ಕೊಪ್ಪಳ ಜಿಲ್ಲೆಯ ಅರಣ್ಯ ಪ್ರದೇಶ ಹಾಗೂ ಜಮೀನುಗಳಲ್ಲಿ ಗಾಂಜಾ ಬೆಳೆಯುವುದು ಕಂಡು ಬಂದರೆ ಅಂತಹವರ ಮೇಲೆ ಕಾನೂನು ಕ್ರಮ ಜರುಗಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಎಚ್ಚರಿಕೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಾರ್ಕೋ ಕೋ-ಆರ್ಡಿನೇಷನ್ ಸೆಂಟರ್ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, “ಜಿಲ್ಲೆಯಲ್ಲಿ ಮಾದಕ ವಸ್ತುಗಳ ಸಾಗಾಟ ಹಾಗೂ ಮಾರಾಟ ನಿಯಂತ್ರಿಸಲು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಸಮನ್ವತೆಯಿಂದ ಕಾರ್ಯನಿರ್ವಹಿಸಬೇಕು. ಮಾಧಕ ವಸ್ತುಗಳ ಬಳಕೆ ಮಾಡದಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಜಿಲ್ಲೆಯ ವಿವಿಧ ಶಾಲಾ-ಕಾಲೇಜುಗಳಲ್ಲಿ ಡ್ರಗ್ಸ್ ನಿಷೇಧ ಕುರಿತು ಜಾಗೃತಿ ಮೂಡಿಸಲು ಸಮಿತಿಗಳನ್ನು ರಚಿಸಿ ವರದಿ ನೀಡಬೇಕು” ಎಂದು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
“ಈಗ ವಿದೇಶಿಗರು ಹೆಚ್ಚಿನ ಸಂಖ್ಯೆಯಲ್ಲಿ ಬರುವ ಸೀಜನ್ ಆಗಿರುವುದರಿಂದ ಆನೆಗೊಂದಿ ಭಾಗದಲ್ಲಿರುವ ಎಲ್ಲಾ ಹೋಂಸ್ಟೆ, ರೆಸಾರ್ಟ್, ಡಾಭಾಗಳು, ಹೋಟೆಲ್, ಪಾನಬೀಡಾ ಅಂಗಡಿಗಳಲ್ಲಿ ಮಾಧಕ ವಸ್ತುಗಳ ಮಾರಾಟದ ಬಗ್ಗೆ ಪರಿಶೀಲನೆ ನಡೆಸುವುದರ ಜೊತೆಗೆ ಜಿಲ್ಲೆಯ ಯಾವುದೇ ಭಾಗದಲ್ಲಿ ಮಾದಕ ವಸ್ತುಗಳ ಮಾರಾಟ ನಡೆಯದಂತೆ ನೋಡಿಕೊಳ್ಳಬೇಕು. ಅಬಕಾರಿ ಮತ್ತು ಪೊಲೀಸ್ ಇಲಾಖೆಯ ಅಧಿಕಾರಿಗಳು ಅನಿರೀಕ್ಷಿತ ದಾಳಿ ನಡೆಸಿ ಪರಿಶೀಲನೆ ಮಾಡಬೇಕು. ಈ ಕೆಲಸ ವಿಶೇಷವಾಗಿ ವೀಕೆಂಡನಲ್ಲಿ ಮಾಡಬೇಕು” ಎಂದು ಹೇಳಿದರು.
ಇದನ್ನೂ ಓದಿ: ಕೊಪ್ಪಳ | ಅಪ್ರಾಪ್ತ ಸಹೋದರಿ ಮೇಲೆ ಅಣ್ಣನಿಂದ ಅತ್ಯಾಚಾರ; ಬಂಧನ
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ದಿ ಮಾತನಾಡಿ, “ಜಿಲ್ಲೆಯ ಯಾವುದೇ ಭಾಗದಲ್ಲಿ ಮಾಧಕ ವಸ್ತುಗಳ ಮಾರಾಟ ಕಂಡು ಬಂದಲ್ಲಿ ಅಂತವರ ವಿರುದ್ದ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು. ಈಗಾಗಲೇ ನಮ್ಮ ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ವಿಶೇಷವಾಗಿ ಶನಿವಾರ ಮತ್ತು ಭಾನುವಾರ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡುವಂತೆ ನಿರ್ದೆಶನ ನೀಡಿದ್ದೆನೆ. ಕೂಕನಪಳ್ಳಿ ಸಂತೆಯ ದಿನ ಜನರು ರಸ್ತೆಯ ಮೇಲೆ ಕುಳಿತು ‘ಮದ್ಯ ಮಾರಾಟ ಮಾಡುತ್ತಾರೆ’ ಎನ್ನುವ ದೂರುಗಳಿಗೆ ತಕ್ಷಣ ಅದನ್ನು ನಿಲ್ಲಿಸಬೇಕು” ಎಂದು ಅಬಕಾರಿ ಅಧಿಕಾರಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ನಿರ್ಮಲಾ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೆಶಕ ಮಂಜುನಾಥ ಗುಂಡೂರ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ಹೇಮಂತ್, ಸಹಾಯಕ ಔಷಧ ನಿಯಂತ್ರಣಾಧಿಕಾರಿಗಳು, ಅಬಕಾರಿ ಹಾಗೂ ಇತರೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.





