ಕೊಪ್ಪಳ ಜಿಲ್ಲೆಗೆ ಬಲ್ಡೋಟಾ ಕಾರ್ಖಾನೆ ವಿಸ್ತರಣೆ ಹಾಗೂ ಹೊಸ ಕಾರ್ಖಾನೆಗಳನ್ನು ಸ್ಥಾಪಿಸುವುದನ್ನು ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಹಾಗೂ ಪರಿಸರ ಹಿತರಕ್ಷಣಾ ವೇದಿಕೆ ಜಂಟಿ ಕ್ರಿಯಾ ಸಮಿತಿ ನಗರಸಭೆ ಸಂಕೀರ್ಣದ ಮುಂದೆ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸುತ್ತಿವೆ.
ಬಲ್ಡೋಟಾ, ಕಿರ್ಲೋಸ್ಕರ್, ಕಲ್ಯಾಣಿ, ಮುಕುಂದ ಸುಮಿ, ಎಕ್ಸ್ ಇಂಡಿಯಾ ಸೇರಿ ಎಲ್ಲಾ ಕಾರ್ಖಾನೆಗಳ ವಿಸ್ತೀರ್ಣ ಮತ್ತು ಆರಂಭವನ್ನು ವಿರೋಧಿಸಿ ಸತ್ಯಾಗ್ರಹಕ್ಕೆ ಚಾಲನೆ ನೀಡಲಾಗಿದೆ.
ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಮಾತನಾಡಿ, “ಉದ್ಯೋಗ ಸೃಷ್ಟಿ ಮಾಡಲು ಕಾರ್ಖಾನೆ ಬೇಕು ಎಂದೇನಿಲ್ಲ, ಅವುಗಳಿಂದ ಎಲ್ಲಾ ಸಮಸ್ಯೆ ಪರಿಹಾರ ಆಗಿದೆ ಎಂಬುದು ಕೇವಲ ಭ್ರಮೆ. ಇಲ್ಲಿ ಹಣ ಹೂಡಿಕೆ ಮಾಡುವುದು ದೊಡ್ಡ ಸಂಗತಿ ಎಂದು ಭಾವಿಸಿರುವುದೇ ಬಹುದೊಡ್ಡ ತಪ್ಪು. ಹಣದ ಲೆಕ್ಕದಲ್ಲಿ ಜನರಿಗೆ ಬದುಕು ಸಿಗಲ್ಲ. ಬಳ್ಳಾರಿಗೆ ಜಿಂದಾಲ್ನಂತಹ ಬೃಹತ್ ಕಾರ್ಖಾನೆ ಸ್ಥಾಪನೆ ಮಾಡುವ ಮೊದಲು ಏನು ಹೇಳಿ ಬಂದಿತ್ತೊ, ಅ ಪ್ರಕಾರ ನಡೆದುಕೊಳ್ಳದೇ ಇರುವ ಕಾರಣ ಅಲ್ಲಿಯ ಜನ ಕಂಗಾಲಾಗಿದ್ದಾರೆ, ಬಹುತೇಕ ಕಂಪನಿಗಳು ಈಗ ಉದ್ಯೋಗ ಕಡಿತ ಆರಂಭಿಸಿವೆ. ಈಗ ಉದ್ಯೋಗ ಕೊಡ್ತಿವಿ ಅಂದವರು ಮುಂದೆ ಕೊಡಲು ಸಾಧ್ಯವಿಲ್ಲ ಎನ್ನುತ್ತಾರೆ. ಅದು ಏನೇ ಇದ್ದರೂ ಉದ್ಯೋಗಕ್ಕಿಂತ ಮೊದಲು ಆರೋಗ್ಯ ಹಾಗೂ ಬದುಕು ಮುಖ್ಯ” ಎಂದರು.
ರೈತ ಚಳವಳಿಯ ಮುಂಚೂಣಿ ನಾಯಕ ಚಾಮರಸ ಮಾಲಿಪಾಟೀಲ್ ಮಾತನಾಡಿ, “ಕಾರ್ಖಾನೆಗಳಿಂದ ಬರುತ್ತಿರುವ ಧೂಳು ಮತ್ತು ಹೊಗೆಯಿಂದ ಪರಿಸರ ನಾಶವಾಗಿದೆ. ರೈತರ ಬೆಳೆ ನಾಶವಾಗಿದೆ. ಅಲ್ಲದೆ, ಇಲ್ಲಿಯ ನದಿಯಿಂದ ನೀರನ್ನು ಹೇರಳವಾಗಿ ಬಳಸಿಕೊಂಡು ರೈತರಿಗೆ ಎರಡನೆ ಬೆಳೆಗೆ ನೀರಿಲ್ಲದಂತೆ ಮಾಡಿದ್ದಾರೆ. ಕುಡಿಯುವ ನೀರು ಮಲಿನವಾಗಿವೆ ಎಂಬ ಸಾಮಾನ್ಯ ಪ್ರಜ್ಞೆ ಇಟ್ಟುಕೊಳ್ಳದಿರುವುದು ವಿಷಾದಕರ ಸಂಗತಿ” ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಇದನ್ನೂ ಓದಿ: ಕೊಪ್ಪಳ | ಬಸಪ್ಪ, ಚಂದ್ರಶೇಖರ, ದೇವೇಂದ್ರಕುಮಾರ್ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ
ಈ ವೇಳೆ ಹಿರಿಯ ಸಾಹಿತಿ ಎಎಂ ಮದರಿ, ಮಹಿಳಾ ಹೋರಾಟಗಾರ್ತಿ ಶಶಿಕಲಾ, ಜಂಟಿ ಕ್ರಿಯಾ ವೇದಿಕೆ ಹೋರಾಟ ಸಂಚಾಲಕ ಕೆ ಬಿ ಗೋನಾಳ, ಡಿ ಹೆಚ್ ಪೂಜಾರ, ಮಂಜುನಾಥ ಜಿ ಗೊಂಡಬಾಳ, ಮಹಾಂತೇಶ ಕೊತಬಾಳ, ನಜೀರಸಾಬ್ ಮೂಲಿಮನಿ, ಶರಣು ಗಡ್ಡಿ, ಎಸ್ ಎ ಗಫಾರ್, ಬಸವರಾಜ ಶೀಲವಂತರ, ಎಸ್ ಬಿ ರಾಜೂರ, ರವಿ ಕಾಂತನವರ, ಚಿಟ್ಟಿಬಾಬು ಸಿಂಧನೂರು, ಭೀಮಸೇನ ಕಲಿಕೇರಿ, ಶರಣು ಪಾಟೀಲ್, ಹನುಮಂತಪ್ಪ ಬಸವರಾಜ ಯರದಿಹಾಳ, ಮೂಕಣ್ಣ ಮೇಸ್ತ್ರಿ ಮಂಗಳೇಶ ರಾಠೋಡ, ಬಸವರಾಜ ನರೆಗಲ್, ರಮೇಶ ಪಾಟೀಲ್ ಬೇರಿಗಿ, ಗವಿಸಿದ್ದಪ್ಪ ಹಲಿಗಿ, ಯಮನೂರಪ್ಪ ಹಾಲಳ್ಳಿ ಬಸಾಪುರ, ಮಹಾದೇವಪ್ಪ ಮಾವಿನಮಡು, ದುರುಗೇಶ ಹಿರೇಮನಿ ವಟಪರ್ವಿ, ಸುಂಕಮ್ಮ ಗಾಂಧಿನಗರ, ಭೀಮಪ್ಪ ಯಲಬುರ್ಗಾ, ಚನ್ನಬಸಪ್ಪ ಅಪ್ಪಣ್ಣವರ ಹಾಗೂ ಇತರರು ಉಪಸ್ಥಿತರಿದ್ದರು.





