ಕುಣಿಗಲ್ ಪೊಲೀಸ್ ಠಾಣಾ ವ್ಯಾಪ್ತಿಯ ರಾಜ್ಯ ಹೆದ್ದಾರಿ 33ರ ದೊಡ್ಡಮಳವಾಡಿ ಸಮೀಪ ಭಾನುವಾರ ಆಟೋ ಮತ್ತು ಟ್ರ್ಯಾಕ್ಟರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೆಳಧರದ ಆಟೋ ಚಾಲಕ ತೆಜಸ್ ಕುಮಾರ್ (28) ಗಂಭೀರವಾಗಿ ಗಾಯಗೊಂಡಿದ್ದು, ಕುಣಿಗಲ್ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದೋಯ್ಯಲಾಗಿದೆ.
ಅಮೃತೂರು ಪೊಲೀಸ್ ಠಾಣಾ ವ್ಯಾಪ್ತಿಯ ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಚಾಕೇನಹಳ್ಳಿ ಬಳಿ ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ದ್ವಿಚಕ್ರ ವಾಹನ ಡಿಕ್ಕಿಯಾಗಿ ಪಾದಚಾರಿ ಚಾಕೆನಹಳ್ಳಿ ಗ್ರಾಮದ ಚಂದ್ರಪ್ಪ (55) ಸ್ಥಳದಲ್ಲೆ ಸಾವನ್ನಪ್ಪಿದ್ದು, ಗಂಭೀರವಾಗಿ ಗಾಯಗೊಂಡಿದ್ದ ದ್ವಿಚಕ್ರ ವಾಹನ ಸವಾರನನ್ನು ಬೆಳ್ಳೂರು ಕ್ರಾಸ್ ನ ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಭಾನುವಾರ ತಡರಾತ್ರಿ ಕುಣಿಗಲ್ ಪಟ್ಟಣದ ಹಳೆಯ ರಾಷ್ಟ್ರೀಯ ಹೆದ್ದಾರಿ 48ರ ಸಪ್ತಗಿರಿ ಆಸ್ಪತ್ರೆಯ ಬಳಿ ರಸ್ತೆದಾಟುತ್ತಿದ್ದ ಪಾದ ಚಾರಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ಕೆಳಗೆ ಬಿದ್ದ ಬಿಳಿದೇವಾಲಯ ಗ್ರಾಮದ ಬೈಕ್ ಸವಾರ ಮಂಜುನಾಥ್ (35) ಸ್ಥಳದಲ್ಲೆ ಸಾವನ್ನಪ್ಪಿದ್ದು ಗಂಭೀರವಾಗಿ ಗಾಯಗೊಂಡಿದ್ದು ಪಾದಚಾರಿಯನ್ನು ಸ್ಥಳಿಯರು ಆಸ್ಪತ್ರೆಗೆ ದಾಖಲಿಸಿದ್ದಾರೆ ಅಪಘಾತ ನಡೆದ ಸ್ಥಳಕ್ಕೆ ಆಂಬುಲೆನ್ಸ್ ಬಾರದ ಕಾರಣ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಳಿಕ ಸ್ಥಳಕ್ಕೆ ಬಂದ ಕುಣಿಗಲ್ ಪೊಲೀಸರು ಪರಿಸ್ಥಿತಿ ತಿಳಿಗೋಳಿಸಿ ಮೃತದೇಹವನ್ನು ಆಸ್ಪತ್ರೆಗೆ ಕೊಂಡೊಯ್ದರು. ಘಟನೆ ಸಂಬಂಧ ಅಮೃತೂರು ಹಾಗೂ ಕುಣಿಗಲ್ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಣಿಗಲ್ ಪಟ್ಟಣದಲ್ಲಿ ಅಪಘಾತ ಪ್ರಕರಣಗಳು ಹೆಚ್ಚುತ್ತಿದ್ದ ನಾಗರಿಕರ ಆತಂಕಕ್ಕೆ ಕಾರಣವಾಗಿದೆ. ಅಪಘಾತದಲ್ಲಿ ಸಾವನ್ನಪ್ಪುತ್ತಿರುವವರು ಬಹುತೆಕ ದ್ವಿಚಕ್ರ ವಾಹನ ಸವಾರರಾಗಿದ್ದು ಅಪಘಾತದ ವೇಳೆ ತಲೆಗೆ ಎಲ್ಮೇಟ್ ಧರಿಸದಿರುವುದು ಕಂಡುಬಂದಿದೆ.





