ಸುಪ್ರೀಂ ಕೋರ್ಟ್ ಆದೇಶದಂತೆ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಬೀದಿ ನಾಯಿಗಳ ಹಾವಳಿ ತಪ್ಪಿಸಲು ಸುರಕ್ಷತಾ ಕ್ರಮ ಕೈಗೊಳ್ಳುವ ಕುರಿತು ಕೊಪ್ಪಳ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ತಹಶೀಲ್ದಾರ ವಿಠ್ಠಲ್ ಚೌಗಲಾ ಮತ್ತು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ದುಂಡಪ್ಪ ತುರಾದಿ ರವರ ಅಧ್ಯಕ್ಷತೆಯಲ್ಲಿ ತಾಲೂಕು ನೋಡಲ್ ಅಧಿಕಾರಿಗಳ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಸಭೆ ಜರುಗಿತು.
ಕೊಪ್ಪಳ ತಾಪಂ ಇಒ ದುಂಡಪ್ಪ ತುರಾದಿ ಅವರು ಮಾತನಾಡಿ, “ಪಂಚಾಯತಿ ವ್ಯಾಪ್ತಿಯಲ್ಲಿರುವ ಪ್ರತಿ ಸಂಸ್ಥೆಯಿಂದ ಬೀದಿ ನಾಯಿಗಳ ಸಂಖ್ಯೆಯನ್ನು ಪಡೆಯಬೇಕು. ಒಂದು ವೇಳೆ ಬೀದಿ ನಾಯಿಗಳು ಇದ್ದಲ್ಲಿ ಸ್ಥಳಾಂತರಿಸಲು ಕೂಡಲೇ ಕ್ರಮವಹಿಸಿ ಸಂಬಂಧಿಸಿದವರಿಗೆ ನೋಟಿಸ್ ಮೂಲಕ ಮಾಹಿತಿ ನೀಡಬೇಕು. ಶಾಲೆ, ವಸತಿ ನಿಲಯಗಳು ಸೇರಿದಂತೆ ಸಾರ್ವಜನಿಕ ಸಂಸ್ಥೆಯ ಆವರಣಕ್ಕೆ ಬೀದಿ ನಾಯಿ ಪ್ರವೇಶಿಸದಂತೆ ಕಾಂಪೌಂಡ್ ನಿರ್ಮಾಣ, ತಂತಿ ಬೇಲಿ ನಿರ್ಮಾಣ ಇತ್ಯಾದಿ ಕ್ರಮವಹಿಸಬೇಕು” ಎಂದು ಸೂಚಿಸಿದರು.
“ನಗರ ಸ್ಥಳೀಯ ಸಂಸ್ಥೆಯಿಂದ ಬೀದಿ ನಾಯಿಗಳನ್ನು ಸ್ಥಳಾಂತರಿಸಲು ಸಹಕರಿಸಲು ಹಾಗೂ ಅವುಗಳ ಪ್ರವೇಶ ನಿರ್ಬಂಧಿಸುವದನ್ನು ಮೇಲ್ವಿಚಾರಣೆ ಮಾಡಲು ತಮ್ಮ ಸಂಸ್ಥೆ ವತಿಯಿಂದ ಒಬ್ಬ ಜವಾಬ್ದಾರಿಯುತ ನೌಕರರನ್ನು ನೋಡಲ್ ಅಧಿಕಾರಿಯಾಗಿ ನೇಮಿಸುವಂತೆ ಆದೇಶವನ್ನು ಈಗಾಗಲೇ ಹೊರಡಿಸಲಾಗಿರುತ್ತದೆ. ಒಂದು ವೇಳೆ ಬೀದಿ ನಾಯಿಗಳು ವಾಸ ಮಾಡಲು ಅವಕಾಶ ನೀಡಿದಲ್ಲಿ ಅವುಗಳನ್ನು ಸ್ಥಳಾಂತರಿಸುವ ವೆಚ್ಚವನ್ನು ಸಂಸ್ಥೆಗಳಿಂದಲೇ ಭರಿಸುವಂತೆ ಸಂಬಂಧಿಸಿದ ಸಂಸ್ಥೆಗಳಿಗೆ ನೋಟಿಸ್ ಜಾರಿ ಮಾಡುವ ಮೂಲಕ ನಗರ ಸ್ಥಳೀಯ ಸಂಸ್ಥೆಯವರು ಕ್ರಮವಹಿಸಬೇಕು” ಎಂದು ಆದೇಶಿಸಿದರು.
ತಹಶೀಲ್ದಾರ ವಿಠ್ಠಲ್ ಚೌಗಲಾ ಮಾತನಾಡಿ, “ಸುಪ್ರೀಂ ಕೋರ್ಟ್ ಆದೇಶ ಹಿನ್ನೆಲೆ ಬೀದಿ ನಾಯಿಗಳ ಹಾವಳಿ ತಪ್ಪಿಸುವ ಕುರಿತು ಗ್ರಾಮೀಣ ಮತ್ತು ನಗರ ಸ್ಥಳೀಯ ಸಂಸ್ಥೆಯ ಅಧಿಕಾರಿಗಳು ಹೆಚ್ಚಿನ ಗಮನಹರಿಸಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು. ಒಂದು ವೇಳೆ ಉಲ್ಲಂಘನೆಯಾದರೆ ಕಾನೂನು ಕ್ರಮ ಜರುಗಿಸುವುದು ನಿಶ್ಚಿತ” ಎಂದು ಎಚ್ಚರಿಸಿದರು.
ಇದನ್ನೂ ಓದಿ: ಕೊಪ್ಪಳ | ಹಣವಾಳ ಪಿಡಿಒ ಅಮಾನತು
“ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವೆ ಇಲಾಖಾಧಿಕಾರಿ ವಿನೋದ್ ಮಾತನಾಡಿ, “ಗ್ರಾಮ ಪಂಚಾಯತಿ ಹಂತದಲ್ಲಿ ಬೀದಿ ನಾಯಿಗಳ ಕುರಿತು ಜಾಗೃತಿ ಮೂಡಿಸಬೇಕು” ಎಂದು ತಿಳಿಸಿದರು.
ಸಭೆಯಲ್ಲಿ ನಗರಸಭೆ ಪೌರಾಯುಕ್ತ ವೆಂಕಟೇಶ ನಾಗನೂರು, ಕ್ಷೇತ್ರ ಶಿಕ್ಷಣಾಧಿಕಾರಿ ಹನಮಂತಪ್ಪ ಎಚ್, ಪಂಚಾಯತ್ ರಾಜ್ ಸಹಾಯಕ ನಿರ್ದೇಶಕ ಮಹೇಶ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ ಗುಡಿ, ತಾಲೂಕ ಮಟ್ಟದ ಅಧಿಕಾರಿಗಳು, ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವೆ ಇಲಾಖಾಧಿಕಾರಿಗಳು, ಆರೋಗ್ಯ ಇಲಾಖೆ ಅಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ಇತರರು ಹಾಜರಿದ್ದರು.





