ಬೀದರ ಜಿಲ್ಲೆಯಲ್ಲಿರುವ ಯಾವುದೇ ಕನ್ನಡ ಶಾಲೆಗಳನ್ನು ಮುಚ್ಚದಂತೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಸಲೀಂ ಪಾಶಾ ಅವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿತು.
“ಇತ್ತೀಚೆಗೆ ಔರಾದ ತಾಲೂಕಿನ ಕಿರುಗುಣವಾಡಿಯಲ್ಲಿರುವ ಮಾತೋಶ್ರೀ ಜೀಜಾಬಾಯಿ ಕನ್ನಡ ಮಾಧ್ಯಮ ಶಾಲೆಯನ್ನು ಮುಚ್ಚುತ್ತಿರುವ ಬಗ್ಗೆ ವರದಿಯಾಗಿದ್ದನ್ನು ಗಮನಿಸಿ, ಗಡಿ ಭಾಗದಲ್ಲಿ ಕನ್ನಡದ ಬೆಳವಣಿಗೆ
ಕಷ್ಟಸಾಧ್ಯವಾದ ಈ ಸಂದರ್ಭದಲ್ಲಿ ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚುವುದು ಸೂಕ್ತವಲ್ಲ” ಎಂದು ಹೇಳಿದರು.
ಕನ್ನಡ ಮಾಧ್ಯಮ ಶಾಲೆಗಳಲ್ಲಿ ಓದಿರುವ ಮತ್ತು ಓದುತ್ತಿರುವ ಮಕ್ಕಳ ಭವಿಷ್ಯವನ್ನು ದೃಷ್ಟಿಯಲ್ಲಿಟ್ಟುಕೊಂಡು
ಮತ್ತು ಕನ್ನಡ ನಾಡಿನ ನೆಲ, ಜಲ, ಭಾಷೆ ಇವುಗಳ ಸಂರಕ್ಷಣೆ ಮಾಡುವುದು ಪರಿಷತ್ತಿನ ಆದ್ಯ ಕರ್ತವ್ಯವಾಗಿದೆ. ಆದ್ದರಿಂದ ಶಾಲಾ ಶಿಕ್ಷಣ ಇಲಾಖೆಗೆ ಜಿಲ್ಲೆಯ ಯಾವುದೇ ಶಾಲೆಗಳನ್ನು ಮುಚ್ಚದಂತೆ ಮನವಿ ಮಾಡಿಕೊಂಡಿರುವುದಾಗಿ ಜಿಲ್ಲಾ ಕಸಾಪ ಅಧ್ಯಕ್ಷ ಸುರೇಶ ಚನ್ನಶೆಟ್ಟಿಯವರು ತಿಳಿಸಿದ್ದಾರೆ.
ಹೊಸ ಶಾಲೆಗೆ ಮನವಿ :
ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿರುವ ಕಮಲನಗರ ಮತ್ತು ದಾಬಕಾ ಪಟ್ಟಣಗಳಲ್ಲಿ ಕನ್ನಡ ಮಾಧ್ಯಮ ಶಾಲೆಗಳಿಲ್ಲ. ಹೀಗಾಗಿ ಅಲ್ಲಿ ಕನ್ನಡ ಮಾಧ್ಯಮ ಪ್ರೌಢ ಶಾಲೆಗಳನ್ನು ತೆರೆಯುವಂತೆ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಮನವಿ ಮಾಡಿದರು.
ದಾಬಕಾದಲ್ಲಿ ಕನ್ನಡ ಮಾಧ್ಯಮ ಶಾಲೆ ಇಲ್ಲದೇ ಇರುವುದರಿಂದ ಅಲ್ಲಿನ ಮಕ್ಕಳು 30ಕಿ.ಮಿ.ದೂರದ ಔರಾದ ಪಟ್ಟಣದ ಶಾಲೆಗಳಿಗೆ ಪ್ರವೇಶ ಪಡೆಯಬೇಕಾದ ಅನಿವಾರ್ಯತೆ ಇದೆ. ಹೀಗಾಗಿ ದಾಬಕಾ ಮತ್ತು
ಕಮಲನಗರಗಳಲ್ಲಿ ಹೊಸದಾಗಿ ಕನ್ನಡ ಮಾಧ್ಯಮ ಪ್ರೌಢ ಶಾಲೆ ತೆರೆಯಲು ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿದರು.ಎರಡೂ ಮನವಿಗಳಿಗೂ ಉಪನಿರ್ದೇಶಕರು ಸಕಾರಾತ್ಮಕವಾಗಿ ಸ್ಪಂದಿಸಿದರು.
ಈ ಸುದ್ದಿ ಓದಿದ್ದೀರಾ? ಬೀದರ್ ಲೋಕಸಭಾ | ಇವರಿಬ್ಬರು ʼಹ್ಯಾಟ್ರಿಕ್ʼ ಸಾಧಕರು, ಕ್ಷೇತ್ರದ ಅತಿ ಕಿರಿಯ, ಹಿರಿಯ ಸಂಸದರು
ಈ ಸಂದರ್ಭದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಶಿವಕುಮಾರ ಕಟ್ಟೆ
ಮತ್ತು ಉಪಾಧ್ಯಕ್ಷರಾದ ದಾನಿ ಬಾಬುರಾವ ಉಪಸ್ಥಿತರಿದ್ದರು.





