ಮಂಡ್ಯ ಜಿಲ್ಲೆ ಕೃಷ್ಣರಾಜಪೇಟೆ ತಾಲ್ಲೂಕಿನ ಅಕ್ಕಿಹೆಬ್ಬಾಳು ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದ ಜಾಗವನ್ನು ಖಾಸಗಿ ವ್ಯಕ್ತಿಗಳು ಅತಿಕ್ರಮಣ ಮಾಡುತ್ತಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ (SDMC) ಹಾಗೂ ಗ್ರಾಮದ ಪ್ರಮುಖರು ಈ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಶಾಲಾ ಆಸ್ತಿಯನ್ನು ಉಳಿಸಿಕೊಡುವಂತೆ ಕೋರಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರಿಗೆ ಲಿಖಿತ ದೂರನ್ನು ಸಲ್ಲಿಸಿದ್ದಾರೆ.
ಗ್ರಾಮದ ನಿವಾಸಿಗಳಾದ ಬಲರಾಮನಾಯಕ ಮತ್ತು ಅವರ ಪುತ್ರ ಜ್ಞಾನಪ್ರಕಾಶ್ ಎಂಬುವವರು ಶಾಲಾ ಆವರಣಕ್ಕೆ ಸೇರಿದ ಜಾಗದಲ್ಲಿ ಯಾವುದೇ ಅನುಮತಿ ಇಲ್ಲದೆ ಅನಧಿಕೃತವಾಗಿ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಆರಂಭಿಸಿದ್ದಾರೆ ಎಂದು ಆರೋಪಿಸಿ ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಅತಿಕ್ರಮಣದಿಂದಾಗಿ ಶಾಲೆಯ ಶೈಕ್ಷಣಿಕ ಪರಿಸರಕ್ಕೆ ಧಕ್ಕೆಯಾಗುತ್ತಿದ್ದು, ಮಕ್ಕಳ ಆಟದ ಮೈದಾನ ಹಾಗೂ ಶಾಲೆಯ ಭವಿಷ್ಯದ ಅಭಿವೃದ್ಧಿಗೆ ಅಡ್ಡಿಯಾಗುತ್ತಿದೆ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.
ಸಾರ್ವಜನಿಕ ಆಸ್ತಿಯನ್ನು ವೈಯಕ್ತಿಕ ಲಾಭಕ್ಕಾಗಿ ಬಳಸಿಕೊಳ್ಳುತ್ತಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಮತ್ತು ತಕ್ಷಣವೇ ನಡೆಯುತ್ತಿರುವ ಕಾಮಗಾರಿಯನ್ನು ಸ್ಥಗಿತಗೊಳಿಸಿ ಶಾಲಾ ಆಸ್ತಿಗೆ ಸೂಕ್ತ ರಕ್ಷಣೆ ಒದಗಿಸಬೇಕು ಎಂದು ಎಸ್ಡಿಎಂಸಿ ಅಧ್ಯಕ್ಷರು ಹಾಗೂ ಸದಸ್ಯರ ಒತ್ತಾಯವಾಗಿದೆ. ಫೆಬ್ರವರಿ 20, 2026ರಂದು ಸಲ್ಲಿಸಲಾದ ದೂರು ಪತ್ರಕ್ಕೆ ಶಾಲಾ ಉಸ್ತುವಾರಿ ಸಮಿತಿಯ ಪದಾಧಿಕಾರಿಗಳು, ಮುಖ್ಯ ಶಿಕ್ಷಕರು ಹಾಗೂ ಸದರಿ ಗ್ರಾಮಸ್ಥರು ಸಹಿ ಹಾಕಿ ಬೆಂಬಲ ಸೂಚಿಸಿದ್ದಾರೆ.
ಸ್ಥಳೀಯ ಮಟ್ಟದಲ್ಲಿ ಈ ಒತ್ತುವರಿ ತಡೆಯಲು ವಿಫಲವಾಗಿರುವ ಹಿನ್ನೆಲೆಯಲ್ಲಿ ಈಗ ಸರ್ಕಾರದ ಹಂತದಲ್ಲಿ ಸಚಿವರ ಮಧ್ಯಪ್ರವೇಶವನ್ನು ಗ್ರಾಮಸ್ಥರು ಕೋರಿದ್ದಾರೆ. ಒಂದು ವೇಳೆ ಈ ಅಕ್ರಮ ನಿರ್ಮಾಣಕ್ಕೆ ಬ್ರೇಕ್ ಹಾಕದಿದ್ದರೆ ಮುಂದಿನ ದಿನಗಳಲ್ಲಿ ಗ್ರಾಮದ ಸಮಸ್ತ ನಾಗರಿಕರೊಂದಿಗೆ ಸೇರಿ ಉಗ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಲಾಗಿದ್ದು, ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳು ಈ ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕೆಂದು ಮನವಿ ಮಾಡಲಾಗಿದೆ.
ಈ ಸುದ್ದಿ ಓದಿದ್ದೀರಾ? ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿ: ಶೋಕದಲ್ಲಿ ಮುಳುಗಿದ ಅಲಿಪುರ, ಅಮೆರಿಕಕ್ಕೆ ಧಿಕ್ಕಾರ ಘೋಷಣೆ
ಸ್ಥಳಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ವೈ. ಕೆ. ತಿಮ್ಮೆಗೌಡ, ತಹಶೀಲ್ದಾರ್ ಡಾ. ಎಸ್. ಯು. ಅಶೋಕ್ ಭೇಟಿ ನೀಡಿ ಕಾಮಗಾರಿಯನ್ನು ವೀಕ್ಷಿಸಿ ಸೂಕ್ತಕ್ರಮ ಕೈಗೊಳ್ಳುವ ಭರವಸೆ ನೀಡಿರುವುದಾಗಿ ತಿಳಿದುಬಂದಿದೆ.





