ಕೊರಗ ಸಮುದಾಯದ ವಿದ್ಯಾವಂತ ಯುವಜನತೆಗೆ ಸರ್ಕಾರಿ ಉದ್ಯೋಗಗಳಲ್ಲಿ ನೇರ ನೇಮಕಾತಿ ವ್ಯವಸ್ಥೆ ಕಲ್ಪಿಸಬೇಕೆಂಬ ನ್ಯಾಯಸಮ್ಮತ ಹಾಗೂ ದೀರ್ಘಕಾಲದ ಬೇಡಿಕೆಯನ್ನು ಮುಂದಿಟ್ಟು, ಕೊರಗಾಭಿವೃದ್ಧಿ ಸಂಘಗಳ ಒಕ್ಕೂಟ (ಕರ್ನಾಟಕ–ಕೇರಳ) ನೇತೃತ್ವದಲ್ಲಿ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ನಡೆಯುತ್ತಿರುವ ಅನಿರ್ದಿಷ್ಟಾವಧಿಯ ಅಹೋರಾತ್ರಿ ಧರಣಿ ಸತ್ಯಾಗ್ರಹ 24ನೇ ದಿನಕ್ಕೆ ಕಲಿಟ್ಟಿದ್ದು ವಿವಿಧ ಸಂಘಟನೆಗಳಿಂದ ಬೆಂಬಲ ವ್ಯಕ್ತವಾಗುತ್ತಿದೆ.
ಈ ಹೋರಾಟದ ಭಾಗವಾಗಿ, ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಶನ್ ಆಫ್ ಇಂಡಿಯಾ (ಎಸ್ಐಓ) ವಿದ್ಯಾರ್ಥಿ ಸಂಘಟನೆಯ ಉಡುಪಿ ಜಿಲ್ಲಾ ತಂಡ ಧರಣಿ ಸ್ಥಳಕ್ಕೆ ಭೇಟಿ ನೀಡಿ, ಹೋರಾಟಗಾರರ ಸಮಸ್ಯೆಗಳು, ಅನುಭವಿಸುತ್ತಿರುವ ಸಾಮಾಜಿಕ-ಆರ್ಥಿಕ ಅನ್ಯಾಯಗಳು ಹಾಗೂ ಸರ್ಕಾರದ ಮುಂದೆ ಇಟ್ಟಿರುವ ಬೇಡಿಕೆಗಳನ್ನು ಗಮನದಿಂದ ಆಲಿಸಿತು. ಕೊರಗ ಸಮುದಾಯವು ಶಿಕ್ಷಣ ಪಡೆದರೂ ಸಹ ಸರ್ಕಾರಿ ಉದ್ಯೋಗಗಳಲ್ಲಿ ಅವಕಾಶಗಳಿಂದ ವಂಚಿತರಾಗುತ್ತಿರುವುದು ಗಂಭೀರ ವಿಚಾರವಾಗಿದ್ದು, ಇದಕ್ಕೆ ತಕ್ಷಣದ ಪರಿಹಾರ ಅಗತ್ಯವಿದೆ ಎಂದು ಎಸ್ಐಓ ಅಭಿಪ್ರಾಯ ವ್ಯಕ್ತಪಡಿಸಿದೆ.
ಈದಿನ.ಕಾಮ್ ಜೊತೆ ಮಾತನಾಡಿದ ಎಸ್ಐಓ ಉಡುಪಿ ಜಿಲ್ಲಾಧ್ಯಕ್ಷ ಅಯಾನ್ ಮಲ್ಪೆ, ಕೊರಗ ಸಮುದಾಯದ ಬೇಡಿಕೆಗಳು ಸಂಪೂರ್ಣವಾಗಿ ನ್ಯಾಯಸಮ್ಮತವಾಗಿದ್ದು, ಸರ್ಕಾರವು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಶೀಘ್ರದಲ್ಲೇ ಸ್ಪಷ್ಟ ನಿರ್ಧಾರ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ವಿದ್ಯಾರ್ಥಿ ಹಾಗೂ ಯುವ ಸಂಘಟನೆಗಳು ಇಂತಹ ಹೋರಾಟಗಳಿಗೆ ಸದಾ ಬೆಂಬಲವಾಗಿ ನಿಲ್ಲಬೇಕಾಗಿದೆ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿಗಳಾದ ಸಮೀರ್ ತೀರ್ಥಹಳ್ಳಿ, ಎಸ್ಐಓ ಕಾರ್ಯಕರ್ತರಾದ ಅಫ್ಷಾನ್ ನವಾಜ್, ಮುಝಯಿನ್, ಅಬ್ದುಲ್ ರೆಹಮಾನ್ ಉಪಸ್ಥಿತರಿದ್ದರು.





