- ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಆದ್ಯತೆ ನೀಡಿ
- ಶುದ್ಧ ಕುಡಿಯುವ ನೀರಿನ ಘಟಕಗಳ ದುರಸ್ತಿಗೆ ಸೂಚನೆ
ಬೇಸಿಗೆ ಹಿನ್ನೆಲೆ ಜನ-ಜಾನುವಾರುಗಳಿಗೆ ಕುಡಿಯುವ ನೀರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಕಾರ್ಯಯೋಜನೆ ರೂಪಿಸಿ ಕಾರ್ಯಗತಗೊಳಿಸಬೇಕು ಎಂದು ಕೊಪ್ಪಳ ಜಿಲ್ಲಾಧಿಕಾರಿ ಎಂ ಸುಂದರೇಶಬಾಬು ತಿಳಿಸಿದರು.
ಬೇಸಿಗೆ ಹಿನ್ನೆಲೆ, ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಎಲ್ಲ ತಾಲೂಕುಗಳ ತಹಶೀಲ್ದಾರರು, ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಣಾಧಿಕಾರಿಗಳು ಮತ್ತು ಹಲವು ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು.
“ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಆದ್ಯತೆ ನೀಡಿ. ಜನತೆಗೆ ಸ್ಪಂದನೆ ನೀಡದಿದ್ದಲ್ಲಿ ಜನತೆಗೆ ತಪ್ಪು ಸಂದೇಶ ರವಾನೆಯಾಗಿ ಜಿಲ್ಲಾಡಳಿತಕ್ಕೆ ಕೆಟ್ಟ ಹೆಸರು ಬರುತ್ತದೆ. ಹೀಗಾಗಿ ಜನತೆಗೆ ಕುಡಿಯುವ ನೀರು ಪೂರೈಸುವ ವಿಷಯದಲ್ಲಿ ನಿರ್ಲಕ್ಷ್ಯ ವಹಿಸಿದರೆ ಅಂತಹ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು” ಎಂದು ಎಚ್ಚರಿಕೆ ನೀಡಿದರು.
“ಜಿಲ್ಲೆಯ ಬೇರೆ ಬೇರೆ ಕಡೆಗಳಲ್ಲಿ ಕುಡಿಯುವ ನೀರಿನ ತೊಂದರೆ ಇರುವ ಬಗ್ಗೆ ಬರುವ ಪತ್ರಿಕಾ ವರದಿಗಳನ್ನೂ ಆಧರಿಸಿ ಅದಕ್ಕೆ ತುರ್ತು ಸ್ಪಂದನೆ ನೀಡಬೇಕು. ಕುಡಿಯುವ ನೀರಿನ ಬಗ್ಗೆ ದೂರುಗಳು ಬರದ ಹಾಗೆ ಆಯಾ ತಾಲೂಕಿನ ತಹಶೀಲ್ದಾರರು ಮತ್ತು ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿಗಳು ವಿಶೇಷ ಗಮನ ಹರಿಸಬೇಕು. ನೀರಿನ ಸಮಸ್ಯೆ ಸರಿಪಡಿಸುವ ನಿಟ್ಟಿನಲ್ಲಿ ತಮ್ಮ ಹಂತದಲ್ಲಿ ಗ್ರಾಮವಾರು ಪರಿಶೀಲನೆ ನಡೆಸಬೇಕು” ಎಂದು ಸೂಚನೆ ನೀಡಿದರು.
“ಸಣ್ಣಪುಟ್ಟ ದುರಸ್ತಿ ಇರುವುದನ್ನು ವಾರದೊಳಗೆ ಸರಿಪಡಿಸಿ, ಎಲ್ಲ ಶುದ್ಧ ಕುಡಿಯುವ ನೀರಿನ ಘಟಕಗಳು ಸಮರ್ಪಕ ಕಾರ್ಯನಿರ್ವಹಿಸುವಂತೆ ಗಮನ ಹರಿಸಬೇಕು” ಎಂದು ಗ್ರಾಮೀಣ ಕುಡಿವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳಿಗೆ ಗಡುವು ವಿಧಿಸಿದರು.
“ಬೇಸಿಗೆಯ ಧಗೆ ಹೆಚ್ಚುತ್ತಿದೆ. ಹಾಗಾಗಿ ಯಾವ ಹಳ್ಳಿಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಬರಬಹುದು ಎಂಬುದರ ಬಗ್ಗೆ ಪಟ್ಟಿ ಮಾಡಿ, ಆಯಾ ಕಡೆಗಳಲ್ಲಿನ ನೀರಿನ ಸಮಸ್ಯೆಯನ್ನು ಹೇಗೆ ನಿಭಾಯಿಸಬಹುದು ಎಂಬುದರ ಬಗ್ಗೆ ಯೋಜನೆ ರೂಪಿಸಬೇಕು” ಎಂದು ಸೂಚಿಸಿದರು.
“ಜಿಲ್ಲೆಯ ಪ್ರತಿ ಹಳ್ಳಿಹಳ್ಳಿಗಳಲ್ಲಿ ನೀರಿನ ಮೂಲ ಇರುವುದನ್ನು ಖಚಿತಪಡಿಸಿಕೊಂಡು ಮುಂಜಾಗ್ರತೆ ವಹಿಸಬೇಕು. ಲಭ್ಯತೆ ಇರುವ ಕಡೆಗಳಲ್ಲಿ ವಾಟರ್ ಟ್ಯಾಂಕನ್ನು ಭರ್ತಿ ಮಾಡಲು ಕ್ರಮ ವಹಿಸಬೇಕು” ಎಂದು ನಿರ್ದೇಶನ ನೀಡಿದರು.
“ನಗರ ಪ್ರದೇಶಗಳಲ್ಲಿನ ಬೋರವೆಲ್ಗಳಲ್ಲಿ ಈಗ ಇರುವ ನೀರಿನ ಪ್ರಮಾಣ ಎಷ್ಟು? ಎಷ್ಟು ದಿನಗಳಿಗೆ ನೀರು ಲಭ್ಯವಾಗಬಹುದು? ಎಂಬುದರ ಬಗ್ಗೆ ಈಗಿನಿಂದಲೇ ಪರಿಶೀಲಿಸಿ ಜಾಗೃತೆ ವಹಿಸಬೇಕು” ಎಂದು ಜಿಲ್ಲಾಧಿಕಾರಿ, ಆಯಾ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳಿಗೆ ಸೂಚಿಸಿದರು.
ಈ ಸುದ್ದಿ ಓದಿದ್ದೀರಾ? ಮಂಡ್ಯ | ಅಂಗನವಾಡಿ ಕೇಂದ್ರಕ್ಕೆ ಕಳಪೆ ಆಹಾರ ಪೂರೈಕೆ; ಪೋಷಕರ ಆರೋಪ
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ರಾಹುಲ್ ರತ್ನಂ ಪಾಂಡೆ ಮಾತನಾಡಿ, “ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಎಲ್ಲ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿ ಕ್ರಮ ವಹಿಸಬೇಕು” ಎಂದು ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಜಾನುವಾರುಗಳಿಗೆ ಸಾಕಾಗುವಷ್ಟು ಮೇವು ಲಭ್ಯತೆ ಇದೆ ಎಂದು ಪಶುಪಾಲನಾ ಇಲಾಖೆಯ ಉಪ ನಿರ್ದೇಶಕರು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಸಹಾಯಕ ಆಯುಕ್ತ ಬಸವಣ್ಣೆಪ್ಪ ಕಲಶೆಟ್ಟಿ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಸಮೀರ್ ಮುಲ್ಲಾ, ಕೊಪ್ಪಳ, ಕುಷ್ಟಗಿ, ಯಲಬುರ್ಗಾ, ಗಂಗಾವತಿ, ಕಾರಟಗಿ, ಕುಕನೂರ, ಕನಕಗಿರಿ ತಾಲೂಕುಗಳ ತಹಶೀಲ್ದಾರರು, ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿಗಳು ಮತ್ತು ಹಲವು ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.





