ಕಾರವಾರ: ಕಾರ್ಮಿಕರ ಹಿತರಕ್ಷಣೆ ಮತ್ತು ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗಾಗಿ ಸರ್ಕಾರ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದು, ಸಾರ್ವಜನಿಕರು ಮತ್ತು ಕಾರ್ಮಿಕರು ಇವುಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಶಾಸಕ ಹಾಗೂ ಕರ್ನಾಟಕ ರಾಜ್ಯ ಮಾರ್ಕೆಟಿಂಗ್ ಕಮ್ಯೂನಿಕೇಷನ್ ಅಂಡ್ ಅಡ್ವರ್ಟೈಸಿಂಗ್ ಏಜೆನ್ಸಿ ಲಿಮಿಟೆಡ್ ಅಧ್ಯಕ್ಷ ಸತೀಶ್ ಕೆ. ಸೈಲ್ ತಿಳಿಸಿದರು.
ಶುಕ್ರವಾರ ನಗರದಲ್ಲಿ ನಡೆದ ಎರಡು ಪ್ರತ್ಯೇಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಜಿಲ್ಲಾ ಪೊಲೀಸ್ ಕಲ್ಯಾಣ ಮಂಟಪದಲ್ಲಿ ಕಾರ್ಮಿಕ ಇಲಾಖೆ ವತಿಯಿಂದ ಆಯೋಜಿಸಲಾದ ಅರ್ಹ ಕಟ್ಟಡ ಕಾರ್ಮಿಕರಿಗೆ ಸುರಕ್ಷತಾ ಕಿಟ್ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿದ ಅವರು,
ಕಾರ್ಮಿಕರ ಆರೋಗ್ಯ ಮತ್ತು ಸುರಕ್ಷತೆಯ ದೃಷ್ಟಿಯಿಂದ ಸರ್ಕಾರ ನೀಡುವ ಪಿಂಚಣಿ, ಟೂಲ್ ಕಿಟ್, ಹೆರಿಗೆ ಸೌಲಭ್ಯ ಹಾಗೂ ವೈದ್ಯಕೀಯ ಸಹಾಯಧನದಂತಹ ಸೌಲಭ್ಯಗಳನ್ನು ಪ್ರತಿಯೊಬ್ಬ ಕಾರ್ಮಿಕರೂ ಬಳಸಿಕೊಳ್ಳಬೇಕು ಎಂದು ಹೇಳಿದರು.
ಕಾರವಾರ ತಾಲೂಕಿನ 7,782 ನೋಂದಾಯಿತ ಕಾರ್ಮಿಕರ ಪೈಕಿ 350 ಫಲಾನುಭವಿಗಳಿಗೆ ಇಂದು ಕಿಟ್ ವಿತರಿಸಲಾಗಿದ್ದು, 18 ರಿಂದ 60 ವರ್ಷದೊಳಗಿನ ಅಸಂಘಟಿತ ಕಾರ್ಮಿಕರು ಇಲಾಖೆಯಲ್ಲಿ ನೋಂದಣಿ ಮಾಡಿಕೊಳ್ಳುವಂತೆ ಮನವಿ ಮಾಡಿದರು.
ಅಲ್ಲದೆ, ಸರ್ಕಾರದ ಪಂಚ ಗ್ಯಾರೆಂಟಿ ಯೋಜನೆಗಳ ಲಾಭ ಪಡೆಯುವ ಜೊತೆಗೆ ಕಾರ್ಮಿಕರು ತಮ್ಮ ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸಬೇಕು ಎಂದು ತಿಳಿ ಹೇಳಿದರು. ನಂತರ, ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮೂರನೇ ಮಹಡಿಯಲ್ಲಿ ಕೆ.ಎಸ್.ಎಂ.ಸಿ.ಎ ಸಂಸ್ಥೆಯ ಸಿ.ಎಸ್.ಆರ್ ಅನುದಾನದಡಿ
ಈ ಸುದ್ದಿ ಓದಿದ್ದೀರಾ? ಹೊನ್ನಾವರ | ಇಡಗುಂಜಿ ಮಹಾಗಣಪತಿ ಸನ್ನಿಧಿಯಲ್ಲಿ ಅರ್ಚಕರ ಕಾಳಗ: ದಕ್ಷಿಣೆ ಹಣಕ್ಕಾಗಿ ಭಕ್ತರ ಮುಂದೆಯೇ ತಳ್ಳಾಟ!
35 ಲಕ್ಷ ರೂ. ವೆಚ್ಚದ ಸಭಾ ಭವನ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಸತೀಶ್ ಸೈಲ್, ಕ್ಷೇತ್ರಕ್ಕೆ 15 ಕೋಟಿ ರೂ. ವೆಚ್ಚದಲ್ಲಿ 3 ಶಾಲೆಗಳು ಮಂಜೂರಾಗಿದ್ದು, ಕಾಲೇಜಿನ ಸುಸಜ್ಜಿತ ಕ್ಯಾಂಟೀನ್ ಬೇಡಿಕೆಯನ್ನು ಶೀಘ್ರವೇ ಈಡೇರಿಸಲಾಗುವುದು ಎಂದರು.
ರಾಜ್ಯಕ್ಕೆ ಮಾದರಿಯಾಗಿರುವ ಈ ಕಾಲೇಜು ಈ ಬಾರಿಯೂ ಶೇ. 100 ರಷ್ಟು ಫಲಿತಾಂಶ ದಾಖಲಿಸುವಂತಾಗಲಿ ಎಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ವೀರನಗೌಡ ಪಿ. ಏನಗಗೌಡರ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಸತೀಶ್ ನಾಯ್ಕ್, ಕಾರ್ಮಿಕ ಇಲಾಖೆಯ ಅಧಿಕಾರಿ ಲಲಿತಾ ಸಾತೇನಳ್ಳಿ, ಪ್ರಾಂಶುಪಾಲ ರಮೇಶ್ ಪತ್ರೇಕರ್ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.





