ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ 210 ಕೋಟಿ ರೂ. ವೆಚ್ಚದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಶಾಸಕರಾದ ಸತೀಶ್ ಸೈಲ್ ಅವರು ಸಿದ್ಧಪಡಿಸಿರುವ ಪ್ರಸ್ತಾವನೆಗೆ ಸರ್ಕಾರದ ಮಟ್ಟದಲ್ಲಿ ಸಕಾರಾತ್ಮಕ ಸ್ಪಂದನೆ ದೊರೆತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.
ಶಾಸಕ ಸತೀಶ್ ಸೈಲ್ ಅವರ ಕಚೇರಿಯಲ್ಲಿ ಭಾನುವಾರ ರಾತ್ರಿ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ಭಾಗದ ಅಭಿವೃದ್ಧಿಗೆ ಸರ್ಕಾರ ಸಂಪೂರ್ಣ ಬದ್ಧವಾಗಿದೆ ಎಂದು ಹೇಳಿದರು. ಮಂಗಳೂರು, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಕರಾವಳಿ ಪ್ರದೇಶಗಳ ಅಭಿವೃದ್ಧಿಗಾಗಿ ಹೊಸ ಪ್ರವಾಸೋದ್ಯಮ ನೀತಿ ರೂಪಿಸುವ ಕುರಿತು ಸರ್ಕಾರ ಆಲೋಚನೆ ನಡೆಸುತ್ತಿದೆ.
ಈ ಸಂಬಂಧ ಜನವರಿ 10ರಂದು ಮಂಗಳೂರಿನಲ್ಲಿ ಮೂರು ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಮಲೆನಾಡು ಪ್ರದೇಶದ ಜಿಲ್ಲಾಧಿಕಾರಿಗಳ ಸಭೆ ನಡೆಸಲಾಗುವುದು ಎಂದು ತಿಳಿಸಿದರು. ಈಗಾಗಲೇ ಈ ಭಾಗದ ಶಾಸಕರೊಂದಿಗೆ ಒಂದು ಸುತ್ತಿನ ಚರ್ಚೆ ನಡೆಸಲಾಗಿದೆ. ಮಲೆನಾಡು ಹಾಗೂ ಕರಾವಳಿ ಭಾಗದ ಪ್ರವಾಸೋದ್ಯಮ ಅಭಿವೃದ್ಧಿಗೆ ಪಿಪಿಪಿ (PPP) ಮಾದರಿಯಲ್ಲಿ ಹೊಸ ನೀತಿ ತರಲಾಗುವುದು.
ಖಾಸಗಿ ವಲಯಕ್ಕೆ ಹೆಚ್ಚಿನ ಬಂಡವಾಳ ಹೂಡಿಕೆಗೆ ಅವಕಾಶ ನೀಡಿ ಉದ್ಯೋಗ ಸೃಷ್ಟಿಗೆ ಒತ್ತು ನೀಡಲಾಗುವುದು ಎಂದು ಹೇಳಿದರು. ಸಭೆಗೆ ದೇಶಿ–ವಿದೇಶಿ ಬಂಡವಾಳ ಹೂಡಿಕೆದಾರರಿಗೆ ಆಹ್ವಾನ ನೀಡಲಾಗಿದ್ದು, ಅವರು ತಮ್ಮ ಬೇಡಿಕೆಗಳು ಹಾಗೂ ಸಲಹೆ–ಸೂಚನೆಗಳನ್ನು ನೀಡಲು ಅವಕಾಶ ಕಲ್ಪಿಸಲಾಗುವುದು.
ಹೂಡಿಕೆದಾರರನ್ನು ಆಹ್ವಾನಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು. ಮುಖ್ಯಮಂತ್ರಿಗಳು, ಪ್ರವಾಸೋದ್ಯಮ ಸಚಿವರು, ವಿಧಾನಸಭೆ ಸಭಾಧ್ಯಕ್ಷರು ಸಭೆಯಲ್ಲಿ ಪಾಲ್ಗೊಳ್ಳಲಿದ್ದು, ನಾನೇ ಖುದ್ದಾಗಿ ಇದರ ಜವಾಬ್ದಾರಿ ತೆಗೆದುಕೊಂಡಿದ್ದೇನೆ. ಸಂಸದರು, ಶಾಸಕರು ಹಾಗೂ ಸ್ಥಳೀಯ ಸಂಸ್ಥೆಗಳ ಸದಸ್ಯರಿಗೂ ಆಹ್ವಾನ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.
ಸಿಆರ್ಝೆಡ್ ಅನುಮತಿ ಕುರಿತು ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈ ವಿಷಯದ ಚರ್ಚೆಗಾಗಿ ಕೇಂದ್ರ ಸರ್ಕಾರದ ಅಧಿಕಾರಿಗಳನ್ನು ಸಭೆಗೆ ಆಹ್ವಾನಿಸಲಾಗಿದೆ. ಕಾನೂನು ಚೌಕಟ್ಟಿನೊಳಗೆ ಕೆಲಸ ಮಾಡಲಾಗುವುದು. ಸಮುದ್ರ ತೀರ ರಕ್ಷಣೆಗೆ ಸಂಬಂಧಿಸಿದ ಮಾರ್ಗಸೂಚಿಗಳಂತೆ ಅಭಿವೃದ್ಧಿ ಕಾರ್ಯ ನಡೆಯಲಿದೆ ಎಂದು ಸ್ಪಷ್ಟಪಡಿಸಿದರು.
ಕಾರವಾರ ಏರ್ಪೋರ್ಟ್ ನಿರ್ಮಾಣಕ್ಕೆ ಆದ್ಯತೆ: ಈ ಭಾಗದ ಯುವಜನತೆ ಉದ್ಯೋಗಕ್ಕಾಗಿ ಹೊರ ರಾಜ್ಯ ಹಾಗೂ ವಿದೇಶಗಳಿಗೆ ವಲಸೆ ಹೋಗುತ್ತಿರುವ ಹಿನ್ನೆಲೆಯಲ್ಲಿ ಇಲ್ಲಿನ ಮಾನವ ಸಂಪನ್ಮೂಲವನ್ನು ಇಲ್ಲಿಯೇ ಬಳಸಿಕೊಳ್ಳುವ ಉದ್ದೇಶದಿಂದ ಕಾರವಾರ ಏರ್ಪೋರ್ಟ್ ನಿರ್ಮಾಣಕ್ಕೆ ಆದ್ಯತೆ ನೀಡಲಾಗಿದೆ.
ಭೂಮಿ ನೀಡಿಕೆ, ಸಂತ್ರಸ್ತರಿಗೆ ಪರಿಹಾರ ಸೇರಿದಂತೆ ಇತರೆ ವಿಚಾರಗಳಿಗೆ ಕ್ಯಾಬಿನೆಟ್ನಲ್ಲಿ ಅನುಮೋದನೆ ನೀಡಲಾಗಿದೆ. ನೌಕಾದಳದೊಂದಿಗೆ ಒಪ್ಪಂದ ಮಾಡಿಕೊಂಡು ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗುವುದು ಎಂದು ಹೇಳಿದರು.
ಈ ಸುದ್ದಿ ಓದಿದ್ದೀರಾ? ಕಾರವಾರ | ಐಎನ್ಎಸ್ ವಾಗ್ಶೀರ್ ಸಬ್ಮೇರಿನ್ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಐತಿಹಾಸಿಕ ಪ್ರಯಾಣ
ಶಾಸಕ ಸತೀಶ್ ಸೈಲ್ ಅವರು 210 ಕೋಟಿ ರೂ. ವೆಚ್ಚದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸೇರಿದಂತೆ ಅನೇಕ ಅಭಿವೃದ್ಧಿ ಯೋಜನೆಗಳ ಪ್ರಸ್ತಾವನೆ ಸಲ್ಲಿಸಿದ್ದಾರೆ. ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳನ್ನು ತೆರವುಗೊಳಿಸಿ ನೂತನ ಕಟ್ಟಡಗಳ ನಿರ್ಮಾಣಕ್ಕೂ ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.
ರೈತರನ್ನು ಒಕ್ಕಲೆಬ್ಬಿಸಬಾರದು: ಅರಣ್ಯ ಭೂಮಿಯಲ್ಲಿ ಕೃಷಿ ಮಾಡಿಕೊಂಡು ಬದುಕುತ್ತಿರುವ ರೈತರನ್ನು ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸಬಾರದು ಎಂದು ಡಿಎಫ್ಒಗಳಿಗೆ ಸೂಚನೆ ನೀಡಲಾಗಿದೆ. ಪಂಚಾಯತ್ ಮಟ್ಟದಲ್ಲಿ ಮೂರು ತಲೆಮಾರಿನಿಂದ ವಾಸವಿರುವ ಬಗ್ಗೆ ಪ್ರಮಾಣಪತ್ರ ನೀಡಿದರೆ ಅದೇ ಪ್ರಮುಖ ದಾಖಲೆ ಎಂದು ಹೇಳಿದರು.
ಮೂರು ಎಕರೆ ಒಳಗಿನ ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿಕೊಂಡು ಬದುಕುತ್ತಿರುವ ಬಡವರು ಹಾಗೂ ರೈತರ ರಕ್ಷಣೆ ನಮ್ಮ ಜವಾಬ್ದಾರಿ. ಬುಡಕಟ್ಟು ಸಮುದಾಯಗಳಿಗೆ 25 ವರ್ಷ ಮತ್ತು ಇತರ ಸಮುದಾಯದವರಿಗೆ 75 ವರ್ಷಗಳ ಅವಕಾಶವಿದೆ ಎಂದು ಸ್ಪಷ್ಟಪಡಿಸಿದರು.
ಬೇಡ್ತಿ–ವರದಾ ನದಿ ಜೋಡಣೆ: ಬೇಡ್ತಿ ಹಾಗೂ ವರದಾ ನದಿ ಜೋಡಣೆ ಯೋಜನೆಗೆ ಡಿಪಿಆರ್ ತಯಾರಿಸಲು ಅನುಮತಿ ನೀಡಲಾಗಿದ್ದು, ಕೇಂದ್ರ ಸರ್ಕಾರ ಶೇ.90 ಹಾಗೂ ರಾಜ್ಯ ಸರ್ಕಾರ ಶೇ.10 ಅನುದಾನ ನೀಡಲಿದೆ. ನಮ್ಮ ನೀರನ್ನು ನಾವು ಬಳಸಿಕೊಳ್ಳಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.
ಶರಾವತಿ ಪಂಪ್ ಸ್ಟೋರೇಜ್ ಯೋಜನೆ ಕುರಿತ ವಿರೋಧದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಇದು ರಾಜ್ಯಕ್ಕೆ ದೊಡ್ಡ ಆಸ್ತಿಯಾಗಲಿದೆ. ಯಾರಿಗೂ ತೊಂದರೆಯಾಗುವುದಿಲ್ಲ. ಇದಕ್ಕೆ ವಿರೋಧ ಮಾಡುವ ಅವಶ್ಯಕತೆ ಇಲ್ಲ ಎಂದು ಹೇಳಿದರು.
ಮುಖ್ಯಮಂತ್ರಿ ಬದಲಾವಣೆ ಕುರಿತ ಪ್ರಶ್ನೆಗೆ, “ನಾವು ಹೇಳಿದ್ವಾ? ನೀವುಗಳೇ ಸೃಷ್ಟಿ ಮಾಡುತ್ತಿರುವ ವಿಚಾರ” ಎಂದು ಪ್ರತಿಕ್ರಿಯಿಸಿದರು. ಸಚಿವ ಸಂಪುಟ ವಿಸ್ತರಣೆ ಕುರಿತು ಆರ್.ವಿ. ದೇಶಪಾಂಡೆ ಅವರ ಹೇಳಿಕೆಗೆ ಸಂಬಂಧಿಸಿ, ಈ ಬಗ್ಗೆ ಮುಖ್ಯಮಂತ್ರಿಯವರೊಂದಿಗೆ ಮಾತನಾಡುವುದು ಸೂಕ್ತ ಎಂದರು.





