ನಗರದ ಹೊರವಲಯದ ಅಷ್ಟಗಾ ಗ್ರಾಮದ ಸಮೀಪ ಮರಕ್ಕೆ ನೇಣು ಹಾಕಿಕೊಂಡು ಹಿರಿಯ ಪತ್ರಕರ್ತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.
ಮೃತರನ್ನು ಆಳಂದ ತಾಲೂಕಿನ ಹಳ್ಳಿಸಲಗರ ಗ್ರಾಮದ ಮೂಲ ನಿವಾಸಿ, ಸದ್ಯ ಕಲಬುರಗಿ ನಗರದ ಬಸ್ ಡಿಪೊ–2ರ ಸಮೀಪ ವಾಸಿಸುತ್ತಿದ್ದ ಹಿರಿಯ ಪತ್ರಕರ್ತ ಪ್ರಭುಲಿಂಗ ನೀಲೂರೆ (52) ಎಂದು ಗುರುತಿಸಲಾಗಿದೆ.
ಅವರು ವಿಜಯ ಕರ್ನಾಟಕ ದಿನಪತ್ರಿಕೆಯ ಕಲಬುರಗಿ ಸ್ಥಾನಿಕ ಕಚೇರಿಯಲ್ಲಿ ಮುಖ್ಯ ಉಪಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಪತ್ರಿಕೋದ್ಯಮದ ಜೊತೆಗೆ ಸಾಹಿತ್ಯ ಕ್ಷೇತ್ರದಲ್ಲೂ ಸಕ್ರಿಯರಾಗಿದ್ದ ಅವರು ಅನೇಕ ಕೃತಿಗಳನ್ನು ರಚಿಸಿದ್ದರು. ಎರಡು ವರ್ಷಗಳ ಹಿಂದೆ ನಡೆದ ಆಳಂದ ತಾಲೂಕು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಇತ್ತೀಚೆಗೆ ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ರಾಜ್ಯೋತ್ಸವ ಪ್ರಶಸ್ತಿ ಪಡೆದಿದ್ದರು.
ಮೃತರು ಡೆತ್ ನೋಟ್ ಬರೆದಿಟ್ಟಿದ್ದಾರೆ ಎನ್ನಲಾಗಿದ್ದು, ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಇದನ್ನು ಓದಿದ್ದೀರಾ? ಯಾದಗಿರಿ | ಜೀವ ಬೆದರಿಕೆ ಹಾಕಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ; ಯುವಕನ ವಿರುದ್ಧ ಪ್ರಕರಣ ದಾಖಲು
ಮೃತ ಪತ್ರಕರ್ತರಿಗೆ ಪತ್ನಿ ಹಾಗೂ ಇಬ್ಬರು ಪುತ್ರಿಯರು ಇದ್ದಾರೆ. ಅವರ ನಿಧನಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಸೇರಿದಂತೆ ಹಿರಿಯ ಪತ್ರಕರ್ತರು, ಸಾಹಿತಿಗಳು ಹಾಗೂ ವಿವಿಧ ಕ್ಷೇತ್ರಗಳ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.





