ನಗರದ ಹೊರವಲಯದಲ್ಲಿ ₹30 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಪ್ರಬುದ್ಧ ಅಕಾಡೆಮಿ ಕಟ್ಟಡದ ಪಕ್ಕದ ಉಪಾಹಾರ ಗೃಹದಲ್ಲಿ ಸೋಮವಾರ ಮಧ್ಯಾಹ್ನ ಮೇಲ್ಛಾವಣಿಯ ಸಿಮೆಂಟ್ ಪದರು ಉದುರಿ ಟೇಬಲ್ ಹಾಗೂ ಕುರ್ಚಿಗಳ ಮೇಲೆ ಬಿದ್ದ ಘಟನೆ ನಡೆದಿದೆ.
ಮಧ್ಯಾಹ್ನದ ಊಟದ ವಿರಾಮದ ವೇಳೆ ಈ ಅವಘಡ ಸಂಭವಿಸಿದ್ದು, ವಿದ್ಯಾರ್ಥಿನಿಯೊಬ್ಬರು ಕೂದಲೆಳೆಯ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಘಟನೆ ವೇಳೆ ಗೃಹದೊಳಗೆ ವಿದ್ಯಾರ್ಥಿಗಳು ಊಟಕ್ಕಾಗಿ ಸೇರಿದ್ದರೆಂಬ ಮಾಹಿತಿ ಲಭ್ಯವಾಗಿದೆ. ಅದೃಷ್ಟವಶಾತ್ ಯಾವುದೇ ಗಂಭೀರ ಗಾಯಗಳು ಸಂಭವಿಸಿಲ್ಲ.

ಈ ಕಟ್ಟಡವನ್ನು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಜನವರಿ 11ರಂದು ಉದ್ಘಾಟಿಸಿದ್ದರು. ಉದ್ಘಾಟನೆಗೊಂಡು ಇನ್ನೂ ಎರಡು ತಿಂಗಳು ಪೂರ್ಣಗೊಳ್ಳುವ ಮುನ್ನವೇ ಮೇಲ್ಚಾವಣಿಯ ಸಿಮೆಂಟ್ ಪದರು ಉದುರಿ ಬೀಳುತ್ತಿರುವುದು ನಿರ್ಮಾಣದ ಗುಣಮಟ್ಟದ ಕುರಿತು ಗಂಭೀರ ಪ್ರಶ್ನೆಗಳನ್ನು ಎಬ್ಬಿಸಿದೆ.

ಗಮನಾರ್ಹವಾಗಿ, ಉಪಾಹಾರ ಗೃಹ ಇನ್ನೂ ಅಧಿಕೃತವಾಗಿ ಕಾರ್ಯಾರಂಭವಾಗಿಲ್ಲದಿದ್ದರೂ ವಿದ್ಯಾರ್ಥಿಗಳು ಅದನ್ನು ಬಳಸುತ್ತಿದ್ದರು ಎಂಬ ಮಾಹಿತಿ ದೊರೆತಿದೆ. ಇದರಿಂದ ಭದ್ರತಾ ಕ್ರಮಗಳು ಸಮರ್ಪಕವಾಗಿದ್ದವೆಯೇ ಎಂಬ ಪ್ರಶ್ನೆಯೂ ಉದ್ಭವಿಸಿದೆ.
ಇದನ್ನು ಓದಿದ್ದೀರಾ? ಕಲಬುರಗಿ | ಅಪ್ರಾಪ್ತ ಬಾಲಕಿಯರೊಂದಿಗೆ ಅನುಚಿತ ವರ್ತನೆ: ಖಾಸಗಿ ಶಾಲಾ ಸಿಬ್ಬಂದಿ ವಿರುದ್ಧ ಪೋಕ್ಸೊ ಪ್ರಕರಣ ದಾಖಲು
ಘಟನೆಯ ಬಳಿಕ ಸಂಬಂಧಿತ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ನಿರ್ಮಾಣದ ಗುಣಮಟ್ಟ, ಮೇಲ್ವಿಚಾರಣೆ ಮತ್ತು ಹೊಣೆಗಾರಿಕೆ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಸಾಮಾಜಿಕ ಹೋರಾಟಗಾರರು ಆಗ್ರಹಿಸಿದ್ದಾರೆ.





