ಹಿಂದುಳಿದ ವರ್ಗಗಳ ಆಯೋಗದಿಂದ ರಾಜ್ಯಾದ್ಯಂತ ಆರಂಭವಾಗಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಿಖರ ಮಾಹಿತಿ ನೀಡಿ ಸಹಕರಿಸಬೇಕು ಎಂದು ಸಾರ್ವಜನಿಕರಿಗೆ ಕೋಲಾರ ಜಿಲ್ಲೆಯ ಕೆಜಿಎಫ್ನ ಇಒ ವೆಂಕಟೇಶಪ್ಪ ಹೇಳಿದರು.
ಪಟ್ಟಣದ ಬಳಿಯ ಘಟ್ಟಕಾಮದೇನಹಳ್ಳಿ ಗ್ರಾಮ ಪಂಚಾಯತಿಯ ಕೃಷ್ಣಾಪುರ ಗ್ರಾಮದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಸಮೀಕ್ಷೆ ಕಾರ್ಯದ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, “ಸಮೀಕ್ಷಾ ಕಾರ್ಯಕ್ಕೆ ತಾಲೂಕಿನ ಶಾಲೆಯ ಶಿಕ್ಷಕರು ಮತ್ತು ಸರ್ಕಾರಿ ನೌಕರರನ್ನು ನಿಯೋಜಿಸಲಾಗಿದ್ದು, ಕಾಲಮಿತಿಯಲ್ಲಿ ಸಮೀಕ್ಷೆ ಕಾರ್ಯವನ್ನು ಪೂರ್ಣಗೊಳಿಸಬೇಕಾಗಿದೆ. ಸಾಮಾಜಿಕ ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಸರ್ಕಾರ ಸುಮಾರು 60 ಪ್ರಶ್ನೆಗಳನ್ನು ನಿಗದಿಗೊಳಿಸಿದ್ದು ಸಮೀಕ್ಷೆಗಾಗಿ ಬರುವ ಸರ್ಕಾರಿ ನೌಕರರು ಸರ್ಕಾರ ಬಿಡುಗಡೆಗೊಳಿಸಿರುವ ಮೊಬೈಲ್ ಆಪ್ ಬಳಸಿ ಪ್ರತಿ ಕುಟುಂಬದ ಮಾಹಿತಿಯನ್ನು ಕಲೆ ಹಾಕಲಿದ್ದಾರೆ” ಎಂದರು.
“60 ಪ್ರಶ್ನೆಗಳಿಗೆ ಉತ್ತರಿಸಲು ಸುಮಾರು 40 ನಿಮಿಷಗಳ ಕಾಲಾವಕಾಶ ಬೇಕಾಗಿದ್ದು, ತಾಲೂಕಿನಾದ್ಯಂತ ಸಾಧ್ಯವಾದಷ್ಟು ಶೀಘ್ರವಾಗಿ ಸಮೀಕ್ಷೆ ಪೂರ್ಣಗೊಳಿಸಲು ಕ್ರಮ ವಹಿಸಲಾಗಿದೆ ಸಾರ್ವಜನಿಕರು ಸಮರ್ಪಕವಾಗಿ ಮಾಹಿತಿ ನೀಡಿ ಯಶಸ್ವಿಗೊಳಿಸಬೇಕು” ಎಂದು ತಿಳಿಸಿದರು.
ಇದನ್ನೂ ಓದಿ: ಕೋಲಾರ | ದಸಂಸ ತಾಲೂಕು ಪದಾಧಿಕಾರಿಗಳ ಆಯ್ಕೆ
ಈ ಸಂದರ್ಭದಲ್ಲಿ ಪಿಡಿಒ ಕೇಶವ ರೆಡ್ಡಿ, ಗ್ರಾಮ ಪಂಚಾಯತಿ ಸಿಬ್ಬಂದಿ ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.





