ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನಲ್ಲಿ ಅರಣ್ಯ ಇಲಾಖೆ ಕೈಗೊಂಡಿರುವ ಒತ್ತುವರಿ ತೆರವು ಕಾರ್ಯಾಚರಣೆ ಹಾಗೂ ಬೆಳೆನಾಶ ವಿರೋಧಿಸಿ ಭಾನುವಾರ ಕೀಟನಾಶಕ ಕುಡಿದಿದ್ದ ಇಬ್ಬರು ಮಹಿಳೆಯರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಶ್ರೀನಿವಾಸಪುರದ ಶ್ಯಾಮಲಾ ಗೋಪಾಲರೆಡ್ಡಿ ಹಾಗೂ ಲಕ್ಷ್ಮಿದೇವಮ್ಮ ವೆಂಕಟರೆಡ್ಡಿ ತಾಲೂಕಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಬ್ಬರೂ ಅಪಾಯದಿಂದ ಪಾರಾಗಿದ್ದಾರೆಂದು ವೈದ್ಯರು ತಿಳಿಸಿದ್ದಾರೆ.
ಅರಣ್ಯ ಇಲಾಖೆ ಶ್ಯಾಮಲಾ ರೆಡ್ಡಿ ಅವರ 25 ಎಕರೆ ಜಮೀನನ್ನು ತೆರವುಗೊಳಿಸಿದ್ದು, ಜಮೀನಿನಲ್ಲಿ ಬೆಳೆದಿದ್ದ ಮಾವಿನ ಗಿಡ, ಕ್ಯಾಪ್ಸಿಕಂ, ಕ್ಯಾರೆಟ್ ಹಾಗೂ ಟೊಮೆಟೊ ಬೆಳೆಯನ್ನು ಜೆಸಿಬಿ ನುಗ್ಗಿಸಿ ನಾಶ ಮಾಡಿದ್ದಾರೆ.
ಶನಿವಾರ ಒತ್ತುವರಿ ತೆರವು ಕಾರ್ಯಾಚರಣೆಯಲ್ಲಿ ತೊಡಗಿದ್ದ ಜೆಸಿಬಿ ಯಂತ್ರಗಳ ಮೇಲೆ ಕಲ್ಲು ತೂರಿ ಗಾಜು ಒಡೆದು ಹಾಕಿದ ಪ್ರಕರಣ ಸಂಬಂಧ ರೈತರು ಹಾಗೂ ಬಿಜೆಪಿ ಮುಖಂಡರು ಸೇರಿದಂತೆ ಸುಮಾರು 20 ಮಂದಿ ವಿರುದ್ಧ ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಬಿಜೆಪಿ ಜಿಲ್ಲಾಧ್ಯಕ್ಷ ಡಾ. ಕೆ ಎನ್ ವೇಣುಗೋಪಾಲ್ ವಿರುದ್ಧವೂ ಪೊಲೀಸರು ಪ್ರಕರಣ ದಾಖಲಿಸಿದ್ದು, ದಾಳಿಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಸಂಸದ ಎಸ್ ಮುನಿಸ್ವಾಮಿ ವಿರುದ್ಧವೂ ಪ್ರಕರಣ ದಾಖಲಾಗಿದೆ ಎಂಬುದು ತಿಳಿದುಬಂದಿದೆ.
ತಾಲೂಕಿನ ನಾರಮಾಕನಹಳ್ಳಿ ಗ್ರಾಮದ ಹೊರವಲಯದಲ್ಲಿ ಅರಣ್ಯ ಇಲಾಖೆಯ ಜೆಸಿಬಿ ಯಂತ್ರಗಳ ಮೇಲೆ ರೊಚ್ಚಿಗೆದ್ದ ರೈತರು ದಾಳಿ ನಡೆಸಿದ್ದರು. ಸ್ಥಳಕ್ಕೆ ತೆರಳಿದ್ದ ಮುನಿಸ್ವಾಮಿ, “ರೈತರ ಭೂಮಿಯನ್ನು ವಶಕ್ಕೆ ಪಡೆಯಲು ಅರಣ್ಯ ಇಲಾಖೆ ಮುಂದಾದರೆ, ಬೆಳೆ ನಾಶಪಡಿಸಲು ಪ್ರಯತ್ನಿಸಿದರೆ ಜೆಸಿಬಿಗಳನ್ನು ಬಿಡಬೇಡಿ” ಎಂದಿದ್ದರು.
ಈ ಸುದ್ದಿ ಓದಿದ್ದೀರಾ? ಕಲಬುರಗಿ | ಸಾಲಬಾಧೆಯಿಂದ ಮನನೊಂದ ರೈತ ಆತ್ಮಹತ್ಯೆ
ಸುಮಾರು 3 ಸಾವಿರ ಎಕರೆಯಷ್ಟು ಅರಣ್ಯ ಪ್ರದೇಶ ಒತ್ತುವರಿ ಆಗಿರುವ ಬಗ್ಗೆ ದೂರುಗಳಿದ್ದು, ಅರಣ್ಯ ಇಲಾಖೆಯು 15 ದಿನಗಳಿಂದ ಒತ್ತುವರಿ ತೆರವು ಕಾರ್ಯಾಚರಣೆ ಕೈಗೊಂಡಿದೆ. ಈಗಾಗಲೇ ಸುಮಾರು ಸಾವಿರ ಎಕರೆ ತೆರವುಗೊಳಿಸಿದೆ.
ಪ್ರಕರಣ ದಾಖಲಿಸಿರುವುದನ್ನು ವಿರೋಧಿಸಿ ಮುನಿಸ್ವಾಮಿ ನೇತೃತ್ವದಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆಗೆ ಮುಂದಾಗಿದ್ದಾರೆ. ಶ್ರೀನಿವಾಸಪುರ ಠಾಣೆ ಬಳಿ ಬಿಗಿ ಭದ್ರತೆ ಕೈಗೊಂಡಿದ್ದು, ಸುಮಾರು 200 ಮಂದಿ ಪೊಲೀಸರನ್ನು ನಿಯೋಜಿಸಿದ್ದಾರೆ.





