡಿಗಳ ಹೊರತಾಗಿ ಮನೆ ಮನೆಗಳಲ್ಲಿ, ಪಾನಷಾಪ್ಗಳು ಹಾಗೂ ಕಿರಾಣಿ ಅಂಗಡಿಗಳಲ್ಲಿ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ತಡೆಯಲು ಪ್ರತಿ ಹಳ್ಳಿಯಲ್ಲೂ ಮಹಿಳಾ ಜಾಗೃತಿ ಸಮಿತಿಗಳನ್ನು ರಚಿಸಿ, ಅವರಿಗೆ ಅರೆ ನ್ಯಾಯಿಕ ಅಧಿಕಾರ ನೀಡಬೇಕು ಎಂದು ಆಗ್ರಹಿಸಿದರು.
ನಮ್ಮ ಹಕ್ಕೊತ್ತಾಯಗಳನ್ನು ತುರ್ತು ಹಾಗೂ ಗಂಭೀರವಾಗಿ ಪರಿಗಣಿಸಿ ಸರ್ಕಾರ ತಕ್ಷಣ ಜಾರಿಗೆ ಆದೇಶ ಹೊರಡಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಲಾಗುವುದು ಎಂದು ಮಹಿಳೆಯರು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಮದ್ಯ ನಿಷೇಧ ಆಂದೋಲನ ಕರ್ನಾಟಕದ ಎಲ್ಲ ಪದಾಧಿಕಾರಿಗಳು ಮುಖಂಡರು, ಮಹಿಳೆಯರು ಭಾಗವಹಿಸಿದ್ದರು.





