ಕಾರವಾರ: ಜಿಲ್ಲೆಯ ಕಲೆ, ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಹಾಗೂ ಯುವ ಪೀಳಿಗೆಗೆ ಅದನ್ನು ಪರಿಚಯಿಸುವ ಉದ್ದೇಶದಿಂದ, ಕಳೆದ ಎಂಟು ವರ್ಷಗಳಿಂದ ಸ್ಥಗಿತಗೊಂಡಿದ್ದ ‘ಕರಾವಳಿ ಉತ್ಸವ’ಕ್ಕೆ ಸೋಮವಾರ ಅದ್ಧೂರಿ ಚಾಲನೆ ಸಿಕ್ಕಿತು.
ಇಲ್ಲಿನ ರವೀಂದ್ರನಾಥ ಠಾಗೋರ್ ಕಡಲತೀರದ ಮಯೂರವರ್ಮ ವೇದಿಕೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್. ವೈದ್ಯ ಅವರು ಏಳು ದಿನಗಳ ಈ ಸಪ್ತಾಹವನ್ನು ಉದ್ಘಾಟಿಸಿದರು. ಕಲೆ ಮತ್ತು ಕಲಾವಿದರಿಗೆ ಪ್ರೋತ್ಸಾಹ:ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಸಚಿವರು, “ಕಾರಣಾಂತರಗಳಿಂದ ನಿಂತುಹೋಗಿದ್ದ ಈ ಉತ್ಸವವನ್ನು ಈಗ ಪುನರಾರಂಭಿಸಲಾಗಿದೆ.
ಸ್ಥಳೀಯ ಕಲಾವಿದರಿಗೆ ರಾಷ್ಟ್ರಮಟ್ಟದ ವೇದಿಕೆ ಕಲ್ಪಿಸಿಕೊಡುವುದು ಮತ್ತು ನಮ್ಮ ಪರಂಪರೆಯನ್ನು ಉಳಿಸುವುದು ನಮ್ಮ ಮುಖ್ಯ ಗುರಿ. ಕರಾವಳಿ ಭಾಗದ ಯುವಜನರು ಉದ್ಯೋಗಕ್ಕಾಗಿ ಅಲೆದಾಡುವುದನ್ನು ತಪ್ಪಿಸಲು ಪ್ರವಾಸೋದ್ಯಮಕ್ಕೆ ಪ್ರತ್ಯೇಕ ನೀತಿಯನ್ನು ಜಾರಿಗೊಳಿಸಲಾಗುವುದು. ಪ್ರಕೃತಿ ಮತ್ತು ಮೀನುಗಾರರ ಹಿತಕ್ಕೆ ಧಕ್ಕೆಯಾಗದಂತೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುವುದು,” ಎಂದು ಹೇಳಿದರು.

ಮೂಲಸೌಕರ್ಯ ಹಾಗೂ ಆಸ್ಪತ್ರೆ ಅಭಿವೃದ್ಧಿ: ಶಾಸಕ ಹಾಗೂ ಕರ್ನಾಟಕ ರಾಜ್ಯ ಮಾರ್ಕೆಟಿಂಗ್ ಕಮ್ಯೂನಿಕೇಷನ್ ಲಿಮಿಟೆಡ್ ಅಧ್ಯಕ್ಷ ಸತೀಶ್ ಸೈಲ್ ಮಾತನಾಡಿ, “ಸತತ ಎಂಟು ವರ್ಷಗಳ ಬಳಿಕ ಈ ಉತ್ಸವ ನಡೆಯುತ್ತಿರುವುದು ಸಂತಸದ ವಿಷಯ. ಉತ್ಸವದ ಯಾವುದಾದರೊಂದು ದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಮಿಸಲಿದ್ದಾರೆ.
ಆ ಸಂದರ್ಭದಲ್ಲಿ ರಾಮನಗುಳಿ ಸೇತುವೆ, ಮಂಜುಗುಣಿ ಸೇತುವೆ ಹಾಗೂ 450 ಹಾಸಿಗೆಗಳ ಸುಸಜ್ಜಿತ ಆಸ್ಪತ್ರೆಯನ್ನು ಲೋಕಾರ್ಪಣೆ ಮಾಡಲಾಗುವುದು. ಕಾರವಾರದಲ್ಲಿ ಸೂಪರ್ ಸ್ಪೆಷಲಿಟಿ ಆಸ್ಪತ್ರೆ ನಿರ್ಮಿಸುವ ನಿಟ್ಟಿನಲ್ಲಿ ಈಗಾಗಲೇ ಟ್ರಾಮಾ ಸೆಂಟರ್ ತೆರೆಯಲಾಗಿದ್ದು, ಮುಂದಿನ ದಿನಗಳಲ್ಲಿ ಪೂರ್ಣ ಪ್ರಮಾಣದ ಸೌಲಭ್ಯ ಒದಗಿಸಲಾಗುವುದು,” ಎಂದು ಭರವಸೆ ನೀಡಿದರು.
ಜಿಲ್ಲೆಯ ಯುವಕರು ಉದ್ಯೋಗಕ್ಕಾಗಿ ನೆರೆಯ ಗೋವಾ ರಾಜ್ಯವನ್ನು ಅವಲಂಬಿಸಿರುವುದನ್ನು ಪ್ರಸ್ತಾಪಿಸಿದ ಸೈಲ್, “ನಮ್ಮಲ್ಲಿನ 380 ಕಿ.ಮೀ ಉದ್ದದ ಕರಾವಳಿ ತೀರ ಹಾಗೂ ಶರಾವತಿ, ಗಂಗಾವಳಿ, ಅಘನಾಶಿನಿ ನದಿಗಳ ಹಿನ್ನೀರು ಪ್ರವಾಸೋದ್ಯಮಕ್ಕೆ ಪೂರಕವಾಗಿದೆ. ಇಲ್ಲಿ ಕೈಗಾರಿಕೆ ಹಾಗೂ ಪ್ರವಾಸೋದ್ಯಮ ಅಭಿವೃದ್ಧಿಪಡಿಸುವ ಮೂಲಕ ಸ್ಥಳೀಯರಿಗೆ ಉದ್ಯೋಗ ಸೃಷ್ಟಿಸಲು ಕ್ರಮ ಕೈಗೊಳ್ಳಲಾಗುವುದು,” ಎಂದರು.
ಈ ಸುದ್ದಿ ಓದಿದ್ದೀರಾ? ಹೊನ್ನಾವರ | ಆನ್ಲೈನ್ ಪಾರ್ಟ್ ಟೈಮ್ ಜಾಬ್ ಆಮಿಷ: 17 ಲಕ್ಷ ರೂ. ಕಳೆದುಕೊಂಡ ಮಹಿಳೆ
ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, “ಡಿಸೆಂಬರ್ 28ರ ವರೆಗೆ ನಡೆಯಲಿರುವ ಈ ಉತ್ಸವದಲ್ಲಿ ಚಿತ್ರಕಲೆ, ರಂಗೋಲಿ, ರೀಲ್ಸ್ ಮೇಕಿಂಗ್, ಗಾಳಿಪಟ ಉತ್ಸವ, ಅಡುಗೆ ಸ್ಪರ್ಧೆ, ಶ್ವಾನ ಪ್ರದರ್ಶನ, ದೋಣಿ ಸ್ಪರ್ಧೆ, ಕರಾವಳಿ ರನ್ ಹಾಗೂ ಮರಳು ಚಿತ್ರಕಲೆ ಸೇರಿದಂತೆ ವಿವಿಧ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ,” ಎಂದು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ಗಣಪತಿ ಉಳ್ವೇಕರ್, ಶಾಂತರಾಮ ಬುಡ್ನ ಸಿದ್ದಿ, ಜಿಲ್ಲಾ ಪಂಚಾಯತ್ ಸಿಇಒ ದಿಲೀಷ್ ಶಶಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್., ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮಂಗಲಾ ಎಂ. ನಾಯ್ಕ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.





