ಕೊರಗ ಸಮುದಾಯದ ವಿದ್ಯಾವಂತ ಯುವಜನತೆಗೆ ಸರಕಾರಿ ಉದ್ಯೋಗದಲ್ಲಿ ನೇರ ನೇಮಕಾತಿ ವ್ಯವಸ್ಥೆ ಕಲ್ಪಿಸಬೇಕು ಎಂಬ ನ್ಯಾಯಸಮ್ಮತ ಬೇಡಿಕೆಯನ್ನು ಮುಂದಿಟ್ಟು, ಕೊರಗಾಭಿವೃದ್ಧಿ ಸಂಘಗಳ ಒಕ್ಕೂಟ (ಕರ್ನಾಟಕ–ಕೇರಳ) ಇದರ ನೇತೃತ್ವದಲ್ಲಿ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಆರಂಭಿಸಿರುವ ಅನಿರ್ಧಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹಕ್ಕೆ ಇಪ್ಪತ್ತನೇ ದಿನಗಳು ಪೂರೈಸಿದ್ದರೂ, ಇಲ್ಲಿಯವರೆಗೆ ಯಾವುದೇ ಸ್ಪಷ್ಟ ಪರಿಹಾರ ದೊರಕದ ಹಿನ್ನೆಲೆಯಲ್ಲಿ ಹೋರಾಟ ಇನ್ನಷ್ಟು ತೀವ್ರಗೊಂಡಿದೆ.

ಕರಾವಳಿ ಪ್ರದೇಶದ ಮೂಲ ನಿವಾಸಿಗಳಾಗಿರುವ ಹಾಗೂ ಭಾರತ ಸರ್ಕಾರದಿಂದ ಪ್ರಾಚೀನ ಬುಡಕಟ್ಟು ಅತೀ ದುರ್ಬಲ ಸಮುದಾಯ (PVTG) ಎಂದು ಗುರುತಿಸಲ್ಪಟ್ಟ ಕೊರಗ ಸಮುದಾಯವು, ತನ್ನ ವಿದ್ಯಾವಂತ ಯುವಜನರಿಗೆ ಉದ್ಯೋಗ ಭದ್ರತೆ ಕಲ್ಪಿಸುವಂತೆ ಸರ್ಕಾರವನ್ನು ಒತ್ತಾಯಿಸಿ ತೀವ್ರ ಹೋರಾಟಕ್ಕೆ ಇಳಿದಿದೆ. ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕೊರಗ ಸಮುದಾಯದ ಜನಸಂಖ್ಯೆ ಕೇವಲ 14 ಸಾವಿರಕ್ಕೆ ಇಳಿದಿದ್ದು, ಸಮುದಾಯವೇ ವಿನಾಶದ ಅಂಚಿನಲ್ಲಿದೆ ಎಂಬ ಆತಂಕ ವ್ಯಕ್ತವಾಗಿದೆ.
ಕಳೆದ ಎರಡು ದಶಕಗಳಲ್ಲಿ ಸಮುದಾಯ ಸಂಘಟನೆಗಳ ನಿರಂತರ ಪ್ರಯತ್ನ ಹಾಗೂ ಆಡಳಿತದ ಸಹಕಾರದಿಂದ ಶಿಕ್ಷಣ ಕ್ಷೇತ್ರದಲ್ಲಿ ಕೊರಗ ಸಮುದಾಯವು ಮೊದಲ ತಲೆಮಾರಿನ ಮಹತ್ವದ ಮುನ್ನಡೆ ಸಾಧಿಸಿದೆ. ಇದೀಗ ಸುಮಾರು ಒಂದು ಸಾವಿರಕ್ಕೂ ಹೆಚ್ಚು ಪದವಿ ಹಾಗೂ ಸ್ನಾತಕೋತ್ತರ ಪದವಿ ಪಡೆದ ಯುವಜನರು ಉದ್ಯೋಗವಿಲ್ಲದೆ ನಿರುದ್ಯೋಗಿಗಳಾಗಿ ಸಂಕಷ್ಟದ ಸ್ಥಿತಿಯಲ್ಲಿ ಬದುಕುತ್ತಿದ್ದಾರೆ.

ಎರಡು ವರ್ಷಗಳ ಹಿಂದೆ ಬೆಂಗಳೂರಿನಲ್ಲಿ ರಾಷ್ಟ್ರಪತಿಗಳನ್ನು ಭೇಟಿಯಾದ ಸಂದರ್ಭದಲ್ಲಿ, ಕೊರಗ ಸಮುದಾಯದ ಶಿಕ್ಷಣ ಸಾಧನೆಯನ್ನು ಮೆಚ್ಚಿಕೊಂಡ ರಾಷ್ಟ್ರಪತಿಗಳು ಉದ್ಯೋಗ ಭದ್ರತೆಗಾಗಿ ಸರ್ಕಾರ ವಿಶೇಷ ಕ್ರಮ ಕೈಗೊಳ್ಳಬೇಕೆಂದು ಸೂಚನೆ ನೀಡಿದ್ದರು. ಆ ಸಂದರ್ಭದಲ್ಲಿ ಹಾಜರಿದ್ದ ಸಮಾಜ ಕಲ್ಯಾಣ ಸಚಿವರು ಹಾಗೂ ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು, ಕರ್ನಾಟಕದ PVTG ಸಮುದಾಯಗಳಾದ ಕೊರಗರು ಮತ್ತು ಜೇನುಕುರುಬರ ವಿದ್ಯಾವಂತ ನಿರುದ್ಯೋಗಿಗಳಿಗೆ ಉದ್ಯೋಗ ಭದ್ರತೆ ಒದಗಿಸಲು ಕಾಲಬದ್ದ ಕ್ರಿಯಾ ಯೋಜನೆ ರೂಪಿಸುವ ಭರವಸೆ ನೀಡಿದ್ದರು ಎಂದು ಸಂಘಟಕರು ತಿಳಿಸಿದ್ದಾರೆ.
ಅದರಂತೆ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ವಿದ್ಯಾವಂತ ನಿರುದ್ಯೋಗಿಗಳ ಸರ್ವೇ ಕಾರ್ಯವೂ ನಡೆದರೂ, ನಂತರ ಯಾವುದೇ ಸ್ಪಷ್ಟ ಪ್ರಗತಿ ಕಂಡುಬಂದಿಲ್ಲ. ಇದರಿಂದ ಅಸಮಾಧಾನಗೊಂಡ ಕೊರಗ ಸಮುದಾಯವು, 2024ರ ಜುಲೈ 22ರಿಂದ ಆಗಸ್ಟ್ 5ರವರೆಗೆ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಆಹೋರಾತ್ರಿ ಸತ್ಯಾಗ್ರಹ ನಡೆಸಿತ್ತು. ಕರ್ನಾಟಕ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅವರು ಸ್ಥಳಕ್ಕೆ ಆಗಮಿಸಿ ಮನವಿ ಸ್ವೀಕರಿಸಿ ಕ್ರಮಕೈಗೊಳ್ಳುವ ಭರವಸೆ ನೀಡಿದ ಬಳಿಕ ಸತ್ಯಾಗ್ರಹವನ್ನು ಹಿಂಪಡೆಯಲಾಗಿತ್ತು.
ಕಳೆದ ಮಾರ್ಚ್ 25ರಂದು ಸಮುದಾಯದ ಮುಖಂಡರು ಮಾನ್ಯ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ವಿಷಯ ಪ್ರಸ್ತಾಪಿಸಿದಾಗ, ತುರ್ತು ಗಮನ ನೀಡಲಾಗುವುದು ಎಂಬ ಭರವಸೆ ದೊರೆತಿತ್ತು. ಅಲ್ಲದೆ 2024–25ನೇ ಸಾಲಿನ ಬಜೆಟ್ ಮಂಡನೆಯ ವೇಳೆ, ಅರಣ್ಯ ಹಾಗೂ ಬುಡಕಟ್ಟು ಸಮುದಾಯಗಳ ಅರ್ಹ ವಿದ್ಯಾವಂತ ನಿರುದ್ಯೋಗಿಗಳನ್ನು ಕರ್ನಾಟಕ ಸಿವಿಲ್ ಸೇವೆಗಳಲ್ಲಿ ನೇರ ನೇಮಕಾತಿ ಮಾಡುವುದಾಗಿ ಮುಖ್ಯಮಂತ್ರಿ ಘೋಷಿಸಿದ್ದರು. ಆದರೆ ಇದುವರೆಗೂ ಆ ಘೋಷಣೆ ಅನುಷ್ಠಾನಗೊಂಡಿಲ್ಲ ಎಂಬುದು ಸಮುದಾಯದ ಅಸಮಾಧಾನಕ್ಕೆ ಕಾರಣವಾಗಿದೆ.

ಈ ಹಿನ್ನಲೆಯಲ್ಲಿ, ಕೊರಗ ಮತ್ತು ಜೇನುಕುರುಬ (PVTG) ಸಮುದಾಯದ ಅರ್ಹ ಯುವಜನರನ್ನು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್, ಕಂದಾಯ, ಅರಣ್ಯ, ಸಮಾಜ ಕಲ್ಯಾಣ, ಐಟಿಡಿಪಿ, ಶಿಕ್ಷಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇರಿದಂತೆ ವಿವಿಧ ಇಲಾಖೆಗಳಲ್ಲಿನ ಸೇವೆಗಳಿಗೆ ವಿಶೇಷ ನೇರ ನೇಮಕಾತಿ ಮೂಲಕ ಉದ್ಯೋಗ ಭದ್ರತೆ ಒದಗಿಸಬೇಕು ಎಂದು ಸಮುದಾಯವು ಒಕ್ಕೊರಲಿನಿಂದ ಆಗ್ರಹಿಸಿದೆ.

ಈ ದಿನ.ಕಾಮ್ ಜೊತೆ ಮಾತನಾಡಿದ ಕರ್ನಾಟಕ–ಕೇರಳ ಕೊರಗಾಭಿವೃದ್ಧಿ ಸಂಘಗಳ ಒಕ್ಕೂಟದ ಅಧ್ಯಕ್ಷೆ ಸುಶೀಲಾ ನಾಡ, ನಮ್ಮ ಅಹವಾಲುಗಳನ್ನು ಜಿಲ್ಲಾಧಿಕಾರಿಯವರಿಗೆ ನೇರವಾಗಿ ತಿಳಿಸಿದ್ದೇವೆ. ನೇರ ನೇಮಕಾತಿಯ ಮೂಲಕ ಉದ್ಯೋಗ ಭದ್ರತೆ ಕಲ್ಪಿಸದೆ ಹೋದರೆ ಸಮುದಾಯದ ಅಭಿವೃದ್ಧಿ ಸಾಧ್ಯವಿಲ್ಲ. ಆದೇಶ ಬರುವವರೆಗೂ ಹೋರಾಟ ಮುಂದುವರೆಯಲಿದೆ ಈಗಾಗಲೇ ಪ್ರತಿಭಟನಾ ಸ್ಥಳಕ್ಕೆ ಮಾಜಿ ಶಾಸಕರು, ಹಾಲಿ ಶಾಸಕರು, ಸಂಸದರು. ಕಾಂಗ್ರೆಸ್ ಪಕ್ಷದ ಮುಂಖಡರು ಬೆಂಬಲ ವ್ಯಕ್ತಪಡಿಸಿದ್ದಾರೆ ಆದರೆ ಸರ್ಕಾರ ಮಾತ್ರ ಜಾಣ ಮೌನವಹಿಸಿದೆ ಎಂದು ಹೇಳಿದರು.
ಒಟ್ಟಾರೆ, 20 ದಿನಗಳಿಂದ ನಡೆಯುತ್ತಿರುವ ಈ ಶಾಂತಿಪೂರ್ಣ ಧರಣಿ ಸತ್ಯಾಗ್ರಹವು ಸರ್ಕಾರದ ಗಮನವನ್ನು ಭಾಗಶಃ ಸೆಳೆದಿದ್ದು, ಮುಂದಿನ ದಿನಗಳಲ್ಲಿ ಸರ್ಕಾರ ಕೈಗೊಳ್ಳುವ ನಿರ್ಧಾರಗಳತ್ತ ಕೊರಗ ಸಮುದಾಯದ ಯುವಜನರು ನಿರೀಕ್ಷೆಯಿಂದ ಕಾಯುತ್ತಿದ್ದಾರೆ.

ಶಾರೂಕ್ ತೀರ್ಥಹಳ್ಳಿ
ಮೂಲತಃ ತೀರ್ಥಹಳ್ಳಿಯವರಾದ ಇವರು ಪ್ರಸ್ತುತ ಈದಿನ. ಕಾಮ್ ಉಡುಪಿ ಜಿಲ್ಲಾ ವರದಿಗಾರರಾಗಿ ಮತ್ತು ಕರಾವಳಿ ಮಲೆನಾಡು ಭಾಗದ ವಲಯ ಸಂಯೋಜಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 2017 ರಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡ ಇವರು ದಿನ ಪತ್ರಿಕೆ, ವಾರ ಪತ್ರಿಕೆ, ನ್ಯೂಸ್ ವೆಬ್ ಪೋರ್ಟಲ್ ನಲ್ಲಿ ಕಾರ್ಯನಿರ್ವಹಸಿದ್ದಾರೆ.




