ಕೋಲಿ, ಕಬ್ಬಲಿಗ, ಅಂಬಿಗ, ಬೆಸ್ತ ಹಾಗೂ ಬಾರಿಕ್ ಸಮಾಜಗಳನ್ನು ಪರಿಶಿಷ್ಟ ಪಂಗಡ (ಎಸ್ಟಿ) ಪಟ್ಟಿಗೆ ಸೇರಿಸುವಂತೆ ಆಗ್ರಹಿಸಿ ಸೋಮವಾರ ಕಲಬುರಗಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ನಗರದ ಜಗತ್ ವೃತ್ತದಲ್ಲಿರುವ ಡಾ. ಬಿ ಆರ್ ಅಂಬೇಡ್ಕರ್ ಹಾಗೂ ಬಸವಣ್ಣನವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಕೋಲಿ ಮತ್ತು ಕಬ್ಬಲಿಗ ಸಮಾಜಗಳ ಮುಖಂಡರ ನೇತೃತ್ವದಲ್ಲಿ ಹಾವೇರಿಯ ಶಾಂತಬಿಷ್ಮ ಚೌಡಯ್ಯ ಸ್ವಾಮೀಜಿ ಧ್ವಜ ಪ್ರದರ್ಶನದ ಮೂಲಕ ಪ್ರತಿಭಟನಾ ಮೆರವಣಿಗೆಗೆ ಚಾಲನೆ ನೀಡಿದರು.
ಜಗತ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸುವುದರ ಮೂಲಕ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಈ ವೇಳೆ ಪ್ರತಿಭಟನಾಕಾರರು ಮಾತನಾಡಿ, ‘1996ರಿಂದಲೇ ಕೋಲಿ, ಕಬ್ಬಲಿಗ, ಅಂಬಿಗ, ಬೆಸ್ತ ಹಾಗೂ ಬಾರಿಕ್ ಸಮಾಜಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ನಿರಂತರವಾಗಿ ಒತ್ತಾಯಿಸುತ್ತಾ ಬಂದಿದ್ದೇವೆ ಎಂದು ತಿಳಿಸಿದರು. ಗಂಗಾಮತ ಹಾಗೂ ಅದರ ಉಪಜಾತಿಗಳ ಕುರಿತು ಕೇಂದ್ರ ಸರ್ಕಾರಕ್ಕೆ ಹಲವು ಬಾರಿ ಪ್ರಸ್ತಾವನೆ ಸಲ್ಲಿಸಲಾದರೂ, ಅದು ಪದೇಪದೇ ವಾಪಸ್ ಬರುತ್ತಿರುವುದು ನೋವಿನ ಸಂಗತಿ ಎಂದು ಹೇಳಿದರು. ಈ ಹಿನ್ನೆಲೆಯಲ್ಲಿ ಸೂಕ್ತ ದಾಖಲೆಗಳೊಂದಿಗೆ ರಾಜ್ಯ ಸರ್ಕಾರವು ಮತ್ತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು’ ಎಂದು ಆಗ್ರಹಿಸಿದರು.
ಕೋಲಿ ಸಮಾಜದ ಮುಖಂಡ ಶಿವಕುಮಾರ್ ನಾಟೀಕಾರ ಮಾತನಾಡಿ, ‘ನಮ್ಮ ಹೋರಾಟ ಯಾವುದೇ ಸರ್ಕಾರ ಅಥವಾ ರಾಜಕೀಯ ಪಕ್ಷದ ವಿರುದ್ಧವಲ್ಲ. 1996ರಿಂದ ನಮ್ಮ ಪ್ರಸ್ತಾವನೆಗಳು ವಾಪಸ್ ಬರುತ್ತಿವೆ. ಅಹಿಂದ ಸರ್ಕಾರವೆಂದು ಕರೆಸಿಕೊಳ್ಳುವ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷಗಳಾದರೂ ಕೇಂದ್ರಕ್ಕೆ ಶಿಫಾರಸು ಮಾಡುವಲ್ಲಿ ವಿಫಲವಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಪ್ರಭಾವಿ ಸಚಿವರಾಗಿರುವುದರಿಂದ, ನಮ್ಮ ಬೇಡಿಕೆಯನ್ನು ಅವರೇ ಪೂರೈಸಬೇಕು’ ಎಂದು ಒತ್ತಾಯಿಸಿದರು.
ಇದನ್ನು ಓದಿದ್ದೀರಾ? ಕಲಬುರಗಿ | ಕೌಟುಂಬಿಕ ಕಲಹ : ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ
ಪ್ರತಿಭಟನೆಯಲ್ಲಿ ಹಾವೇರಿಯ ಶಾಂತಬಿಷ್ಮ ಚೌಡಯ್ಯ ಸ್ವಾಮೀಜಿ, ವಿಧಾನ ಪರಿಷತ್ ಸದಸ್ಯರಾದ ಎನ್. ರವಿಕುಮಾರ್, ಸಾಬಣ್ಣ ಜಮಾದಾರ್, ಶರಣಪ್ಪ ತಳವಾರ, ಶೋಭಾ ಬಾಣಿ, ವಿದ್ಯಾಧರ ಮಂಗಳೂರು, ದಿಗಂಬರ ಕರಜಗಿ, ಭೀಮರಾಯ ಜನಿವಾರ, ಸುರೇಶ್ ಹುಡಗಿ, ಲಕ್ಷ್ಮೀಪುತ್ರ ಜಮಾದಾರ್, ರವಿರಾಜ್ ಕೊರವಿ, ತಿಪ್ಪಣ್ಣ ರೆಡ್ಡಿ, ಪಿಡ್ಡಪ್ಪ ಜಾಲಗಾರ್, ಭಗವಂತರಾಯ ಬೆಣ್ಣೂರ, ರಾಕೇಶ್ ಜಮಾದಾರ್, ಮಹಾಂತೇಶ್ ಜಮಾದಾರ್ ಸೇರಿದಂತೆ ಅನೇಕ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.
ಯಾದಗಿರಿ ಹಾಗೂ ಕಲಬುರಗಿ ಜಿಲ್ಲೆಯ ವಿವಿಧ ತಾಲೂಕು, ಗ್ರಾಮಗಳಿಂದ ಸಾವಿರಾರು ಸಂಖ್ಯೆಯಲ್ಲಿ ಜನರು ಪ್ರತಿಭಟನೆಯಲ್ಲಿ ಭಾಗವಹಿಸಿದರು.





