ಉತ್ತರ ಕನ್ನಡ ಜಿಲ್ಲೆಯ ಗ್ರಾಮೀಣ ಭಾಗದ ಆರ್ಥಿಕತೆಗೆ ಹೊಸ ಚೈತನ್ಯ ನೀಡುವ ನಿಟ್ಟಿನಲ್ಲಿ ಕಾರವಾರ ತಾಲೂಕಿನ ಬೇಳೂರು ಹಾಗೂ ಅಂಕೋಲಾ ತಾಲೂಕಿನ ಬೆಳಸೆ ಗ್ರಾಮಗಳನ್ನು ‘ಸ್ಮಾರ್ಟ್ ವಿಲೇಜ್’ಗಳನ್ನಾಗಿ ಅಭಿವೃದ್ಧಿಪಡಿಸುವ ಪೈಲಟ್ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು ಎಂದು ಕೆ.ಎಸ್.ಎಂ.ಸಿ.ಎ (KSMCA) ಅಧ್ಯಕ್ಷರು ಹಾಗೂ ಶಾಸಕರಾದ ಸತೀಶ ಸೈಲ್ ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ಮಾರುಕಟ್ಟೆ ಸಂವಹನ ಮತ್ತು ಜಾಹೀರಾತು ಲಿಮಿಟೆಡ್ ವತಿಯಿಂದ ಜಾರಿಗೆ ಬರುತ್ತಿರುವ ಈ ಯೋಜನೆಯು ಗ್ರಾಮೀಣ ಪ್ರದೇಶಗಳಲ್ಲಿ ಸ್ಥಳೀಯ ಉದ್ಯಮಶೀಲತೆಯನ್ನು ಉತ್ತೇಜಿಸುವ ಪ್ರಮುಖ ಉದ್ದೇಶವನ್ನು ಹೊಂದಿದೆ.
ಗ್ರಾಮ ಮಟ್ಟದಲ್ಲಿ ಉದ್ಯೋಗಾವಕಾಶಗಳನ್ನು ಸೃಷ್ಟಿಸುವುದು ಮತ್ತು ಸ್ಥಳೀಯ ಉತ್ಪನ್ನಗಳಿಗೆ ಸಂಘಟಿತ ಮಾರುಕಟ್ಟೆ ವ್ಯವಸ್ಥೆಯನ್ನು ಒದಗಿಸುವ ಮೂಲಕ ಹಳ್ಳಿಗಳನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿ ಮಾಡುವುದು ಈ ಯೋಜನೆಯ ಆಶಯವಾಗಿದೆ.
ಯೋಜನೆಯ ಮುಖ್ಯಾಂಶಗಳು: ಈ ಪೈಲಟ್ ಕಾರ್ಯಕ್ರಮದ ಅಡಿಯಲ್ಲಿ ಕೃಷಿ ಮತ್ತು ಕೃಷಿ ಪೂರಕ ಚಟುವಟಿಕೆಗಳು, ಮೀನುಗಾರಿಕೆ, ಪಾರಂಪರಿಕ ಉತ್ಪನ್ನಗಳು, ಕರಕುಶಲ ವಸ್ತುಗಳು ಹಾಗೂ ಮಹಿಳಾ ಸ್ವಸಹಾಯ ಸಂಘಗಳ ಆಧಾರಿತ ಉದ್ಯಮಗಳನ್ನು ಗುರುತಿಸಿ ವಿಶೇಷ ಬೆಂಬಲ ನೀಡಲಾಗುತ್ತದೆ.
ಈ ಸುದ್ದಿ ಓದಿದ್ದೀರಾ ? ಅಂಕೋಲಾ | ಭೀಕರ ಸರಣಿ ಅಪಘಾತ: 12 ವಿದೇಶಿಗರು ಸೇರಿ 28 ಮಂದಿಗೆ ಗಾಯ, ಹೆದ್ದಾರಿ ಸಂಚಾರ ಅಸ್ತವ್ಯಸ್ತ
ಮುಖ್ಯವಾಗಿ ಮಹಿಳೆಯರು ಮತ್ತು ಯುವಕರ ಸಬಲೀಕರಣಕ್ಕೆ ಈ ಯೋಜನೆ ಒತ್ತು ನೀಡಲಿದೆ. ಆಯ್ಕೆಯಾದ ಉದ್ಯಮಗಳಿಗೆ ‘ಸಂಪತ್ತಿ’ ಕಾರ್ಯಕ್ರಮದ ಅಡಿಯಲ್ಲಿ ತರಬೇತಿ, ಮಾರ್ಗದರ್ಶನ (Mentoring), ಬ್ರಾಂಡಿಂಗ್, ಪ್ಯಾಕೇಜಿಂಗ್ ಮತ್ತು ಮಾರುಕಟ್ಟೆ ಸಂಪರ್ಕದ ಸಮಗ್ರ ನೆರವು ಸಿಗಲಿದೆ.
12 ವಾರಗಳ ಅವಧಿಯಲ್ಲಿ ಮೂಲ ಸಮೀಕ್ಷೆ, ಉದ್ಯಮಗಳ ಗುರುತಿಸುವಿಕೆ, ಸಾಮರ್ಥ್ಯ ವೃದ್ಧಿ ಹಾಗೂ ಡಿಜಿಟಲ್ ಸಬಲೀಕರಣ ಪ್ರಕ್ರಿಯೆಗಳು ನಡೆಯಲಿವೆ. ಈ ಯೋಜನೆಯನ್ನು ಗ್ರಾಮ ಪಂಚಾಯತ್ಗಳು ಮತ್ತು ವಿವಿಧ ಸರ್ಕಾರಿ ಇಲಾಖೆಗಳ ಸಮನ್ವಯದೊಂದಿಗೆ ಅನುಷ್ಠಾನಗೊಳಿಸಲಾಗುತ್ತದೆ.
ಈ ಕುರಿತು ಮಾಹಿತಿ ಹಂಚಿಕೊಂಡ ಶಾಸಕ ಸತೀಶ ಸೈಲ್ ಅವರು, “ಬೇಳೂರು ಮತ್ತು ಬೆಳಸೆ ಗ್ರಾಮಗಳಲ್ಲಿ ಜಾರಿಯಾಗುತ್ತಿರುವ ಈ ಮಾದರಿಯು ಮುಂದಿನ ದಿನಗಳಲ್ಲಿ ಜಿಲ್ಲೆ ಹಾಗೂ ರಾಜ್ಯದ ಇತರ ಗ್ರಾಮಗಳಿಗೂ ಮಾದರಿಯಾಗಲಿದೆ.
ಈ ಯೋಜನೆಯಿಂದ ಕನಿಷ್ಠ 30 ರಿಂದ 50 ಸ್ಥಿರ ಉದ್ಯಮಗಳು ಸೃಷ್ಟಿಯಾಗಲಿದ್ದು, ಕುಟುಂಬಗಳ ಆದಾಯ ಹೆಚ್ಚಳವಾಗುವುದರ ಜೊತೆಗೆ ಗ್ರಾಮೀಣ ಉತ್ಪನ್ನಗಳಿಗೆ ನೇರ ಮಾರುಕಟ್ಟೆ ಸಂಪರ್ಕ ಸಿಗಲಿದೆ,” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.





