ಕೃಷಿಯನ್ನು ಲಾಭದಾಯಕ ವೃತ್ತಿಯನ್ನಾಗಿ ಪರಿವರ್ತಿಸಲು ಹಾಗೂ ರೈತರು ಎದುರಿಸುತ್ತಿರುವ ಸವಾಲುಗಳಿಗೆ ಪರಿಣಾಮಕಾರಿ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಪ್ರತಿ ಮೂರು ಅಥವಾ ಆರು ತಿಂಗಳಿಗೊಮ್ಮೆ ಜಿಲ್ಲೆಯ ರೈತರು ಮತ್ತು ರೈತ ಸಂಘಟನೆಗಳ ಸಭೆಗಳನ್ನು ಆಯೋಜಿಸುವ ಪದ್ಧತಿಯನ್ನು ಪುನರಾರಂಭಿಸಬೇಕೆಂದು ಉಡುಪಿ–ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಅವರು ಇಂದು ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕರ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ಆಡಳಿತದಡಿ ಕಾರ್ಯನಿರ್ವಹಿಸುತ್ತಿರುವ ಬ್ರಹ್ಮಾವರದ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದ ಆವರಣದಲ್ಲಿ ನಡೆದ ಎರಡು ದಿನಗಳ ಕೃಷಿ ಮೇಳ ಹಾಗೂ ವಸ್ತುಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದರು.

ಕೃಷಿ ಮೇಳಗಳು ಇಂದಿನ ಕಾಲದಲ್ಲಿ ಕೃಷಿಯ ಅರ್ಥಪೂರ್ಣತೆಯನ್ನು ಜನರಿಗೆ ಪರಿಚಯಿಸುವ ವೇದಿಕೆಗಳಾಗಿವೆ. ಕರಾವಳಿಯಷ್ಟೇ ಅಲ್ಲದೆ ರಾಜ್ಯದ ವಿವಿಧ ಜಿಲ್ಲೆಗಳಿಂದ ರೈತರು ಭಾಗವಹಿಸುತ್ತಿರುವುದು ಸಂತೋಷದ ವಿಚಾರ. ಇಂತಹ ಮೇಳಗಳು ರೈತರ ಉತ್ಸಾಹವನ್ನು ಹೆಚ್ಚಿಸುವುದರೊಂದಿಗೆ ಜಿಲ್ಲೆಯ ಆರ್ಥಿಕತೆಗೆ ಚೈತನ್ಯ ತುಂಬುತ್ತವೆ. ಕೇಂದ್ರ ಸರ್ಕಾರ ಕೃಷಿ ಕ್ಷೇತ್ರದ ಉತ್ತೇಜನಕ್ಕಾಗಿ 2,100ಕ್ಕೂ ಹೆಚ್ಚು ಯೋಜನೆಗಳನ್ನು ಜಾರಿಗೆ ತಂದು 42,000 ಕೋಟಿ ರೂ.ಗಳಷ್ಟು ಅನುದಾನ ಬಿಡುಗಡೆ ಮಾಡಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಮನ್ವಯದಿಂದ ಕೆಲಸ ಮಾಡಿದರೆ ಕೃಷಿ ಕ್ಷೇತ್ರದ ಅಭಿವೃದ್ಧಿ ವೇಗವಾಗಿ ನಡೆಯಲಿದೆ. ಭತ್ತದ ಬೆಂಬಲ ಬೆಲೆ ಹೆಚ್ಚಿಸಲಾಗಿದೆ. ಕಾಳುಮೆಣಸಿನ ಬೆಳೆ ಸಮಸ್ಯೆ ಪರಿಹಾರಕ್ಕಾಗಿ ಜಂಟಿ ಕಾರ್ಯಯೋಜನೆ ರೂಪಿಸುವ ಅಗತ್ಯವಿದೆ. ಕೃಷಿ ಡಿಪ್ಲೊಮಾ ಕಾಲೇಜನ್ನು ಪದವಿ ಕಾಲೇಜಾಗಿ ಮೇಲ್ದರ್ಜೆಗೇರಿಸುವ ಜನಾಭಿಪ್ರಾಯವನ್ನು ಸರ್ಕಾರದ ಮಟ್ಟದಲ್ಲಿ ಪೂರ್ಣಗೊಳಿಸಲು ತಾವು ಬದ್ಧರಾಗಿರುವುದಾಗಿ ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಯಶ್ಪಾಲ್ ಸುವರ್ಣ ಮಾತನಾಡಿ, ಬ್ರಹ್ಮಾವರದಲ್ಲಿ ಕೃಷಿ ಕಾಲೇಜಿನೊಂದಿಗೆ ಕೃಷಿಗೆ ಸಂಬಂಧಿಸಿದ ವಿಶೇಷ ಆರ್ಥಿಕ ವಲಯ ಹಾಗೂ ಸಮುದ್ರ ಉತ್ಪನ್ನಗಳಿಗೆ ಸಂಬಂಧಿಸಿದ ವಿಶೇಷ ಆರ್ಥಿಕ ವಲಯ ಸ್ಥಾಪನೆಯಾದರೆ, ಜಿಲ್ಲೆಯ ಆರ್ಥಿಕ ಅಭಿವೃದ್ಧಿಗೆ ನಾಂದಿ ಸಿಗುತ್ತದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಕರಾವಳಿಯ ಪ್ರಗತಿಪರ ರೈತರಾದ ವಂಡ್ಸೆಯ ಉದಯಕುಮಾರ್ ಶೆಟ್ಟಿ, ಪೆರ್ಡೂರಿನ ಜಯಲಕ್ಷ್ಮೀ ಹೆಗ್ಡೆ, ಸುರತ್ಕಲ್ನ ಚಂದ್ರಶೇಖರ ಹೆಗ್ಡೆ, ಸದಾಶಿವ ಐತಾಳ್ ಹಾಗೂ ಉಡುಪಿಯ ಚಂದ್ರಶೇಖರ ನಾಯ್ಕರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಜಿಲ್ಲಾಧಿಕಾರಿ ಸ್ವರೂಪ್ ಟಿ.ಕೆ, ಕೃಷಿಕ ಸಮಾಜದ ಅಧ್ಯಕ್ಷ ಅಶೋಕ್ ಕುಮಾರ್ ಕೊಡ್ಗಿ, ಡಾ. ಸುನೀತಾ ಶೆಟ್ಟಿ, ಪೂರ್ಣಿಮಾ ಜೆ.ಸಿ., ವಿವೇಕ್ ಆರ್., ರಾಜು ಎಂ.ಎಸ್., ಎಂ.ಸಿ.ರೆಡ್ಡಪ್ಪ, ರವೀಂದ್ರ ಕುಮಾರ್ ಡಿ.ಎನ್., ಚಂದ್ರಶೇಖರ್ ನಾಯ್ಕ್, ಡಾ. ಬಿ.ಎಂ. ದುಷ್ಯಂತ್ ಕುಮಾರ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಬ್ರಹ್ಮಾವರ ವಲಯ ಸಂಶೋಧನಾ ಕೇಂದ್ರದ ಸಹ ಸಂಶೋಧನಾ ನಿರ್ದೇಶಕ ಡಾ. ಧನಂಜಯ ಬಿ. ಸ್ವಾಗತಿಸಿ, ಹಿರಿಯ ಕ್ಷೇತ್ರ ಅಧೀಕ್ಷಕ ಡಾ. ಶಂಕರ್ ಎಂ. ಮತ್ತು ಸಂತೋಷ ಶೆಟ್ಟಿ ನೀಲಾವರ ವಂದಿಸಿದರು.





