ಭಾರೀ ಮಳೆಯಿಂದಾಗಿ ಗೋಡೆ ಕುಸಿತ ಉಂಟಾಗಿದ್ದು, ಮನೆ ಹಾನಿಯಾಗಿರುವುದನ್ನು ಪರಿಶೀಲಿಸಿದ ಶಾಸಕರು ಎನ್ಡಿಆರ್ಎಫ್ ಮತ್ತು ಎಸ್ಡಿಆರ್ಎಫ್ ಮಾರ್ಗಸೂಚಿಯಂತೆ ಕೂಡಲೇ ಪರಿಹಾರ ಬಿಡುಗಡೆ ಮಾಡಬೇಕು ಎಂದು ಶಾಸಕ ಮಂತರ್ ಗೌಡ ಅವರು ಕಂದಾಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಕೊಡಗು ಜಿಲ್ಲೆಯ ಮಡಿಕೇರಿಯ ಮಲ್ಲಿಕಾರ್ಜುನ ನಗರ ಹಾಗೂ ತ್ಯಾಗರಾಜ ಕಾಲೋನಿಯ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದ ವೇಳೆ ಮಾತನಾಡಿದರು.
“ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇರುವುದರಿಂದ. ಇಲ್ಲಿನ ನಾಗರಿಕರೂ ಕೂಡ ಹೆಚ್ಚಿನ ಜಾಗೃತಿ ವಹಿಸಬೇಕಿದೆ” ಎಂದು ಶಾಸಕರು ಮನವಿ ಮಾಡಿದ್ದು, ಸ್ಥಳೀಯರ ಕುಂದು ಕೊರತೆಯನ್ನು ಆಲಿಸಿದರು.
ನಗರದ ಸ್ಟೀವರ್ಟ್ ಹಿಲ್ ಬಳಿಯಿರುವ ತ್ಯಾಜ್ಯ ಘಟಕ ಸ್ಥಳಕ್ಕೆ ಭೇಟಿ ನೀಡಿ ವೀಕ್ಷಿಸಿದರು. ಜಾಗ ಸಂಬಂಧ ಹೈಕೋರ್ಟ್ ನ್ಯಾಯಾಲಯದಲ್ಲಿ ಪ್ರಕರಣ ಇರುವುದರಿಂದ ಬದಲಿ ಜಾಗ ಗುರುತಿಸುವಂತೆ ಕಂದಾಯ ಹಾಗೂ ನಗರಸಭೆ ಅಧಿಕಾರಿಗಳಿಗೆ ನಿರ್ದೇಶನ ನೀಡಿ, ಈ ಜಾಗವನ್ನು ಅಭಿವೃದ್ಧಿಪಡಿಸುವ ಸಂಬಂಧ ಅಗತ್ಯ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ನಗರಸಭೆ ಪೌರಾಯುಕ್ತ ವಿಜಯ್, ಪರಿಸರ ಎಂಜಿನಿಯರ್ ಸೌಮ್ಯ, ಎಇಇ ಹೇಮಂತ್ ಕುಮಾರ್ ಸೇರಿದಂತೆ ಇತರರು ಇದ್ದರು.
ಬಳಿಕ ನಗರದ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿ ಅಲ್ಲಿನ ವಿದ್ಯಾರ್ಥಿಗಳ ಅಹವಾಲು ಆಲಿಸಿದ ಶಾಸಕ ಡಾ ಮಂತರ್ ಗೌಡ ಅವರು, “ವಿದ್ಯಾರ್ಥಿ ನಿಲಯದಲ್ಲಿ ಶುಚಿತ್ವ ಕಾಪಾಡಬೇಕು. ವಿದ್ಯಾಭ್ಯಾಸದ ಕಡೆ ಹೆಚ್ಚಿನ ಗಮನಹರಿಸಬೇಕು” ಎಂದು ಸಲಹೆ ಮಾಡಿದ ಅವರು ಸಮಸ್ಯೆಗಳು ಇದ್ದಲ್ಲಿ ಮಾಹಿತಿ ನೀಡುವಂತಾಗಬೇಕು” ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಶೇಖರ್ ಇತರರು ಇದ್ದರು.
ಮಡಿಕೇರಿ ನಗರದ ಜಿಲ್ಲಾ ಪಂಚಾಯತ್ನ ಶಾಸಕರ ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ, “ಸಾರ್ವಜನಿಕರ ಕುಂದುಕೊರತೆ ಆಲಿಸಿ ಸ್ಥಳೀಯ ಸಮಸ್ಯೆಗಳನ್ನು ಹಂತ ಹಂತವಾಗಿ ಪರಿಹರಿಸಲಾಗುವುದು” ಎಂದರು. ಮನೆ ಹಾಗೂ ನಿವೇಶನ ಒದಗಿಸುವಂತೆ ಶಾಸಕರಲ್ಲಿ ಸಾರ್ವಜನಿಕರು ಮನವಿ ಮಾಡಿದರು.
“ಸರ್ಕಾರದ ಯೋಜನೆಗಳನ್ನು ಸರಿಯಾಗಿ ಬಳಸಿಕೊಂಡು ಅಭಿವೃದ್ಧಿಯತ್ತ ಗಮನಹರಿಸಬೇಕು. ಸಮಸ್ಯೆಗಳಿದ್ದಲ್ಲಿ ಗಮನಕ್ಕೆ ತರಬೇಕು. ತಮ್ಮ ಅಹವಾಲುಗಳನ್ನು ಆದಷ್ಟು ಶೀಘ್ರವೇ ಪರಿಹರಿಸಲಾಗುವುದು” ಎಂದು ಶಾಸಕ ಡಾ ಮಂತರ್ ಗೌಡ ತಿಳಿಸಿದರು.
ನಗರದ ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ವೃತ್ತದ ಬಳಿ ಇರುವ ಗುಡ್ಡೆಮನೆ ಅಪ್ಪಯ್ಯಗೌಡ ಅವರ ಪ್ರತಿಮೆ ಆವರಣವನ್ನು ಮತ್ತಷ್ಟು ಅಭಿವೃದ್ಧಿಪಡಿಸುವ ಸಂಬಂಧ ಅಧಿಕಾರಿಗಳಿಂದ ಮಾಹಿತಿ ಪಡೆದರು. ಅಭಿವೃದ್ಧಿಗೆ ಸಂಬಂಧಿಸಿದಂತೆ ಅಂದಾಜುಪಟ್ಟಿ ಸಲ್ಲಿಸುವಂತೆ ಎಂಜಿನಿಯರ್ಗಳಿಗೆ ಶಾಸಕರು ಸೂಚಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ, ಪೌರಾಯುಕ್ತ ವಿಜಯ್ ಇತರರು ಇದ್ದರು.
ಪ್ರಸಕ್ತ ಸಾಲಿನ ಆಯವ್ಯಯ ಭಾಷಣದ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಕಟಿಸಿದಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ರಾಜ್ಯದಲ್ಲಿ ತಲಾ 100ರಷ್ಟು ಸಂಖ್ಯಾಬಲದ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ 150 ಹೊಸ ವಿದ್ಯಾರ್ಥಿ ನಿಲಯ ಮಂಜೂರು ಮಾಡುವ ಕುರಿತು ಸರ್ಕಾರ ಆದೇಶ ಹೊರಡಿಸಿದೆ. ಆ ನಿಟ್ಟಿನಲ್ಲಿ ಕೊಡಗು ಜಿಲ್ಲೆಗೆ ಜಿಲ್ಲಾ ಕೇಂದ್ರದಲ್ಲಿ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯ ಆರಂಭಕ್ಕೆ ಸರ್ಕಾರ ಮಂಜೂರಾತಿ ನೀಡಿದೆ.
ಈ ಸುದ್ದಿ ಓದಿದ್ದೀರಾ? ಹಾಸನ: ದೂರು ನೀಡಲು ಬಂದ ಪತ್ನಿಗೆ ಎಸ್ಪಿ ಕಚೇರಿಯಲ್ಲೇ ಚಾಕು ಇರಿದು ಹತ್ಯೆ
ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರ ಎ ಎಸ್ ಪೊನ್ನಣ್ಣ ಹಾಗೂ ಶಾಸಕ ಡಾ ಮಂತರ್ ಗೌಡ ಅವರ ಪ್ರಯತ್ನದಿಂದ ಕೊಡಗು ಜಿಲ್ಲೆಗೆ ಎರಡು ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಆರಂಭಕ್ಕೆ ಸರ್ಕಾರ ಅನುಮತಿ ನೀಡಿದೆ.





