ರಾಜ್ಯ ಸರ್ಕಾರದ ಬಜೆಟ್ ಅಧಿವೇಶನ ಸಮೀಪಿಸುತ್ತಿರುವ ಸಂದರ್ಭದಲ್ಲಿ ಕಲಬುರಗಿ ಜಿಲ್ಲೆ ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಕರ್ನಾಟಕ ಪ್ರಾಂತ ರೈತ ಸಂಘ (KPRS) ಜಿಲ್ಲಾ ಅಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ ಒತ್ತಾಯಿಸಿದ್ದಾರೆ. ತೊಗರಿ ನಾಡೆಂದು ಪ್ರಸಿದ್ಧಿ ಪಡೆದಿರುವ ಕಲಬುರಗಿ ಜಿಲ್ಲೆಯ ರೈತರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದು, ಅವುಗಳಿಗೆ ಪರಿಹಾರ ಕಲ್ಪಿಸುವಂತೆ ಜಿಲ್ಲೆಯ ಶಾಸಕರು ಹಾಗೂ ಜನಪ್ರತಿನಿಧಿಗಳು ಅಧಿವೇಶನದಲ್ಲಿ ಧ್ವನಿ ಎತ್ತಬೇಕು ಎಂದು ಅವರು ಮನವಿ ಮಾಡಿದ್ದಾರೆ.
ತೊಗರಿ ಬೆಳೆಗಾರರು ಕಳೆದ ಕೆಲವು ವರ್ಷಗಳಿಂದ ಸಂಕಷ್ಟದ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಒಂದೆಡೆ ಬರದ ತೊಂದರೆ, ಮತ್ತೊಂದೆಡೆ ಅತಿವೃಷ್ಟಿಯಿಂದ ಬೆಳೆ ಹಾನಿಯಾಗಿದ್ದು, ಈಗಾಗಲೇ ಬೆಳೆದ ತೊಗರಿಗೂ ಸಮರ್ಪಕ ಬೆಂಬಲ ಬೆಲೆ ದೊರೆಯದೆ ಮಾರುಕಟ್ಟೆಯಲ್ಲಿ ದರ ಕುಸಿತ ಕಂಡಿದೆ. ಇದರ ಪರಿಣಾಮವಾಗಿ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಸರ್ಕಾರ ಈ ಸಮಸ್ಯೆಯ ಬಗ್ಗೆ ಗಂಭೀರವಾಗಿ ಗಮನ ಹರಿಸಿಲ್ಲವೆಂದು ಅವರು ಆಕ್ಷೇಪಿಸಿದ್ದಾರೆ. ಅತಿವೃಷ್ಟಿ ಹಾಗೂ ಪ್ರಕೃತಿ ವಿಕೋಪಗಳಿಂದ ರೈತರು ಸಂಕಷ್ಟಕ್ಕೆ ಸಿಲುಕಿದ ಸಂದರ್ಭದಲ್ಲೂ ಸರಿಯಾದ ಪರಿಹಾರ ದೊರೆಯಲಿಲ್ಲ. ಸರ್ಕಾರ ಕೇವಲ ಭರವಸೆಗಳನ್ನೇ ನೀಡಿದ್ದು, ಅದು ರೈತರಿಗೆ ಮೊಸಳೆ ಕಣ್ಣೀರು ಹಾಕಿದಂತಾಗಿದೆ ಎಂದು ಅವರು ಆರೋಪಿಸಿದ್ದಾರೆ.
ಜಿಲ್ಲೆಯ ಎಲ್ಲಾ ರೈತರಿಗೆ ಬೆಳೆ ಹಾನಿಗೆ ಸಮರ್ಪಕ ಪರಿಹಾರ ನೀಡಬೇಕು. ಬೆಳೆ ವಿಮೆ ಯೋಜನೆಯಿಂದ ರೈತರಿಗೆ ನೆರವು ಸಿಗಲಿದೆ ಎಂಬ ನಿರೀಕ್ಷೆಯಿಂದ ವಿಮೆ ಮಾಡಿಸಿಕೊಂಡಿದ್ದರೂ, ಬೆಳೆ ನಷ್ಟವಾದ ನಂತರ ನಾಲ್ಕು ಐದು ತಿಂಗಳು ಕಳೆದರೂ ವಿಮೆ ಹಣ ದೊರಕಿಲ್ಲ. ತಕ್ಷಣವೇ ವಿಮೆ ಮೊತ್ತ ಬಿಡುಗಡೆ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.
ತೊಗರಿ ಬೆಳೆಗಾರರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರ ಕನಿಷ್ಠ ಬೆಂಬಲ ಬೆಲೆ (MSP)ಗೆ ಹೆಚ್ಚುವರಿಯಾಗಿ ಪ್ರತಿ ಕ್ವಿಂಟಲ್ ತೊಗರಿಗೆ ಕನಿಷ್ಠ ₹1000 ಪ್ರೋತ್ಸಾಹಧನವನ್ನು ಪ್ರತಿವರ್ಷ ಕಡ್ಡಾಯವಾಗಿ ನೀಡುವಂತೆ ಬಜೆಟ್ ಅಧಿವೇಶನದಲ್ಲಿ ನಿರ್ಣಯ ಕೈಗೊಳ್ಳಬೇಕು ಎಂದು ಶರಣಬಸಪ್ಪ ಒತ್ತಾಯಿಸಿದ್ದಾರೆ. ಜೊತೆಗೆ ತೊಗರಿ ಬೋರ್ಡ್ ವಿಲೀನಗೊಂಡ ನಂತರ ದ್ವಿದಳ ಧಾನ್ಯಗಳ ‘ಪಲ್ಸ್ ಸೆಸ್ ಬೋರ್ಡ್’ ಕಾರ್ಯಕ್ಷಮತೆ ಕುಂಠಿತಗೊಂಡಿದ್ದು, ಅದನ್ನು ಬಲವರ್ಧನೆ ಮಾಡುವ ಅಗತ್ಯವಿದೆ ಎಂದು ಅವರು ತಿಳಿಸಿದ್ದಾರೆ.
ಕಲ್ಯಾಣ ಕರ್ನಾಟಕ ಭಾಗದಲ್ಲಿ ನೀರಾವರಿ ಅಭಿವೃದ್ಧಿಗೆ ವಿಶೇಷ ಒತ್ತು ನೀಡಬೇಕೆಂದೂ ಅವರು ಆಗ್ರಹಿಸಿದ್ದಾರೆ. ಕಾಲುವೆಗಳಲ್ಲಿ ಹೂಳು ತೆರವು ಮಾಡುವುದು, ಜಂಗಲ್ ಕಟಿಂಗ್ ಮಾಡಿಸುವುದು, ಗೇಟ್ಗಳನ್ನು ಅಳವಡಿಸುವುದು ಹಾಗೂ ಕಾಲುವೆಗಳ ದುರಸ್ತಿ ಮಾಡುವುದರಿಂದ ರೈತರ ಜಮೀನುಗಳಿಗೆ ನಿರಂತರವಾಗಿ ನೀರು ಹರಿಯುವಂತೆ ಕ್ರಮ ಕೈಗೊಳ್ಳಬೇಕು. ನೀರಾವರಿ ಅಭಿವೃದ್ಧಿಗೆ ಆದ್ಯತೆ ನೀಡುವುದರಿಂದ ರೈತರಿಗೆ ಶಾಶ್ವತ ರಕ್ಷಣೆ ಸಿಗಲಿದೆ ಎಂದು ಅವರು ಹೇಳಿದ್ದಾರೆ.
ಹಾಲು ಉತ್ಪಾದಕರಿಗಾಗಿ ಇರುವ ಕೆಎಂಎಫ್ ಮಾದರಿಯಲ್ಲಿ ತೊಗರಿ ಬೆಳೆಗಾರರ ಸಂರಕ್ಷಣೆಗೆ ವಿಶೇಷ ವ್ಯವಸ್ಥೆ ರೂಪಿಸಬೇಕು ಎಂದು ಅವರು ಸಲಹೆ ನೀಡಿದ್ದಾರೆ. ಇನ್ನು ಸಾಲದ ಭಾರವನ್ನು ತಾಳಲಾರದೆ 2025ರಲ್ಲಿ ಕಲಬುರಗಿ ಜಿಲ್ಲೆಯಲ್ಲಿ 47 ರೈತರು ಆತ್ಮಹತ್ಯೆ ಮಾಡಿಕೊಂಡಿರುವುದು ದುಃಖಕರ ಸಂಗತಿಯಾಗಿದೆ ಎಂದು ಅವರು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಡಿಸಿಸಿ ಬ್ಯಾಂಕ್ನ ಸಂಪೂರ್ಣ ರೈತ ಸಾಲ ಮನ್ನಾ ಮಾಡಬೇಕು. ಜೊತೆಗೆ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಇರುವ ರೈತರ ಸಾಲದ ಸಂಪೂರ್ಣ ಬಡ್ಡಿಯನ್ನು ಮನ್ನಾ ಮಾಡುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಕೃಷಿ ಕ್ಷೇತ್ರದಲ್ಲಿ ರೈತರಿಗೆ ಅಗತ್ಯವಾದ ಬೀಜ, ಔಷಧಿ, ಸ್ಪ್ರಿಂಕ್ಲರ್ ಮತ್ತು ಪೈಪ್ಗಳಿಗೆ ಸರಾಸರಿ ಶೇ.90 ರಷ್ಟು ಸಹಾಯಧನ ನೀಡಬೇಕು. ಜೊತೆಗೆ ತೊಗರಿ ಬೆಳೆ ಉತ್ಪಾದನೆ ಹೆಚ್ಚಿಸಲು ಹೊಸ ಬಿತ್ತನೆ ತಳಿಗಳನ್ನು ಅಭಿವೃದ್ಧಿಪಡಿಸಿ ರೈತರಿಗೆ ಒದಗಿಸುವಂತೆ ಅವರು ಮನವಿ ಮಾಡಿದ್ದಾರೆ.
ವಿದ್ಯುತ್ ದರ ಏರಿಕೆಯನ್ನು ತಕ್ಷಣ ಹಿಂಪಡೆಯಬೇಕು. ಪಂಪ್ಸೆಟ್ ಹೊಂದಿರುವ ರೈತರಿಗೆ RR ನಂಬರ್ ಮತ್ತು HP ಪ್ರಕಾರ ರಿಯಾಯಿತಿ ದರದಲ್ಲಿ ಕಂಬ, ವೈಯರ್ ಹಾಗೂ ಟ್ರಾನ್ಸ್ಫಾರ್ಮರ್ಗಳನ್ನು ಉಚಿತವಾಗಿ ಒದಗಿಸಬೇಕು. ರೈತರಿಂದ ಹಣ ವಸೂಲಿ ಮಾಡುವುದನ್ನು ನಿಲ್ಲಿಸಬೇಕು. ಇದಲ್ಲದೆ, LT ವೈಯರ್ಗಳು ಜೋತು ಬಿದ್ದು ಕಬ್ಬು ಬೆಳೆಗಳಿಗೆ ಬೆಂಕಿ ತಗುಲಿ ಹಲವಾರು ರೈತರು ಸಂಕಷ್ಟಕ್ಕೆ ಸಿಲುಕಿರುವ ಘಟನೆಗಳೂ ನಡೆದಿವೆ. ಇದರಿಂದ ಕಬ್ಬು ಬೆಳೆಗಾರರು ಭಾರೀ ನಷ್ಟ ಅನುಭವಿಸುತ್ತಿದ್ದಾರೆ. ಆದ್ದರಿಂದ ಸಡಿಲವಾಗಿರುವ ವೈಯರ್ಗಳನ್ನು ತಕ್ಷಣ ಬಿಗಿಗೊಳಿಸಿ ದುರಸ್ತಿ ಮಾಡಬೇಕು. ಟ್ರಾನ್ಸ್ಫಾರ್ಮರ್ ಸುಟ್ಟರೆ ಕೂಡಲೇ ಹೊಸ ಟ್ರಾನ್ಸ್ಫಾರ್ಮರ್ ಅಳವಡಿಸಿ ವಿದ್ಯುತ್ ಸರಬರಾಜು ಪುನಃ ಆರಂಭಿಸುವಂತೆ ಅವರು ಒತ್ತಾಯಿಸಿದ್ದಾರೆ.
ಇದನ್ನೂ ಓದಿ: ಕಲಬುರಗಿ | ಬುರ್ಖಾ ಧರಿಸಿ ಹೋಳಿ ಆಡಿದ ಯುವಕರ ವಿರುದ್ಧ ಎಫ್ಐಆರ್
ಇದರ ಜೊತೆಗೆ ಕಬ್ಬು ಬೆಳೆಗಾರರ ಸಮಸ್ಯೆಗಳನ್ನೂ ಅವರು ಗಮನಕ್ಕೆ ತಂದಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಪ್ರತಿ ಟನ್ ಕಬ್ಬಿಗೆ ಏಕ ರೂಪದ ದರ ನಿಗದಿ ಮಾಡಬೇಕು. ಕಬ್ಬಿನ ತೂಕದಲ್ಲಿ ಮೋಸ ನಡೆಯುತ್ತಿರುವುದು, ಸಕ್ಕರೆ ಇಳುವರಿ ಲೆಕ್ಕಾಚಾರದಲ್ಲಿ ಅನ್ಯಾಯವಾಗುತ್ತಿರುವುದು ಹಾಗೂ ಕಬ್ಬು ಕಟಾವು ಮಾಡಿದ ಬಳಿಕ 60 ದಿನಗಳಾದರೂ ಹಣ ನೀಡದಿರುವುದು ಸಾಮಾನ್ಯವಾಗಿದೆ. ಇದನ್ನು ತಡೆಯಲು ಕಟ್ಟುನಿಟ್ಟಿನ ಕಾನೂನು ಜಾರಿಗೊಳಿಸಿ ಕಬ್ಬು ಬೆಳೆಗಾರರ ಶೋಷಣೆಗೆ ಕಡಿವಾಣ ಹಾಕಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಕೃಷಿ ಸಮಸ್ಯೆಗಳ ಜೊತೆಗೆ ಶಿಕ್ಷಣ ಕ್ಷೇತ್ರದಲ್ಲೂ ಸರ್ಕಾರ ಗಮನ ಹರಿಸಬೇಕು ಎಂದು ಅವರು ಹೇಳಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡಬೇಕು. ಒಟ್ಟಿನಲ್ಲಿ ಕಲಬುರಗಿ ಜಿಲ್ಲೆಯ ರೈತರು ಮತ್ತು ಸಾಮಾನ್ಯ ಜನರ ಸಮಸ್ಯೆಗಳಿಗೆ ಸ್ಪಂದಿಸುವ ರೀತಿಯಲ್ಲಿ ಈ ಬಾರಿಯ ಬಜೆಟ್ನಲ್ಲಿ ಸ್ಪಷ್ಟ ನಿರ್ಣಯಗಳನ್ನು ಕೈಗೊಳ್ಳಬೇಕೆಂದು ಶರಣಬಸಪ್ಪ ಮಮಶೆಟ್ಟಿ ಒತ್ತಾಯಿಸಿದ್ದಾರೆ.





