ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಕಾರವಾರ ವ್ಯಾಪ್ತಿಯಲ್ಲಿ ಈವರೆಗೆ 1.30 ಕೋಟಿಗೂ ಅಧಿಕ ಫಲಾನುಭವಿಗಳು ಶಕ್ತಿ ಯೋಜನೆಯ ಸದುಪಯೋಗ ಪಡೆದುಕೊಂಡಿದ್ದು, ಇದರ ಟಿಕೆಟ್ ಮೌಲ್ಯ ₹41.81 ಕೋಟಿಯಾಗಿದೆ ಎಂದು ಕಾರವಾರ ತಾಲೂಕು ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರ ಸಮಿತಿಯ ಅಧ್ಯಕ್ಷ ರಾಜೇಂದ್ರ ಎಚ್ ರಾಣೆ ಹೇಳಿದರು.
ರಾಜ್ಯದಲ್ಲಿ ಶಕ್ತಿ ಯೋಜನೆಯಡಿ ಈವರೆಗೆ 500 ಕೋಟಿ ಮಹಿಳೆಯರು ಉಚಿತ ಪ್ರಯಾಣ ಮಾಡಿರುವ ಕುರಿತು ಉತ್ತರ ಕನ್ನಡ ಜಿಲ್ಲೆಯ ಕಾರವಾರ ಬಸ್ ನಿಲ್ದಾಣದಲ್ಲಿ ಸೋಮವಾರ ಆಚರಿಸಿದ ಸಂಭ್ರಮದ ಕಾರ್ಯಕ್ರಮದಲ್ಲಿ ಸಾರಿಗೆ ಬಸ್ಗೆ ಪೂಜೆ ಸಲ್ಲಿಸಿ ಮಾತನಾಡಿದರು.
“ರಾಜ್ಯ ಸರ್ಕಾರವು ಚುನಾವಣಾ ಸಂದರ್ಭದಲ್ಲಿ ಘೋಷಣೆ ಮಾಡಿದ ಪಂಚಗ್ಯಾರಂಟಿ ಯೋಜನೆಗಳನ್ನು ರಾಜ್ಯದಲ್ಲಿ ಯಶಸ್ವಿಯಾಗಿ ಅನುಷ್ಠಾನ ಮಾಡಿ ಕಾರ್ಯರೂಪಕ್ಕೆ ತರುವುದರ ಮೂಲಕ ನುಡಿದಂತೆ ನಡೆದಿದೆ. ಐದು ಗ್ಯಾರಂಟಿ ಯೋಜನೆಗಳ ಪೈಕಿ ಶಕ್ತಿ ಯೋಜನೆಯನ್ನು ಜೂನ್ 2023ರಿಂದ ಜಾರಿಗೊಳಿಸಿದೆ” ಎಂದರು.
“ರಾಜ್ಯದಲ್ಲಿ ಶಕ್ತಿ ಯೋಜನೆಯ ಫಲಾನುಭವಿ ಪ್ರಯಾಣಿಕರ ಸಂಖ್ಯೆ ಈಗ 500 ಕೋಟಿ ಗಡಿಯನ್ನು ದಾಟಿದ್ದು, ರಾಜ್ಯದ ಎಲ್ಲ ಮಹಿಳಾ ಫಲಾನುಭವಿಗಳು ಇದರ ಸದುಪಯೋಗ ಪಡೆದುಕೊಂಡಿದ್ದಾರೆ” ಎಂದು ಹೇಳಿದರು.
“ರಾಜ್ಯ ಸರ್ಕಾರ ಪ್ರಪಂಚದಲ್ಲೇ ಪ್ರಥಮ ಬಾರಿಗೆ ರಾಜ್ಯದಲ್ಲಿ ಇಂತಹ ಯೋಜನೆಯನ್ನು ಜಾರಿಗೆ ತಂದಿದ್ದು, ಶಕ್ತಿ ಯೋಜನೆಯ ಯಶಸ್ವಿಯಂತೆ ಅನ್ಯಭಾಗ್ಯ, ಗೃಹಜ್ಯೋತಿ, ಗೃಹಲಕ್ಷಿ, ಯುವನಿಧಿ ಯೋಜನೆಯೂ ಕೂಡ ಯಶಸ್ವಿಗೊಂಡಿದೆ” ಎಂದರು.
ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಶಕ್ತಿ ಯೋಜನೆಯಡಿ 500 ಕೋಟಿ ಮಹಿಳೆಯರ ಪ್ರಯಾಣ ಇತಿಹಾಸ ಸೃಷ್ಟಿ; ಹೊನ್ನಾಳಿ ಶಾಸಕ ಶಾಂತನಗೌಡ
ಶಕ್ತಿ ಯೋಜನೆ ಯಶಸ್ವಿಗೆ ಪ್ರಮುಖ ಕಾರಣಕರ್ತರಾದ ವಾಹನ ಚಾಲಕರು ಮತ್ತು ನಿರ್ವಾಹಕರನ್ನು ಸನ್ಮಾನಿಸಲಾಯಿತು. ಸಾರ್ವಜನಿಕರಿಗೆ ಹಾಗೂ ಪ್ರಯಾಣಿಕರಿಗೆ ಸಿಹಿ ಹಂಚಿ, ಸರ್ಕಾರ ಮತ್ತು ಸಾರಿಗೆ ಇಲಾಖೆಗೆ ಧನ್ಯವಾದ ಅರ್ಪಿಸಲಾಯಿತು.
ಈ ಸಂದರ್ಭದಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಕಾರವಾರ ಘಟಕದ ವ್ಯವಸ್ಥಾಪಕಿ ಸೌಮ್ಯ, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ವೀರನಗೌಡ ಪಿ. ಏಣಗೌಡರ, ತಾಲೂಕು ಗ್ಯಾರಂಟಿ ಅಭಿವೃದ್ಧಿ ಸಮಿತಿಯ ಸದಸ್ಯರು, ಸಾರಿಗೆ ಬಸ್ ಚಾಲಕರು, ನಿರ್ವಾಹಕರು, ಸಾರ್ವಜನಿಕರು, ಪ್ರಯಾಣಿಕರು ಸೇರಿದಂತೆ ಇತರರು ಇದ್ದರು.





