ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಸದಾಶಿವಗಡದಲ್ಲಿರುವ ಜೈ ದುರ್ಗಾಮಾತಾ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಸ್ಥೆಯು ಗ್ರಾಹಕರಿಗೆ ಸುಮಾರು 56.39 ಕೋಟಿ ರೂಪಾಯಿ ವಂಚನೆ ಮಾಡಿದ್ದು, ಈ ಪ್ರಕರಣದ ಪ್ರಮುಖ ಆರೋಪಿಗಳನ್ನು ಇದುವರೆಗೆ ಬಂಧಿಸದಿರುವುದು ಖಂಡನೀಯ ಎಂದು ಸಾಮಾಜಿಕ ಹೋರಾಟಗಾರ ಗಜೇಂದ್ರ ನಾಯ್ಕ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.
ಗುರುವಾರ ನಗರದ ಪತ್ರಿಕಾಭವನದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸಹಕಾರಿ ಸಂಸ್ಥೆಯು ಕಳೆದ ಆರು ತಿಂಗಳಿನಿಂದ ಯಾವುದೇ ಗ್ರಾಹಕರಿಗೆ ಅವರ ಠೇವಣಿ ಹಣವನ್ನು ಮರುಪಾವತಿಸದೆ ಸತಾಯಿಸುತ್ತಿದೆ.
ಇದರಿಂದಾಗಿ ಸಾವಿರಾರು ಕುಟುಂಬಗಳು ಇಂದು ಬೀದಿಗೆ ಬಿದ್ದಿದ್ದು, ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿವೆ. ಈ ಬಗ್ಗೆ ಈಗಾಗಲೇ ಜಿಲ್ಲಾ ಆಡಳಿತ ಸೇರಿದಂತೆ ಸಂಬಂಧಪಟ್ಟ ಎಲ್ಲಾ ಇಲಾಖೆಗಳಿಗೆ ಮನವಿ ಸಲ್ಲಿಸಲಾಗಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ತಮ್ಮ ನ್ಯಾಯಸಮ್ಮತ ಬೇಡಿಕೆಗಳು ಈಡೇರದ ಹಿನ್ನೆಲೆಯಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ನಿರ್ಧರಿಸಲಾಗಿದ್ದು, ಇದರ ಭಾಗವಾಗಿ ಫೆಬ್ರವರಿ 2ರಂದು ಬೆಂಗಳೂರಿನ ವಿಧಾನಸೌಧದ ಬಳಿ ವಂಚಿತ ಗ್ರಾಹಕರೆಲ್ಲರೂ ಸೇರಿ ಬೃಹತ್ ಧರಣಿ ಹಾಗೂ ಉಪವಾಸ ಸತ್ಯಾಗ್ರಹ ನಡೆಸಲಿದ್ದೇವೆ.
ಈ ಸುದ್ದಿ ಓದಿದ್ದೀರಾ? ಹೊನ್ನಾವರ | ಇಡಗುಂಜಿ ಮಹಾಗಣಪತಿ ಸನ್ನಿಧಿಯಲ್ಲಿ ಅರ್ಚಕರ ಕಾಳಗ: ದಕ್ಷಿಣೆ ಹಣಕ್ಕಾಗಿ ಭಕ್ತರ ಮುಂದೆಯೇ ತಳ್ಳಾಟ!
ಈ ಕುರಿತು ಈಗಾಗಲೇ ಮುಖ್ಯಮಂತ್ರಿಗಳು, ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಹಾಗೂ ಉತ್ತರ ಕನ್ನಡ ಜಿಲ್ಲಾಧಿಕಾರಿಗಳ ಮೂಲಕ ಸಂಬಂಧಪಟ್ಟ ಅಧಿಕಾರಿಗಳಿಗೆ ನೋಟಿಸ್ ನೀಡಲಾಗಿದೆ ಎಂದು ಅವರು ಮಾಹಿತಿ ನೀಡಿದರು.
ಸಂಸ್ಥೆಯ ಮುಖ್ಯಸ್ಥ ಲಿಂಗರಾಜು ಪುತ್ತು ಕಲ್ಗುಟ್ಕರ ಸೇರಿದಂತೆ ಆಡಳಿತ ಮಂಡಳಿಯ 17 ನಿರ್ದೇಶಕರು ಹಾಗೂ 13 ಶಾಖೆಗಳ ವ್ಯವಸ್ಥಾಪಕರು ಸೇರಿ ಸಾರ್ವಜನಿಕರ ಬೆವರಿನ ಹಣವನ್ನು ನಿಯಮಬಾಹಿರವಾಗಿ ಲಪಟಾಯಿಸಿದ್ದಾರೆ. ಕೂಡಲೇ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಿ, ಠೇವಣಿದಾರರಿಗೆ ಅವರ ಹಣ ಮರಳಿಸಬೇಕು.
ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳುವುದು ಅನಿವಾರ್ಯವಾಗಲಿದೆ ಎಂದು ಎಚ್ಚರಿಸಿದರು. ಈ ಸಂದರ್ಭದಲ್ಲಿ ವಂಚಿತ ಗ್ರಾಹಕರ ಸಂಘದ ಅಧ್ಯಕ್ಷ ಎಚ್.ಎಫ್. ದೊಡ್ಡಣ್ಣವರ, ಉಪಾಧ್ಯಕ್ಷ ರೋಹಿದಾಸ ತಾಮ್ಸೆ, ಸಹ ಕಾರ್ಯದರ್ಶಿ ಕೃಷ್ಣಾನಂದ ನಾಯ್ಕ, ಖಜಾಂಚಿ ಸಾಯಿನಾಥ ಮೇತ್ರಿ ಸೇರಿದಂತೆ ಇತರ ಸದಸ್ಯರು ಉಪಸ್ಥಿತರಿದ್ದರು.





