ಕನ್ನಡ ನಾಡು-ನುಡಿ, ಸಂಸ್ಕೃತಿ ಪರಂಪರೆ ಉಳಿಸಿ ಬೆಳೆಸಲು ನಾವೆಲ್ಲರೂ ಬದ್ಧರಾಗೋಣ ಎಂದು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ.ಖಂಡ್ರೆ ಹೇಳಿದರು.
ಬೀದರ ಜಿಲ್ಲಾ ನೆಹರು ಕ್ರೀಡಾಂಗಣದಲ್ಲಿ 70ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದ ಅವರು, ʼ ಕನ್ನಡನಾಡಿನ ಇತಿಹಾಸ, ಪರಂಪರೆ, ಸಾಂಸ್ಕೃತಿಕ, ಆಧ್ಯಾತ್ಮಿಕ ಹಿರಿಮೆಯು ತುಂಬಾ ವೈಶಿಷ್ಟತೆಗಳಿಂದ ಕೂಡಿದೆ. ರಾಜ-ಮಹಾರಾಜರು ಸಹ ತಮ್ಮ ಆಡಳಿತದ ಕಾಲಾವಧಿಯಲ್ಲಿ ಕನ್ನಡ ನಾಡು-ನುಡಿ ಉಳಿಸಿ ಬೆಳೆಸಿಕೊಂಡು ಬಂದಿದ್ದಾರೆ. ಸುಮಾರು ಎರಡು ಸಾವಿರ ವರ್ಷಗಳ ಕಾಲ ಇತಿಹಾಸ ಕನ್ನಡ ಭಾಷೆಗಿದೆʼ ಎಂದರು.
ಬೀದರ್ ಜಿಲ್ಲೆಯಲ್ಲಿ ಬಸವಾದಿ ಶರಣರ ಪಾದಸ್ಪರ್ಶದಿಂದ ಪುನೀತವಾದ ಪುಣ್ಯಭೂಮಿ ಬಸವಕಲ್ಯಾಣವೂ ಇದೆ, ನಾನಕ್ ಝೀರಾ ಗುರುದ್ವಾರ್, ಮಹ್ಮದ್ ಗಾವಾನ್ ಮದರಸಾ, ಝರಣಿ ನರಸಿಂಹ ಸ್ವಾಮಿ, ಪಾಪನಾಶಿ ದೇವಾಲಯ ಇದೆ. ಇಲ್ಲಿ ಹಿಂದು, ಮುಸ್ಲಿಂ, ಸಿಖ್, ಇಸಾಯಿ ಎಲ್ಲರೂ ಸಹೋದರರಂತೆ ಬಾಳುತ್ತಿದ್ದಾರೆ. ಅನ್ಯ ಭಾಷೆಯ ಪ್ರಭಾವದ ನಡುವೆಯೂ ಗಡಿ ಜಿಲ್ಲೆಯಾದ ಬೀದರ್ ನಲ್ಲಿ ಕನ್ನಡ ಉಳಿದು, ಬೆಳಗುತ್ತಿದೆʼ ಎಂದು ಹೆಮ್ಮೆಪಟ್ಟರು.

ʼಕರ್ನಾಟಕದಲ್ಲಿ ವೈವಿಧ್ಯಮಯವಾದ ಸಂಸ್ಕೃತಿ, ಜೀವನ ಪದ್ಧತಿ ಇದೆ. ಭಾವೈಕ್ಯತೆಯ ನಾಡಾಗಿರುವ ಕರ್ನಾಟಕದಲ್ಲಿ ಎಲ್ಲರೂ ಸಾಮರಸ್ಯದಿಂದ ಬದುಕುತ್ತಿದ್ದೇವೆ. ಸರ್ವಧರ್ಮಗಳ ಸಮನ್ವಯತೆ, ಸೌಹಾರ್ದತೆ ಇಲ್ಲಿ ಮನೆ ಮಾಡಿದೆ. ಹರಿದು ಹಂಚಿ ಹೋಗಿದ್ದ ಕರ್ನಾಟಕವನ್ನು ಒಗ್ಗೂಡಿಸಲು ಏಕೀಕರಣ ಚಳವಳಿಯಲ್ಲಿ ರಾಜ್ಯದ ಹಲವಾರು ಜನರು ಶ್ರಮಿಸಿದ್ದಾರೆʼ ಎಂದರು.
ಕನ್ನಡ ನಾಡಿನ ಏಳ್ಗೆಯಲ್ಲಿ ಸಾಹಿತಿಗಳು, ವಚನಕಾರರು ಹಾಗೂ ದಾಸ ವರೇಣ್ಯರ ಪಾತ್ರವು ಅತೀ ಮಹತ್ವದ್ದಾಗಿದೆ. ಈ ನಾಡಿನ ಸಾಹಿತ್ಯ ಶ್ರೀಮಂತಿಕೆಯನ್ನು ಹೆಚ್ಚಿಸುವಲ್ಲಿ, ಸಮಾಜ ಸುಧಾರಣೆಗೆ ಅನೇಕರು ಅಪಾರ ಕೊಡುಗೆ ನೀಡಿದ್ದಾರೆ. ಬಸವಣ್ಣನವರು 12ನೇ ಶತಮಾನದಲ್ಲಿಯೇ ತಮ್ಮ ವಚನಗಳ ಮೂಲಕ ಸಾಮಾಜಿಕ ಪರಿವರ್ತನೆ ನಾಂದಿ ಹಾಡಿದ್ದರು. ಸಾಮಾಜಿಕ ನ್ಯಾಯದ ಪರಿಕಲ್ಪನೆ ವಿಶ್ವಕ್ಕೆ ನೀಡಿದ ವಿಶ್ವಗುರು ಬಸವಣ್ಣನವರ ನಾಡಾಗಿದ್ದು, ಬಸವಕಲ್ಯಾಣದಲ್ಲಿ ₹740 ಕೋಟಿ ವೆಚ್ಚದಲ್ಲಿ ಆಧುನಿಕ ಅನುಭವ ಮಂಟಪ ನಿರ್ಮಾಣ ಮಾಡಲಾಗುತ್ತಿದೆʼ ಎಂದರು.
ʼಬೀದರ್ ಜಿಲ್ಲೆಗೆ ಹಿಂದುಳಿದ ಜಿಲ್ಲೆ ಎಂಬ ಹಣೆಪಟ್ಟಿ ಇದೆ. ನಾವು ಈ ಕಳಂಕವನ್ನು ತೊಡೆದು ಹಾಕಿ ಕರುನಾಡ ಕಿರೀಟ ಬೀದರ್ ಮುಂದುವರಿದ ಜಿಲ್ಲೆಯನ್ನಾಗಿ ಮಾಡಿ ನಾವು ಯಾರಿಗೂ ಕಡಿಮೆ ಇಲ್ಲ ಎಂಬುದನ್ನು ಸಾಧಿಸಿ ತೋರಿಸಬೇಕು. ಅದಕ್ಕೆ ಎಲ್ಲ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಶ್ರಮಿಸಬೇಕು. ಕನ್ನಡಿಗರು ಆಕ್ರಮಣಕಾರಿಗಳಲ್ಲ, ಹೀಗಾಗಿ ಅನೇಕ ವಿಷಯಗಳಲ್ಲಿ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ. ಕಾವೇರಿ ನದಿ ನೀರು ಹಂಚಿಕೆ, ಕಳಸಾ ಬಂಡೂರಿ, ಗೋದಾವರಿ ಅಲ್ಲದೇ ಗಡಿ ವಿವಾದ ಕೆಲವರು ಸ್ವಾಥಕ್ಕಾಗಿ ಜೀವಂತ ಇಟ್ಟಿದ್ದಾರೆʼ ಎಂದರು.

1 ಲಕ್ಷ ರೈತರ ಖಾತೆಗೆ ಪರಿಹಾರ ಹಣ ಜಮಾ :
ಬೀದರ ಜಿಲ್ಲೆಯಲ್ಲಿ ಈ ಬಾರಿ ಸುರಿದ ಭಾರಿ ಮಳೆಯಿಂದಾಗಿ ರೈತರ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ಮುಖ್ಯಮಂತ್ರಿಗಳು ಕೂಡ ವೈಮಾನಿಕ ಸಮೀಕ್ಷೆ ನಡೆಸಿ, ಹೆಚ್ಚುವರಿಯಾಗಿ ₹8,500ರೂ ಪರಿಹಾರ ಘೋಷಣೆ ಮಾಡಿದ್ದಾರೆ. ಜಿಲ್ಲಾಡಳಿತ ಎನ್.ಡಿ.ಆರ್.ಎಫ್ ಹಾಗೂ ಎಸ್.ಡಿ.ಆರ್.ಎಫ್ ನಿಯಮಾವಳಿಯಂತೆ ಸಮೀಕ್ಷೆ ನಡೆಸಿದ್ದು, ಒಟ್ಟು 1.69 ಲಕ್ಷ ಹೆಕ್ಟೇರ್ ಕೃಷಿ ಹಾಗೂ ತೋಟಗಾರಿಕೆ ಬೆಳೆ ಹಾನಿಯಾಗಿದ್ದು, ₹300 ಕೋಟಿವರೆಗೆ ಪರಿಹಾರ ನೀಡಲಾಗುವುದು ಎಂದರು.
ʼಈಗಾಗಲೇ ಖಾತೆಗೆ ಪರಿಹಾರ ಜಮಾ ಮಾಡುವ ಪ್ರಕ್ರಿಯೆ ಆರಂಭವಾಗಿದೆ. ಎನ್.ಡಿ.ಆರ್.ಎಫ್/ಎಸ್.ಡಿ.ಆರ್.ಎಫ್ ಅಡಿ ₹143 ಕೋಟಿಯಲ್ಲಿ ಪ್ರಥಮ ಹಂತವಾಗಿ ₹70 ಕೋಟಿ ರೂಪಾಯಿಯನ್ನು 1 ಲಕ್ಷ ರೈತರ ಖಾತೆಗೆ ಜಮಾ ಆಗಲಿದೆ ಹಾಗೂ ಉಳಿದ ಹಣವನ್ನು ಹಂತ ಹಂತವಾಗಿ ಜಮಾ ಮಾಡಲಾಗುವುದುʼ ಎಂದರು.

ʼಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ ಪ್ರತಿ ವರ್ಷ ₹5 ಸಾವಿರ ಕೋಟಿ ನೀಡಲಾಗುತ್ತಿದ್ದು, ಇದರಲ್ಲಿ ಬೀದರ ಜಿಲ್ಲೆಗೆ ಇದುವರೆಗೆ ₹2 ಸಾವಿರ ಕೋಟಿ ಕಾಮಗಾರಿಗಳು ನಡೆದಿವೆ. ಪ್ರಸ್ತುತ ವರ್ಷದಲ್ಲಿ ₹500 ಕೋಟಿಗೆ ಕ್ರೀಯಾ ಯೋಜನೆ ಸಿದ್ಧಪಡಿಸಲು ಸೂಚಿಸಲಾಗಿದೆ. ಜಿಲ್ಲೆಯಲ್ಲಿ ಪ್ರಸ್ತುತ ಸಾಲಿನಲ್ಲಿ 8 ಲಕ್ಷ ಸಸಿ ನೆಡಲಾಗಿದ್ದು, ಹಸಿರು ಹೊದಿಕೆ ಹೆಚ್ಚಿಸುವ ಕಾರ್ಯ ಮಾಡಲಾಗಿದೆ. ನೌಬಾದ ಹತ್ತಿರ ರಾಷ್ಟ್ರ ಮಟ್ಟದ ಸುಸಜ್ಜಿತ ಕ್ರೀಡಾಂಗಣ ನಿರ್ಮಾಣ ಮಾಡಲಾಗುವುದು. ಇತ್ತೀಚೆಗೆ ಮಾನವ-ಪ್ರಾಣಿ ಸಂಘರ್ಷ ಹೆಚ್ಚಾಗುತ್ತಿದ್ದು, ಇದರ ನಿಯಂತ್ರಣ ಕ್ರಮಗಳು ಮತ್ತು ಸುಧಾರಣೆಗಳು ಕೈಗೊಳ್ಳಲಾಗುವುದುʼ ಎಂದರು.
ಇದನ್ನೂ ಓದಿ : ಬೀದರ್ | ಬ್ರಿಮ್ಸ್ ಅವ್ಯವಸ್ಥೆ: ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ
ʼವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುವ ಕ್ರಮ ಕೈಗೊಳ್ಳಲಾಗುವುದು. ವಸತಿ ಶಾಲೆಗಳು, ವಸತಿ ನಿಲಯಗಳು, ಆರೋಗ್ಯ ಕೇಂದ್ರಗಳು, ಸಣ್ಣ ನೀರಾವರಿ, ಸಣ್ಣ ಮತ್ತು ಗುಡಿ ಕೈಗಾರಿಕೆ ಸೇರಿದಂತೆ ಎಲ್ಲಾ ಇಲಾಖೆಗಳ ಸರ್ವಾಂಗೀಣ ಅಭಿವೃದ್ಧಿ ಕೆಲಸ ಮಾಡಲಾಗುವುದು. ಉತ್ತಮ ಶಿಕ್ಷಣ ಪಡೆದು, ನಾಡಿನ ಏಳಿಗೆಗೆ ಶ್ರಮಿಸೋಣ ಹಾಗೂ ಕನ್ನಡವನ್ನು ನಿತ್ಯ ಜೀವನದಲ್ಲಿ ಬಳಸಿ, ಬೆಳೆಸುವುದು ನಮ್ಮೆಲ್ಲರ ಕರ್ತವ್ಯವಾಗಿದೆʼ ಎಂದರು.

ಲೋಕಸಭಾ ಸದಸ್ಯ ಸಾಗರ ಈಶ್ವರ ಖಂಡ್ರೆ, ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ, ವಿಧಾನ ಪರಿಷತ್ ಸದಸ್ಯ ಭೀಮರಾವ ಪಾಟೀಲ, ಬೀದರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ನಗರಸಭೆ ಅಧ್ಯಕ್ಷ ಮಹ್ಮದ ಗೌಸ, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ಬದೋಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ, ಮಹಾನಗರ ಪಾಲಿಕೆ ಆಯುಕ್ತೆ ರಮ್ಯಾ ರಂಗನಾಥ, ಜಿಲ್ಲಾ ಅರಣ್ಯ ಉಪ ಸಂರಕ್ಷಣಾಧಿಕಾರಿ ಆಶಿಶ್ ರೆಡ್ಡಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.







