2025-26ನೇ ಸಾಲಿನ ಆಯವ್ಯಯ ಘೋಷಣೆ ಕಂಡಿಕೆ 204ರಂತೆ ಎಂಜಿನಿಯರಿಂಗ್ ಮತ್ತು ಮೆಡಿಕಲ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಪ್ರತಿ ಜಿಲ್ಲೆಗೆ ಎರಡರಂತೆ ಒಟ್ಟು 62 ಮೆಟ್ರಿಕ್ ನಂತರದ ವಸತಿ ನಿಲಯಗಳನ್ನು ಪ್ರಾರಂಭಿಸಲು ಅನುಮೋದನೆ ನೀಡಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಿರ್ಧಾರವನ್ನು ಕಾಂಗ್ರೆಸ್ ಯುವ ಮುಖಂಡ ರಮೇಶ ಕಾಳೆ ಸ್ವಾಗತಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, “ಹಿಂದುಳಿದ ವರ್ಗಗಳ ಎಂಜಿನಿಯರಿಂಗ್, ಮೆಡಿಕಲ್ ವಿದ್ಯಾರ್ಥಿಗಳು ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ಒಟ್ಟು 62 ವಸತಿ ಶಾಲೆಗಳನ್ನು ಆರಂಭಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನಿರ್ಧರಿಸಿದ್ದು, ಈಗಾಗಲೇ 10 ಎಂಜಿನಿಯರಿಂಗ್ ನಿಲಯಗಳನ್ನು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ 50:50 ಅನುದಾನದ ಅನುಪಾತದಲ್ಲಿ ಕಟ್ಟಡ ನಿರ್ಮಾಣಕ್ಕೆ ಪ್ರಸ್ತಾವನೆ ಮಾಡಲಾಗಿದೆ” ಎಂದು ಹೇಳಿದರು.
ಈ ಸುದ್ದಿ ಓದಿದ್ದೀರಾ? ತುಮಕೂರು ನಗರದಲ್ಲಿ ನ.17 ರಿಂದ ನಾಟಕೋತ್ಸವ : ಸತೀಶ್ ತಿಪಟೂರು
“ಕೊಪ್ಪಳ ಜಿಲ್ಲೆಯ ತಳಕಲ್ನಲ್ಲಿ 6 ವಸತಿ ನಿಲಯಗಳ ನಿರ್ಮಾಣಕ್ಕೂ ಅನುಮೋದನೆ ನೀಡಿ ಪ್ರಸಕ್ತ ಸಾಲಿನಲ್ಲಿ 15 ಕೋಟಿ ರೂಪಾಯಿಗಳ ಅನುದಾನವನ್ನೂ ನೀಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಈ ನಿರ್ಧಾರದಿಂದ ಈ ಭಾಗದ ಹಿಂದುಳಿದ ಹಾಗೂ ಬಡ ಪ್ರತಿಭಾವಂತ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಸಾಕಷ್ಟು ಪ್ರೋತ್ಸಾಹ ನೀಡಿದಂತಾಗಿದೆ” ಎಂದರು.
ಹಾಸ್ಟೆಲ್ಗಳ ನಿರ್ಮಾಣ ಹಾಗೂ ಅನುದಾನಗಳ ಬಿಡುಗಡೆಗೆ ಪ್ರಸ್ತಾವನೆ ಸಲ್ಲಿಸಿ ಶ್ರಮಿಸಿದ ಕೊಪ್ಪಳ ಜಿಲ್ಲಾ ಉಸ್ತುವಾರಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಶಿವರಾಜ್ ತಂಗಡಗಿಯವರಿಗೂ ಕಾಂಗ್ರೆಸ್ ಯುವ ಮುಖಂಡ ರಮೇಶ ಕಾಳೆ ಅವರು ಕೃತಜ್ಞತೆಯನ್ನು ತಿಳಿಸಿದ್ದಾರೆ.





