ಕಾವೇರಿ ನೀರು, ಬರ ಹಾಗೂ ರಾಜ್ಯ ಸರ್ಕಾರದ ವೈಫಲ್ಯ ವಿಚಾರ ಇಟ್ಟುಕೊಂಡು ರಾಜ್ಯ ಪ್ರವಾಸ ನಡೆಸುತ್ತಿದ್ದೇವೆ ಎಂದು ಬಿಜೆಪಿಯ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ ಎಸ್ ಯಡಿಯೂರಪ್ಪ ತಿಳಿಸಿದರು.
ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹಮ್ಮಿಕೊಂಡಿರುವ ಹೋರಾಟ ಮತ್ತು ರಾಜ್ಯ ಪ್ರವಾಸಕ್ಕೆ ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಕುರುಡುಮಲೆ ಗಣೇಶನಿಗೆ ಪೂಜೆ ಸಲ್ಲಿಸುವ ಮೂಲಕ ಅವರು ಇಂದು (ಭಾನುವಾರ) ಚಾಲನೆ ನೀಡಿ ಮಾತನಾಡಿದರು.
“ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಒಂದು ಕಿಮೀ ರಸ್ತೆ ಕೂಡ ಅಭಿವೃದ್ಧಿಪಡಿಸಿಲ್ಲ. ಭೀಕರ ಬರಗಾಲ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರನ್ನು ಮರೆತಿದೆ. ಗಣೇಶ ಚತುರ್ಥಿ ಬಳಿಕ ಮೊದಲು ಕಾವೇರಿ ನದಿ ನೀರಿನ ವಿಚಾರವಾಗಿ ಮಂಡ್ಯ, ಮೈಸೂರು, ಚಾಮರಾಜನಗರ ಭಾಗದಲ್ಲಿ ಪ್ರವಾಸ ಕೈಗೊಳ್ಳುತ್ತೇವೆ” ಎಂದು ಹೇಳಿದರು.
ಸಿದ್ದರಾಮಯ್ಯ ಹಾಗೂ ಅವರ ಪುತ್ರ ವರ್ಗಾವಣೆ ದಂಧೆಯಲ್ಲಿ ತೊಡಗಿದ್ದಾರೆ: ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ
“ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಪುತ್ರ ವರ್ಗಾವಣೆ ದಂಧೆಯಲ್ಲಿ ತೊಡಗಿದ್ದಾರೆ. ನಾನು ಹೇಳುತ್ತಿರುವುದು ಸುಳ್ಳು ಎಂದಾದರೆ ಕುರುಡುಮಲೆ ಗಣೇಶನ ಮುಂದೆ ನಿಂತು ಸಿದ್ದರಾಮಯ್ಯ ಪ್ರಮಾಣ ಮಾಡಲಿ” ಎಂದು ಮಾಜಿ ಸಚಿವ, ಬಿಜೆಪಿ ಮುಖಂಡ ಕೆ ಎಸ್ ಈಶ್ವರಪ್ಪ ಸವಾಲು ಹಾಕಿದರು.
“ಸಿದ್ದರಾಮಯ್ಯ ಅವರಿಗೆ ನಾನು ಕುರುಡುಮಲೆ ಗಣೇಶನ ಮುಂದೆ ನಿಂತು ಸವಾಲು ಹಾಕುತ್ತಿದ್ದೇನೆ. ವರ್ಗಾವಣೆ ದಂಧೆ ತನಿಖೆಗೆ ಹಾಲಿ ಅಥವಾ ನಿವೃತ್ತ ನ್ಯಾಯಾಧೀಶರನ್ನು ನೇಮಿಸಿ. ವರ್ಗಾವಣೆ ದಂಧೆಯಲ್ಲಿ ಬಿಜೆಪಿ ಸರ್ಕಾರದ ಅವಧಿಗಿಂತ ಎರಡು ಪಟ್ಟು ಅಧಿಕವಾಗಿ ಕಾಂಗ್ರೆಸ್ ಸರ್ಕಾರ ತೊಡಗಿಲ್ಲವೆಂದಾದರೆ ಕುರುಡುಮಲೆ ಗಣಪತಿ ನನಗೆ ಏನು ಬೇಕಾದರೂ ಶಾಪ ಕೊಡಲಿ” ಎಂದರು.
ಈ ಸುದ್ದಿ ಓದಿದ್ದೀರಾ? ಕಲಬುರಗಿ | ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ; ಹೈಕ ಅಭಿವೃದ್ಧಿಗೆ ₹5 ಸಾವಿರ ಕೋಟಿ: ಸಿಎಂ ಸಿದ್ದರಾಮಯ್ಯ
“ಎಷ್ಟು ದುಡ್ಡು ಕೊಟ್ಟಿದ್ದೇವೆಂದು ಹೇಳುವ 25 ಅಧಿಕಾರಿಗಳನ್ನು ತನಿಖಾ ತಂಡದ ಮುಂದೆ ನಿಲ್ಲಿಸುತ್ತೇನೆ. ವರ್ಗಾವಣೆ ದಂಧೆಗೆ ಲೆಕ್ಕವೇ ಇಲ್ಲದಂತಾಗಿದೆ. ಸಿದ್ದರಾಮಯ್ಯ ಇನ್ನು ಮುಂದಾದರೂ ಲಂಚ ಪಡೆಯಲ್ಲ, ಅಭಿವೃದ್ಧಿಗೆ ಒತ್ತುಕೊಡುತ್ತೇನೆಂದು ಪ್ರಮಾಣ ಮಾಡಲಿ” ಎಂದು ಈಶ್ವರಪ್ಪ ಹೇಳಿದರು.
ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಂಸದ ಡಿ ವಿ ಸದಾನಂದಗೌಡ, ಶಾಸಕ ಡಾ ಸಿ ಎನ್ ಅಶ್ವತ್ಥನಾರಾಯಣ, ಮಾಜಿ ಸಚಿವ ಗೋವಿಂದ ಕಾರಜೋಳ ಇದ್ದರು.





